ಲೋಕಸಭೆ ಚುನಾವಣೆಗೆ ಮೈತ್ರಿ ಪಕ್ಷ ಜೆಡಿಎಸ್ಗೆ ಬಿಜೆಪಿ ಮೂರು ಕ್ಷೇತ್ರಗಳನ್ನು ಬಿಟ್ಟು ಕೊಟ್ಟಿದೆ. ಈ ಮೂಲಕ ಹಲವು ದಿನಗಳ ಕುತೂಹಲಕ್ಕೆ ತೆರೆ ಎಳೆದಿದೆ.
ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ಗೆ ನೀಡಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ.
ಸುಮಲತಾಗೆ ಕೈ ತಪ್ಪಿದ ಟಿಕೆಟ್ :
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಿದ್ದತೆಯಲ್ಲಿ ಸುಮಲತಾ ಇದ್ದರು. ಆದರೆ, ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡುವ ಮೂಲಕ ಸುಮಲತಾಗೆ ನಿರಾಸೆ ಮೂಡಿಸಿದೆ. ಹಾಗಾಗಿ, ಸುಮಲತಾ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ.
ಸುಮಲತಾ ಭವಿಷ್ಯ ಉಜ್ವಲವಾಗಲಿ: ರಾಧಾ ಮೋಹನ್ ದಾಸ್:
ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದೀರಿ, ಹಾಗಾದರೆ ಸುಮಲತಾ ಅವರಿಗೆ ಯಾವ ಸ್ಥಾನ ಕೊಡುತ್ತೀರಿ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ಸುಮಲತಾ ಅವರ ಭವಿಷ್ಯ ಉಜ್ವಲವಾಗಲಿ ಎಂದು ಜಾರಿಕೊಂಡಿದ್ದಾರೆ.
ಹೈಕಮಾಂಡ್ ಕೋರ್ಟ್ನಲ್ಲೇ ತೀರ್ಮಾನವಾಗಲಿ : ಆರ್ ಅಶೋಕ್
ಸುಮಲತಾ ಅವರಿಗೆ ಟಿಕೆಟ್ ಕೈ ತಪ್ಪಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕರ ಆರ್. ಅಶೋಕ್, ಸುಮಲತಾ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ವಿಷಯ ಈಗ ಹೈಕಮಾಂಡ್ ಅಂಗಳದಲ್ಲಿದೆ. ಅದು ಆ ಕೋರ್ಟ್ನಲ್ಲೇ ತೀರ್ಮಾನ ಆಗಲಿ ಎಂದಿದ್ದಾರೆ.
ಕೋಲಾರದಲ್ಲಿ ಮುನಿಸ್ವಾಮಿಗೆ ನಿರಾಸೆ :
ಕೋಲಾರ ಕ್ಷೇತ್ರವನ್ನೂ ಬಿಜೆಪಿ ಜೆಡಿಎಸ್ಗೆ ಬಿಟ್ಟು ಕೊಟ್ಟಿರುವ ಹಿನ್ನೆಲೆ, ಹಾಲಿ ಸಂಸದ ಮುನಿಸ್ವಾಮಿಗೆ ಟಿಕೆಟ್ ಕೈ ತಪ್ಪಿದಂತಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುನಿಸ್ವಾಮಿ, ನಾನು ಬಿಜೆಪಿಯ ಕಟ್ಟಾಳು. ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುವ ಯೋಚನೆಯೆಲ್ಲ ಇಲ್ಲ. ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಎನ್ಡಿಎ ಅಭ್ಯರ್ಥಿ ಗೆಲ್ಲಿಸುವುದು ನನ್ನ ಗುರಿ ಎಂದಿದ್ದಾರೆ.
ಹಾಸನದಲ್ಲಿ ಬಂಡಾಯ:
ಹಾಸನ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ಗೆ ಬಿಟ್ಟು ಕೊಟ್ಟಿದೆ. ಇಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಕಣಕ್ಕಿಳಿಯುವುದು ದಟ್ಟವಾಗಿದೆ. ಆದರೆ, ಮಾಜಿ ಶಾಸಕ ಪ್ರೀತಂಗೌಡ ಬೆಂಬಲಿಗ ಕಿರಣ ಕುಮಾರ್ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಬಿರುಸಿನ ಪ್ರಚಾರವನ್ನೂ ಆರಂಭಿಸಿದ್ದಾರೆ. ಇದು ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇದನ್ನೂ ಓದಿ : ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಅರ್ಜಿ ವಜಾ