ಲಡಾಖ್ ಕೇಂದ್ರಾಡಳಿತ ಪ್ರದೇಶದ ಲೇಹ್ನಲ್ಲಿ ಏಪ್ರಿಲ್ 7ರಂದು (ನಾಳೆ) ‘ಬಾರ್ಡರ್ ಮಾರ್ಚ್’ಗೆ ಲೇಹ್ ಅಪೆಕ್ಸ್ ಬಾಡಿ (ಎಲ್ಎಬಿ) ಮತ್ತು ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ಕರೆ ನೀಡಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಹಾಗೆಯೇ ಮೊಬೈಲ್ ಇಂಟರ್ನೆಟ್ ವೇಗವನ್ನು 2ಜಿಗೆ ಇಳಿಸಲು ಆದೇಶಿಸಲಾಗಿದೆ.
ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂತೋಷ್ ಸುಖದೇವ ಅವರು ಜಿಲ್ಲೆಯಲ್ಲಿ ಸಿಆರ್ಪಿಸಿ 1973 ರ ಸೆಕ್ಷನ್ 144 ಅನ್ನು ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
#PashminaMarch, SUNDAY 7th APRIL
To those insisting on coming to Leh to join this March…
Come if you must, but ideally by 5th & no later than 6th April, for acclimatisation etc.
I'm finally able to say this as the weather is bit warmer now & guesthouses are also opening up.… pic.twitter.com/QM5aRRiGRT— Sonam Wangchuk (@Wangchuk66) April 2, 2024
ನಿಷೇಧಾಜ್ಞೆ ಹಿನ್ನೆಲೆ ಪೂರ್ವಾನುಮತಿ ಇಲ್ಲದೆ ಯಾವುದೇ ಮೆರವಣಿಗೆ, ರ್ಯಾಲಿ ನಡೆಸುವಂತಿಲ್ಲ. ವಾಹನ, ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಸಾರ್ವಜನಿಕ ಸಭೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ಹೇಳಿದ್ದಾರೆ. ಆದೇಶದ ಉಲ್ಲಂಘನೆಯು ಐಪಿಸಿಯ ಸೆಕ್ಷನ್ 188 ರ ಅಡಿಯಲ್ಲಿ ಶಿಕ್ಷಾರ್ಹ ಕ್ರಮಕ್ಕೆ ಅರ್ಹವಾಗಿದೆ ಎಂದು ಹೇಳಿದ್ದಾರೆ.
ಲೇಹ್ ಆಡಳಿತವು ಮೊಬೈಲ್ ಇಂಟರ್ನೆಟ್ ವೇಗವನ್ನು 2ಜಿ ಮಟ್ಟಕ್ಕೆ ತಾತ್ಕಾಲಿಕವಾಗಿ ಕಡಿಮೆ ಮಾಡಲು ನಿರ್ಧರಿಸಿದೆ. “ತಕ್ಷಣದಿಂದ ಜಾರಿಗೆ ಬರುವಂತೆ, 3ಜಿ, 4ಜಿ, 5ಜಿ ಮತ್ತು ಸಾರ್ವಜನಿಕ ವೈ-ಫೈ ಸೌಲಭ್ಯಗಳನ್ನು ಒಳಗೊಂಡಂತೆ ಮೊಬೈಲ್ ಡೇಟಾ ಸೇವೆಗಳನ್ನು ಲೇಹ್ನಲ್ಲಿ 2ಜಿಗೆ ಇಳಿಸಲಾಗುವುದು. ಇಂಟರ್ನೆಟ್ ವೇಗದಲ್ಲಿನ ಕಡಿತವು ಏಪ್ರಿಲ್ 6ರಂದು ಸಂಜೆ 6 ಗಂಟೆಯಿಂದ ಏಪ್ರಿಲ್ 7ರಂದು ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ” ಎಂದು ಲಡಾಖ್ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಶಿವ ದರ್ಶನ್ ಸಿಂಗ್ ಹೊರಡಿಸಿದ ಆದೇಶದಲ್ಲಿ ಹೇಳಿದ್ದಾರೆ.
ಲಡಾಖ್ಗೆ ರಾಜ್ಯತ್ವ ನೀಡಲು, ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಲು ಆಗ್ರಹಿಸಿ ಪ್ರತಿಭಟನೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಕೇಂದ್ರದೊಂದಿಗಿನ ಹಲವಾರು ಸುತ್ತಿನ ಮಾತುಕತೆ ವಿಫಲವಾಗಿದ್ದು, ಈಗ ಪ್ರತಿಭಟನೆಯ ಕಾವು ಅಧಿಕವಾಗುತ್ತಿದೆ. 2019ರ ಲೋಕಸಭೆ ಚುನಾವಣೆ ಮತ್ತು 2020ರ ಸ್ಥಳೀಯ ಹಿಲ್ ಕೌನ್ಸಿಲ್ ಚುನಾವಣೆಯ ಸಂದರ್ಭ ಕೇಂದ್ರಾಡಳಿತ ಪ್ರದೇಶಕ್ಕೆ 6ನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆಯ ಬಗ್ಗೆ ಬಿಜೆಪಿ ಭರವಸೆ ನೀಡಿತ್ತು. 2019ರಲ್ಲಿ ಲಡಾಖ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈವರೆಗೂ ಭರವಸೆಯನ್ನು ಈಡೇರಿಸಿಲ್ಲ. ಈ ಹಿನ್ನೆಲೆ ಅಲ್ಲಿನ ಜನರು ಹೋರಾಟಕ್ಕೆ ಧುಮುಕಿದ್ದಾರೆ.
ಇದನ್ನೂ ಓದಿ: ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.18ರವರೆಗೆ ವಿಸ್ತರಣೆ