ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ನಡೆದ ಹತ್ಯಾಕಾಂಡದ ಸಂದರ್ಭದಲ್ಲಿ ಆರೋಪಿ ಅಂಕಿತ್ ದಾಸ್ ಮತ್ತು ಆಶಿಶ್ ಮಿಶ್ರಾ ಅವರ ಪರವಾನಗಿ ಪಡೆದ ಬಂದೂಕುಗಳಿಂದ ಗುಂಡು ಹಾರಿಸಲಾಗಿದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯವು ಮಂಗಳವಾರ (ನ.9) ದೃಢಪಡಿಸಿದೆ.
ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಶಾಂತಿಯುತವಾಗಿ ಸಾಗುತ್ತಿದ್ದ ರೈತರ ಮೇಲೆ ಕಾರು ಹರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ದೊಡ್ಡ ತಿರುವು ದೊರೆತಿದೆ.
ಗಲಾಟೆಯ ಸಂದರ್ಭದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಮಗ ಆಶಿಶ್ ಮಿಶ್ರಾ ಮತ್ತು ಅವರ ಸ್ನೇಹಿತ ಅಂಕಿತ್ ದಾಸ್ ಪಿಸ್ತೂಲ್ನಿಂದ ಗುಂಡು ಹಾರಿಸಿರುವುದು ವರದಿಯಲ್ಲಿ ದೃಢಪಟ್ಟಿದೆ. ಸದ್ಯ ಇಬ್ಬರೂ ಆರೋಪಿಗಳನ್ನು ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ
ಹತ್ಯಾಕಾಂಡದ ವೇಳೆ ಆಶಿಶ್ ಮಿಶ್ರಾ ಮತ್ತು ಅಂಕಿತ್ ದಾಸ್ ಹಲವು ಸುತ್ತು ಗುಂಡು ಹಾರಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು. ಬಳಿಕ ಲಖಿಂಪುರ ಪೊಲೀಸರು ಆಶಿಶ್ ಮಿಶ್ರಾ ಮತ್ತು ಅಂಕಿತ್ ಮಿಶ್ರಾ ಅವರ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು. ಅಕ್ಟೋಬರ್ 15ರಂದು ಎಲ್ಲಾ ಬಂದೂಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿತ್ತು.
ತನಿಖೆಗೆ ಕಳುಹಿಸಲಾದ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ವರದಿಗಳು ಬರಲಾರಂಭಿಸಿವೆ. ಅದರ ಆಧಾರದ ಮೇಲೆ ಮುಂದಿನ ತನಿಖೆ ನಡೆಸಲಾಗುವುದು ಎಂದು ಎಎಸ್ಪಿ ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ.
ಸೋಮವಾರ (ನ.8) ಈ ವಿಷಯದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಲಖಿಂಪುರ ಖೇರಿ ಹಿಂಸಾಚಾರದ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯ ಮೇಲ್ವಿಚಾರಣೆಗೆ ಯುಪಿ ಸರ್ಕಾರ ರಚಿಸಿರುವ ನ್ಯಾಯಾಂಗ ಆಯೋಗವನ್ನು ನಂಬುವುದಿಲ್ಲ ಎಂದು ತೀವ್ರ ಟೀಕೆ ಮಾಡಿತ್ತು. ಎಸ್ಐಟಿ ತನಿಖೆಯ ಸ್ಥಿತಿಗತಿ ವರದಿ ಬಗ್ಗೆಯೂ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನಿಖೆಯಲ್ಲಿ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತತೆಗಾಗಿ ಬೇರೆ ರಾಜ್ಯದ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರಿಂದ ಮೇಲ್ವಿಚಾರಣೆ ನಡೆಸಬೇಕು ಎಂದು ಹೇಳಿ ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 12 ಕ್ಕೆ ಮುಂದೂಡಿದೆ.
ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆ ನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು. ಇದುವರೆಗೆ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು