ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು, ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ನಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ’ ವಿಜೇತ ಬಾನು ಮುಷ್ತಾಕ್ ಮತ್ತು ದೀಪಾ ಭಸ್ತಿ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.
ತಮ್ಮ ಕತೆ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ ಹಾಗೂ ದೀಪಾ ಭಸ್ತಿ ಅವರಿಗೆ ತಲಾ 10 ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.
ಬಾನು ಮುಷ್ತಾಕ್ ಅವರ ಕತೆಗಳನ್ನು ಇಂಗ್ಲಿಷ್ನಲ್ಲಿ ಪ್ರಕಟಿಸಲು ಮತ್ತು ಅನುವಾದಕ್ಕೆ ಸರ್ಕಾರದಿಂದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ಸಿಎಂ ಹೇಳಿದರು.
ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಪಡೆದಿರುವುದು ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.
ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ ಎಂದು ಶ್ಲಾಘಿಷಿಸಿದರು.
ಕವಿರಾಜಮಾರ್ಗದಲ್ಲಿ ‘ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು’ ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ‘ಮನುಷ್ಯ ಜಾತಿ ತಾನೊಂದೇ ವಲಂ’ ಎಂದಿದ್ದಾರೆ, ಬಸವಣ್ಣನವರು ‘ಇವ ನಮ್ಮವ’ ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.
ಕಲಬುರಗಿ | ಮುಸ್ಲಿಮರ ಸಾಮೂಹಿಕ ಹತ್ಯೆಗೆ ಕರೆ ನೀಡಿದ ಬಿಜೆಪಿ ನಾಯಕ; ಎಫ್ಐಆರ್ ದಾಖಲು


