ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಎಂಬ ಸಂದೇಶ ಹರಡಿದ ಕಿಡಿಗೇಡಿಗಳನ್ನು ಮಟ್ಟ ಹಾಕಬೇಕಾಗಿದ್ದು, ಈ ವಿಷಯದಲ್ಲಿ ಸರಕಾರ ಸುಮ್ಮನಿರಬಾರದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದು, ಈ ಕೃತ್ಯಗಳಲ್ಲಿ ಶಾಸಕರು, ಸಚಿವರಿದ್ದರೂ ಬಂಧಿಸಿ, ಸಮಾಜ ಒಡೆಯುವವರಿಗೆ ಬಹಿಷ್ಕಾರ ಹಾಕಿ ಎಂದು ಮಂಗಳವಾರ ಬೆಂಗಳೂರಿನಲ್ಲಿ ಒತ್ತಾಯಿಸಿದ್ದಾರೆ.
ವಿಧಾನಸೌಧ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಇಷ್ಟೆಲ್ಲಾ ಆಗಿದ್ದರೂ ಸರಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಎಲ್ಲವನ್ನೂ ನೋಡಿಕೊಂಡು ಮುಖ್ಯಮಂತ್ರಿಗಳು ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ
“ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ಒಂದು ಸಮುದಾಯಕ್ಕೆ ಮೀಸಲಲ್ಲ. ಆರೂವರೆ ಕೋಟಿ ಕನ್ನಡಿಗರಿಗೆ ಸೇರಿದವರು. ಎಲ್ಲರ ರಕ್ಷಣೆ ಸರಕಾರದ ಹೊಣೆ. ಒಂದು ಸಮುದಾಯವನ್ನು ರಕ್ಷಣೆ ಮಾಡಿಕೊಂಡು ಸರಕಾರ ನಡೆಸಲು ಆಗದು. ಇಂತದ್ದನ್ನು ಕನ್ನಡಿಗರು ಸಹಿಸುವುದಿಲ್ಲ. ಅವರನ್ನು ಕಿತ್ತು ಒಗೆಯುತ್ತಾರೆ” ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
“ನಾನು ವಾಟ್ಸಪ್ ನಲ್ಲಿ ಬಂದ ಈ ಸಂದೇಶವನ್ನು ಗಮನಿಸಿದೆ. ಇಂಥ ಕಿಡಿಗೇಡಿ ಸಂದೇಶಗಳನ್ನು ಯಾರು ಹರಡುತ್ತಿದ್ದಾರೆ? ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಮಟ್ಟ ಹಾಕಬೇಕು. ಒಂದು ವೇಳೆ ಶಾಸಕರು, ಸಚಿವರೇ ಇದ್ದರೂ ಅವರನ್ನು ಬಂಧಿಸಬೇಕು ಹಾಗೂ ಅವರಿಗೆ ಜನರೇ ಬಹಿಷ್ಕಾರ ಹಾಕಬೇಕು” ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ಮುಸ್ಲಿಂ ಸಮುದಾಯದ ವ್ಯಾಪಾರಗಳಿಗೆ ನಿಷೇಧ ಹೇರಬೇಕು ಎಂದು ಜನರಿಗೆ ತಲೆ ಕೆಡಿಸುವ ಕೆಲಸ ಆಗುತ್ತಿದೆ. ಹಿಂದುಗಳ ಅಂಗಡಿಗಳಿಗೆ ಮಾತ್ರ ಹೋಗಿ ಅಂತ ಸಂದೇಶ ಹರಡುತ್ತಿದ್ದಾರೆ. ಇವರು ನಮ್ಮ ದೇಶವನ್ನು ಎಲ್ಲಿಗೆ ಒಯ್ಯುತ್ತಿದ್ದಾರೆ? ಸರ್ವ ಜನಾಂಗದ ತೋಟವನ್ನು ಸರ್ವನಾಶ ಮಾಡುತ್ತಿದ್ದಾರೆ. ಇಂತವರನ್ನು ಸುಮ್ಮನೆ ಬಿಡಬಾರದು. ಹಿಂದೂಗಳ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ ಎಂದರೆ ಅರ್ಥವೇನು?” ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
“ನಾಡಿನ ಜನರು ಈ ಪರಿಸ್ಥಿತಿ ಅನುಭವಿಸಲಿಕ್ಕೆ ಒಂದು ಕಡೆ ಕಾಂಗ್ರೆಸ್, ಮತ್ತೊಂದು ಕಡೆ ಬಿಜೆಪಿಯವರೆ ಕಾರಣ. ಈ ಕಾರಣಕ್ಕೆ ನಾನು ಹಿಂದೂ ಸಮುದಾಯದ ಕೆಲ ಯುವಕರಿಗೆ ಕೈ ಮುಗಿದು ರಾಜ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಹೇಳುತ್ತೇನೆ. ರಾಜಕೀಯಕ್ಕಾಗಿ ಮನಸುಗಳನ್ನು ಕೆಡಿಸುವ ಕಿಡಿಗೇಡಿಗಳ ಮಾತು ಕೇಳಬೇಡಿ. ಯಾರು ಕೂಡ ಇಲ್ಲಿ ಶಾಶ್ವತ ಅಲ್ಲ. ಕರ್ನಾಟಕ ಶಾಂತಿಯ ತೋಟ, ಇದನ್ನು ಹಾಳು ಮಾಡಬೇಡಿ” ಎಂದು ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್. ವಿಶ್ವನಾಥ್ ಆಕ್ರೋಶ
“ಬಿಜೆಪಿಯವರು ರಾಜ್ಯವನ್ನು ಕೆಟ್ಟ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಈ ರಾಜ್ಯದಲ್ಲಿ ಸರ್ಕಾರ ಎನ್ನುವುದು ಇದೆಯಾ? ಏನು ಮಾಡುತ್ತಿದೆ ಸರ್ಕಾರ? ಸಿಎಂ ವಿರುದ್ಧ ಮಾತಾಡಿದ್ದಕ್ಕೆ ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಇಂಥ ವಿಚಾರಗಳ ಬಗ್ಗೆ ಪ್ರಚೋದನೆ ಮಾಡುವವರನ್ನು ಕೂಡ ಅರೆಸ್ಟ್ ಮಾಡಿ. ಈ ರೀತಿಯಲ್ಲಿ ಪ್ರಚೋದನೆ ಮಾಡಿದರೆ ಶಾಸಕನೇ ಆಗಿರಲಿ, ಸಚಿವನೇ ಆಗಿರಲಿ ಅವರನ್ನು ಕೂಡ ಅರೆಸ್ಟ್ ಮಾಡಿ” ಎಂದು ಅವರು ಆಗ್ರಹಿಸಿದ್ದಾರೆ.
“ಸಮಾಜವನ್ನು ಒಡೆಯುವ ಇವರು ದೇಶ ಉಳಿಸುವವರಲ್ಲ. ದೇಶ ಉಳಿಸುವವರು ಜನರು, ಮುಗ್ಧ ಪ್ರಜೆಗಳು. ನಾನು ಯುವಕರಿಗೆ ಹೇಳುತ್ತೇನೆ, ಯುವಕರು ಇದಕ್ಕೆ ಬಲಿಯಾಗಬಾರದು. ಇದರಿಂದ ನಿಮ್ಮ ಭವಿಷ್ಯ ರೂಪಿಸಲು ಆಗಲ್ಲ. ಹಿಂದೂ ಯುವಕರಿಗೆ ಕೈ ಮುಗಿದು ಹೇಳುತ್ತೇನೆ. ರಾಜ್ಯವನ್ನು ಹಾಳು ಮಾಡಿಕೊಳ್ಳಬೇಡಿ” ಎಂದು ಅವರು ಕಿವಿಮಾತು ಹೇಳಿದ್ದಾರೆ.
“ಎಲ್ಲರೂ ಒಂದಲ್ಲ ಒಂದು ದಿನ ಮಣ್ಣಿಗೆ ಹೋಗುತ್ತಾರೆ. ಕಿಡಿಗೇಡಿಗಳು ಕೂಡ ಮಣ್ಣಿಗೆ ಹೋಗುತ್ತಾರೆ. ಕರ್ನಾಟಕ ರಾಜ್ಯ ಶಾಂತಿಯ ತೋಟ, ಹಾಳು ಮಾಡಬೇಡಿ. ಇಂತಹ ವ್ಯಕ್ತಿಗಳನ್ನು ಕರ್ನಾಟಕದ ಜನರು ಬಹಿಷ್ಕಾರ ಮಾಡಬೇಕು. ಸಮಾಜದಿಂದ ಹೊರ ಹಾಕಬೇಕು. ಇಲ್ಲದಿದ್ದರೆ ಮುಂದೆ ಕರ್ನಾಟಕಕ್ಕೆ ಒಳ್ಳೆಯ ದಿನಗಳು ಬರಲ್ಲ” ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.
“ರಾಜ್ಯದಲ್ಲಿ ಇಂಥ ಕೃತ್ಯಗಳು ನಡೆಯುತ್ತಿದ್ದರೆ ಸದನದಲ್ಲಿ ಸಭಾಧ್ಯಕ್ಷರು ಚುನಾವಣೆ ಸುಧಾರಣೆ ಬಗ್ಗೆ ಚರ್ಚೆ ಇಟ್ಟುಕೊಂಡಿದ್ದಾರೆ. ಯಾವ ಪುರುಷಾರ್ಥಕ್ಕೆ ಈ ಚರ್ಚೆ? ನನಗೆ ಈ ಕಲಾಪದಲ್ಲಿ ಭಾಗಿಯಾಗುವ ಉದ್ದೇಶ ಇರಲಿಲ್ಲ. ಆದರೆ ಇಂಥ ಸಮಾಜಘಾತುಕ ಸಂದೇಶಗಳ ಬಗ್ಗೆ, ಇವುಗಳ ಹಿಂದೆ ಇರುವವರನ್ನು ಹೊರಗೆ ಎಳೆಯಬೇಕು ಎನ್ನುವ ಬಗ್ಗೆ ಮಾತನಾಡಲು ಕಲಾಪಕ್ಕೆ ಬಂದೆ. ಸದನದಲ್ಲಿ ಇಂಥ ವಿಚಾರ ಚರ್ಚೆ ಆಗಬೇಕು” ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


