ಲೋಕಸಭೆ ಚುನಾವಣೆಯ ಜನಾದೇಶವು ವಿಭಜನೆ ಮತ್ತು ದ್ವೇಷ ರಾಜಕೀಯದ ‘ನಿರ್ಣಾಯಕ ನಿರಾಕರಣೆ’. ಇಂಡಿಯಾ ಒಕ್ಕೂಟ ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ” ಕಾಂಗ್ರೆಸ್ ಮತ್ತೆ ಪುಟಿದೇಳುತ್ತಿರುವ ಸಂದರ್ಭದ ಕೆಲ ರಾಜ್ಯಗಳಲ್ಲಿ ತನ್ನ ಸಾಮರ್ಥ್ಯ ಮತ್ತು ನಿರೀಕ್ಷೆಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿಲ್ಲ. ಅಲ್ಲಿ ಸ್ವಲ್ಪ ಸಮಯ ಬೇಕಾಗಬಹುದು ಎಂದಿದ್ದಾರೆ.
“ನಾವು ಈ ಹಿಂದೆ ವಿಧಾನಸಭಾ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಸರ್ಕಾರ ರಚಿಸಿದ್ದ ರಾಜ್ಯಗಳಲ್ಲಿಯೂ ನಮ್ಮ ಸಾಧನೆ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಅಂತಹ ರಾಜ್ಯಗಳ ಬಗ್ಗೆ ಪ್ರತ್ಯೇಕ ಚರ್ಚೆ ಶೀಘ್ರದಲ್ಲೇ ನಡೆಸಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.
“ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಪರ ಒಲವು ಹೊಂದಿರುವ ರಾಜ್ಯಗಳಲ್ಲಿ ನಮಗೆ ಇನ್ನೂ ಅವಕಾಶವಿದೆ. ಈ ಅವಕಾಶಗಳನ್ನು ನಾವು ನಮ್ಮ ಸ್ವಂತ ಲಾಭಕ್ಕಾಗಿ ಬಳಸದೆ, ನಮ್ಮ ಜನರ ಅನುಕೂಲಕ್ಕಾಗಿ ಬಳಸಿಕೊಳ್ಳಬೇಕು. ಈ ಕಾರ್ಯಯವನ್ನು ಶೀಘ್ರದಲ್ಲೇ ಮಾಡಲಾಗುವುದು” ಎಂದು ಹೇಳಿದ್ದಾರೆ.

“ಪಕ್ಷ ಅಧಿಕಾರದಲ್ಲಿದ್ದರೂ, ಇಲ್ಲದಿದ್ದರೂ ಜನರ ನಡುವೆ 365 ದಿನದ 24 ಗಂಟೆಯೂ ಕೆಲಸ ನಿರ್ವಹಿಸಲಿದೆ” ಎಂದು ಖರ್ಗೆ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡಿದ ನಾಯಕರು ಮತ್ತು ಕಾರ್ಯಕರ್ತರ ಇಚ್ಛಾಶಕ್ತಿ ಮತ್ತು ಸಂಕಲ್ಪವನ್ನು ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ ಅಭಿನಂದಿಸಿದೆ.
“ಆಡಳಿತ ಪಕ್ಷದ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವುಗಳ ವಿರುದ್ಧ ಜನರು ಧ್ವನಿ ಎತ್ತಿದ್ದಾರೆ. ಕಳೆದ 10 ವರ್ಷಗಳ ರಾಜಕೀಯವನ್ನು ತಿರಸ್ಕರಿಸಿದ್ದಾರೆ. ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.
“ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ನಾವು ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಮಣಿಪುರದ ಎರಡೂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲೂ ಪಕ್ಷ ಸ್ಥಾನಗಳನ್ನು ಪಡೆದುಕೊಂಡಿದೆ” ಎಂದಿದ್ದಾರೆ.
“ಮಹಾರಾಷ್ಟ್ರದಲ್ಲಿ ನಾವು ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದೇವೆ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಸಮಾಜದ ಎಲ್ಲಾ ವರ್ಗಗಳ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದಲ್ಲದೆ, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯವಿರುವ ಸ್ಥಾನಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಸ್ಥಾನಗಳಲ್ಲಿಯೂ ಪಕ್ಷವು ಹೆಚ್ಚಳ ಕಂಡಿದೆ” ಎಂದು ಹೇಳಿದ್ದಾರೆ
ನಗರ ಪ್ರದೇಶಗಳಲ್ಲೂ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ತೋರಿಸಬೇಕಿದೆ. ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಈ ಚುನಾವಣೆಯಲ್ಲಿ ಕೆಲಸ ಮಾಡಿದೆ. ಆಯಾ ರಾಜ್ಯಗಳಲ್ಲಿ ಪಕ್ಷಗಳು ತನ್ನ ಶಕ್ತಿ ತೋರಿಸಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳಿಗೂ ನೆರವಾಗಿದೆ. ನಾವು ಚುನಾವಣಾ ಪ್ರಚಾರದ ಸಂದರ್ಭ ಪ್ರಸ್ತಾಪಿಸಿದ ವಿಷಯಗಳು ಭಾರತದ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ. ನಾವು ಸಂಸತ್ತಿನಲ್ಲಿ ಮತ್ತು ಹೊರಗೆ ಆ ವಿಷಯಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸಬೇಕು ಎಂದಿದ್ದಾರೆ.
ದೆಹಲಿಯ ಅಶೋಕ ಹೋಟೆಲ್ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಪಕ್ಷದ ಹಿರಿಯ ನಾಯಕರು ಮತ್ತು ಸಿಡಬ್ಲ್ಯೂಸಿ ಸದಸ್ಯರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪಕ್ಷದ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಿ ಸಂಘಟನೆ ಕ್ರಮಗಳನ್ನು ಸೂಚಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಸೇರಿದಂತೆ ಕಾಂಗ್ರೆಸ್ನ ಪ್ರಮುಖರು, ಇತರ ನಾಯಕರು ಚರ್ಚೆಯಲ್ಲಿ ಭಾಗವಹಿಸಿದ್ದರು.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಇಂದು (ಜೂನ್ 8) ಸಂಜೆ 5.30ಕ್ಕೆ ಲೋಕಸಭೆ ಮತ್ತು ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಲಿದೆ.
ಇದನ್ನೂ ಓದಿ : ಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ


