ಜಾರ್ಖಂಡ್ನಲ್ಲಿ ನವೆಂಬರ್ ೩೦ರಿಂದ ಡಿಸೆಂಬರ್ ೨೦ರವರೆಗೆ ಐದು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಒಟ್ಟು ೮೨ ವಿಧಾನಸಭೆ ಕ್ಷೇತ್ರಗಳಿದ್ದು, ಈಗಾಗಲೇ ಮೈತ್ರಿ, ಸ್ಥಾನ ಹಂಚಿಕೆ ಕಸರತ್ತು ನಡೆದಿದೆ. ಈ ಹಿಂದೆ ಎಲ್ಜೆಪಿ ಮತ್ತು ಬಿಜೆಪಿ ಮೈತ್ರಿ ಮೂಲಕ ಚುನಾವಣೆ ಎದುರಿಸಿತ್ತು. ಆದರೆ ಈ ಬಾರಿ ಬಿಜೆಪಿ ಸಖ್ಯ ತೊರೆದಿರುವ ಎಲ್ಜೆಪಿ (ಲೋಕ ಜನಶಕ್ತಿ ಪಕ್ಷ ) ಸ್ವತಂತ್ರವಾಗಿ ಚುನಾವಣೆ ಎದುರಿಸುವುದಾಗಿ ಹೇಳಿದೆ.
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಪ್ರಭಾವ ಜಾಖಂಡ್ನಲ್ಲಿ ಬೀರಿದೆ. ಈ ಹಿಂದೆ ಮೈತ್ರಿ ಮೂಲಕ ಚುನಾವಣೆ ಎದುರಿಸಲು ಸಜ್ಜಾಗಿದ್ದ ಎಲ್ಜೆಪಿ ಇದ್ದಕ್ಕಿದ್ದಂತೆ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ತೆಗೆದುಕೊಂಡಿದೆ. ಮೈತ್ರಿ ಮಾಡಿಕೊಂಡರೆ ಯಾವ ಪರಿಣಾಮ ಎದುರಿಸಬೇಕಾಗಬಹುದು ಎಂಬುದನ್ನು ಮೊದಲೇ ಊಹಿಸಿರುವ ಎಲ್ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ: ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಶಿಫಾರಸು: ಮುಂದೇನು..?
ಇನ್ನು ಚಿರಾಗ್ ಪಾಸ್ವಾನ್ ತಂದೆ ಕೇಂದ್ರ ಸಚಿವ ರಾಮ್ವಿಲಾಸ್ ಪಾಸ್ವಾನಾ ಅವರ ಪುತ್ರ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಿರಾಗ್, ಇದು ವಿಧಾನಸಭೆ ಚುನಾವಣೆ. ಇಲ್ಲಿ ಮೈತ್ರಿ ಮಾಡಿಕೊಳ್ಳಬೇಕೋ, ಬೇಡವೋ ಎಂಬುದನ್ನು ರಾಜ್ಯ ನಾಯಕರು ನಿರ್ಧರಿಸುತ್ತಾರೆ. ಬಿಜೆಪಿ ದೊಡ್ಡಣ್ಣನ ನೀತಿಯನ್ನು ಸಹಿಸಲು ಸಾಧ್ಯವಿಲ್ಲ. ೫೦ ಕ್ಷೇತ್ರಗಳಲ್ಲಿ ಎಲ್ಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಸಂಜೆಯೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಇತ್ತ ಬಿಹಾರ್ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕೂಡ ಜಾರ್ಖಂಡ್ನಲ್ಲಿ ಸ್ವತಂತ್ರವಾಗಿ ಕಣಕ್ಕಿಳಿಯಲು ನಿರ್ಧರಿಸಿದೆ. ಈಗಾಗಲೇ ಬಿಜೆಪಿ ೫೨ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೀಡಿರುವ ಹೊಡೆತ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದೆ. ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಇತರೆ ಪಕ್ಷಗಳ ಮೇಲೂ ಬೀರಿದ್ದು, ನಿಮ್ಮ ಸಹವಾಸವೇ ಬೇಡ ಎನ್ನುವ ನಿರ್ಧಾರಕ್ಕೆ ಬಂದಿವೆ.