Homeಕರ್ನಾಟಕ‘ಲವ್‌ ಜಿಹಾದ್‌’ಗೆ ‘ಲವ್‌ ಕೇಸರಿ’ ಅಂತೆ, ವಿರಕ್ತಿಯ ಕೇಸರಿ ಮತ್ತು ಲವ್ ಹೇಗೆ ಕೂಡುತ್ತವೆ?: ದೇಮ

‘ಲವ್‌ ಜಿಹಾದ್‌’ಗೆ ‘ಲವ್‌ ಕೇಸರಿ’ ಅಂತೆ, ವಿರಕ್ತಿಯ ಕೇಸರಿ ಮತ್ತು ಲವ್ ಹೇಗೆ ಕೂಡುತ್ತವೆ?: ದೇಮ

“ಇಂದು ಮಾಧ್ಯಮ ಕ್ಷೇತ್ರವು ಸಮಸ್ಯೆಗಳನ್ನು ವರದಿ ಮಾಡುತ್ತಿವೆಯೊ? ಅಥವಾ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿವೆಯೊ ಗೊತ್ತೇ ಆಗುತ್ತಿಲ್ಲ”

- Advertisement -
- Advertisement -

“ಇತ್ತೀಚೆಗೆ ’ಲವ್ ಕೇಸರಿ’ ಅಂತ ರಂಗಪ್ರವೇಶ ಮಾಡಿದೆ. ಕೇಸರಿ ಅಂದರೆ ವಿರಕ್ತ! ಈ ಲವ್ ಮತ್ತು ಆ ವಿರಕ್ತಿ ಹೇಗೆ ಕೂಡುತ್ತವೆ? ವಿರಕ್ತಿ ಇರುವವರನ್ನು ಲವ್ ಮಾಡಿದರೆ, ಮಾಡಿದವರ ಪಾಡೇನು? ಜೊತೆಗೆ ಇದು ಗಂಡಸರ ಸಮಸ್ಯೆಯಾಗಿಬಿಟ್ಟಿದೆ” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಹೇಳಿದರು.

ಜನನುಡಿ ಬಳಗ ಹಾಗೂ ಅಹರ್ನಿಶಿ ಪ್ರಕಾಶನದ ವತಿಯಿಂದ ಶನಿವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮುಂಗಾರು ಪತ್ರಿಕೆಯ ಸಂಪಾದಕ ವಡ್ಡರ್ಸೆ ರಘುರಾಮ ಶೆಟ್ಟರ ಬರೆಹಗಳ ಸಂಕಲನ- ಬೇರೆಯೇ ಮಾತು- ಕೃತಿ ಬಿಡುಗಡೆ ಸಮಾರಂಭ’ದಲ್ಲಿ ಅವರು ಮಾತನಾಡಿದರು.

ಟಿ.ವಿ.ಯಲ್ಲಿ ಕತ್ತಿ ಝಳಪಿಸುತ್ತಾ ’ಲವ್ ಕೇಸರಿ ಸುದ್ದಿ’ ಬರುತ್ತಿತ್ತು. ’ಲವ್ ಜಿಹಾದ್’ಅನ್ನು ’ಅವರು’ ಮಾಡುತ್ತಾರೆಂದು ’ಇವರೇ’ ಆರೋಪಿಸಿ ಅದಕ್ಕೆ ಪ್ರತಿಯಾಗಿ ’ಇವರು’ ಲವ್ ಕೇಸರಿ ಮಾಡಿ ಎಂದು ಅಬ್ಬರಿಸುತ್ತಿದ್ದರು. ’ಅವರು’ ಕಳ್ಳತನ ಮಾಡುತ್ತಾರೆಂದು ’ಇವರೇ’ ಆರೋಪಿಸಿ ’ಇವರು’ ದರೋಡೆ ಮಾಡಬೇಕು ಎಂಬಂತಿತ್ತು ಆ ವಾದ ಎಂದು ಅಭಿಪ್ರಾಯಪಟ್ಟರು.

“ಹೆಂಗಪ್ಪ ಇದು? ’ಲವ್ ಜಿಹಾದ್’ ಅಂತೆ, ಲವ್ ಅಂದರೆ ಎಲ್ಲರಿಗೂ ಗೊತ್ತು. ಜಿಹಾದ್ ಅಂದರೆ ಧರ್ಮ ಯುದ್ಧ ಅಂತೆ! ನಿಜವಾದ ಲವ್ ಧರ್ಮವನ್ನೂ ಮೀರುತ್ತದೆ. ಇನ್ನು ಲವ್ ಮತ್ತು ಯುದ್ಧ ಅಜಗಜಾಂತರ ಕ್ರಿಯೆಗಳು. ಹಾಗೇ ಇತ್ತೀಚೆಗೆ ’ಲವ್ ಕೇಸರಿ’ ಅಂತ ರಂಗಪ್ರವೇಶ ಮಾಡಿದೆ. ಕೇಸರಿ ಅಂದರೆ ವಿರಕ್ತ! ಈ ಲವ್ ಮತ್ತು ಆ ವಿರಕ್ತಿ ಹೇಗೆ ಕೂಡುತ್ತವೆ?” ಎಂದು ಪ್ರಶ್ನಿಸಿದರು.

“ಇದು ಗಂಡಸರ ಸಮಸ್ಯೆಯಾಗಿಬಿಟ್ಟಿದೆ. ಹೆಣ್ಣೆಂದರೆ ಮನಸ್ಸೆ ಇಲ್ಲದ ಕೀಲುಗೊಂಬೆ ಅಂತ ಈ ಗಂಡಸರು ಅಂದುಕೊಂಡಂತಿದೆ- ಹೀಗೆಲ್ಲಾ ಧರ್ಮ ಸೂಕ್ಷ್ಮತೆಯ ಚಿಂತೆ ಮಾಡುತ್ತಾ ನನ್ನ ತಲೆ ಕೆಟ್ಟು ಎಕ್ಕುಟ್ಟೋಗಿತ್ತು” ಎಂದು ತಿಳಿಸಿದ ಅವರು, ಕಿಡಿಗೇಡಿ ಹುಡುಗನೊಬ್ಬನ ಕವನ ಓದಿದರು.

ಈ ಟೈಮ್‍ನಲ್ಲೇ ನನಗೊಬ್ಬ ಕಿಡಿಗೇಡಿ ಹುಡುಗ ಫೋನ್ ಮಾಡಿ ತನ್ನ ಪರಿಚಯ ಮಾಡಿಕೊಂಡು, ‘ಸರ್, ನಾನು ನಿಮ್ಮ ಅಭಿಮಾನಿ’ ಅಂದ. ‘ಆಯ್ತಪ್ತ ಆಯ್ತು ಏನ್ ಸಮಾಚಾರ?’ ಎಂದೆ. ‘ನಾನೊಂದು ಪದ್ಯ ಹಾಡ್ತೀನಿ, ನಮ್ ಕಡೇದು, ನನ್ನ ಹೆಸರನ್ನು ಯಾರಿಗೂ ಹೇಳಬಾರದು’ ಅಂದುದಕ್ಕೆ ‘ಆಯ್ತು, ನಾನು ಬೇರೆಯವರಿಗೆ ಹೇಳಿದರೆ ಒಂದು ಲಕ್ಷ ಕೋಡ್ತೀನಿ, ಟ್ರಾಫಿಕ್‍ನಲ್ಲಿದ್ದೇನೆ, ಬೇಗ ಹಾಡ್ರಪ್ಪ’ ಎಂದು ಮನೆಯಲ್ಲೇ ಕೂತು ಅಂದೆ. ಅವನು ಜಾನಪದ ಮಟ್ಟಲ್ಲಿ ಹಾಡಿದ. ನಾನು ಅವನಿಗೆ ‘ಶರಣಾದೆ’ ಎಂದೆ. ಯಾಕೆಂದರೆ ಅವನು ಹಾಡಿದ್ದು ‘ಲವ್ ಕೇಸರಿ’, ‘ಲವ್ ಜಿಹಾದ್’ ಗೆ ಉತ್ತರವಾಗಿತ್ತು ಎಂದು ತಿಳಿಸಿದರು.

ಮಾವಾ, ಮಾವಾ ಕೇಳೊ ಮಂಗ್ಯಾ
ಕತ್ತಿ ಝಳಪಿಸುತ ಬಂದು, ನನ ಮುಂದನಿಂದು
ಹಿಂಗ ಲವ್ ಮಾಡು ಲವ್ ಮಾಡು ಅಂದರ
ಹೆಂಗ ಮಾಡಲೊ ಲವ್ವ, ಹೆಂಗ ಮಾಡಲೊ ಲವ್ವ
ನಿನ್ನ ಎದೆಯೊಳಗ ಇಲ್ಲದ ಲವ್ವ, ಮಾಡೆಂದರ ಹೆಂಗ ಮಾಡಲೋ ಲವ್ವ

ಲವ್ ಲವ್ ಅಂದರ ಏನು ಮಾವ ಏನು ಮಾವ?
ಕೇಳೊ ಮಾವಾ ಹೇಳುತೀನಿ, ನಾ ಹೇಳಿದ ಮೇಲ ನೀ ಕೇಳು
ಲವ್ವಲ್ಲಿ ಯುದ್ಧ ಯಾಕೋ ಮಾವ, ಲವ್ವೇ ಧರ್ಮವು ಕೇಳು
ಲವ್ವಂದರ ಕಾಮಾನಬಿಲ್ಲು, ಅದರೊಳಗೈತಿ ರಂಗು ರಂಗೇಳು
ಏಕ ಬಣ್ಣವಾದರದು ವಾಕರಿಕೆಯೊ, ಬಣ್ಣಬಣ್ಣದ ಓಕುಳಿಯೇ ಲವ್ವು,

ಮಾವ, ರಂಗುರಂಗಲ್ಲಿ ಬಾರೊ, ಕತ್ತಿ ಮುರಿದೆಸದು ಬಾರೋ
ಲವ್ವು ಮಾಡೋಣು ಬಾರೊ, ಓಕುಳಿಯ ಆಡೋಣು ಬಾರೊ

“ಇಂಥ ಸಂಕಷ್ಟದಲ್ಲಿ ಆ ಕಿಡಿಗೇಡಿ ಹುಡುಗನ ಜಾನಪದ ಮಟ್ಟು ಬಂದು ನನ್ನ ತಲೆ ನೇವರಿಸಿ ಸಾಂತ್ವಾನ ನೀಡಿತು. ಅದಕ್ಕಾಗಿ ಅವನಿಗೆ ಕೃತಜ್ಞತೆಗಳ” ಎಂದರು.

ವಡ್ಡರ್ಸೆಯವರನ್ನು ನೆನೆದ ಅವರು, “ಇವತ್ತು ಕಣ್ಮರೆಯಾಗುತ್ತಿರುವ ಸಾಮಾಜಿಕ ನ್ಯಾಯದ ಪ್ರತೀಕವಾಗಿದ್ದರು. ದಲಿತರು, ಹಿಂದುಳಿದವರು, ಹಳ್ಳಿಗರು, ಅಸಹಾಯಕರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುವಂತಾಗಬೇಕೆಂದು ತಹತಹಿಸುತ್ತಿದ್ದರು. ಇದನ್ನೇ ತನ್ನ ಕಾರ್‍ಯಕ್ಷೇತ್ರದಲ್ಲೂ ಅಳವಡಿಸಿಕೊಂಡಿದ್ದ ವಡ್ಡರ್ಸೆಯವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ ಸಮುದಾಯಕ್ಕೆ ಸೇರಿದವರು. ಈಗ ಅವರು ಇಲ್ಲ. ಬಂಟರೂ ನೆನಪಿಸಿಕೊಳ್ಳುತ್ತಿಲ್ಲ. ಶೆಟ್ಟರು ತಮ್ಮ ಹೃದಯದಲ್ಲಿಟ್ಟುಕೊಂಡಿದ್ದ ತಳಸಮುದಾಯದವರೂ ನೆನಪಿಸಿಕೊಳ್ಳುತ್ತಿಲ್ಲ” ಎಂದು ವಿವಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿರಿ: ಕೇಜ್ರಿವಾಲ್‌ ಮನೆಗೆ ಹಾನಿ ಮಾಡಿದ ಕಾರ್ಯಕರ್ತರಿಗೆ ಬಿಜೆಪಿ ಸನ್ಮಾನ

ಇಂದಿನ ನಮ್ಮ ಮಾಧ್ಯಮ ಕ್ಷೇತ್ರ ಅದರಲ್ಲೂ ದೃಶ್ಯ ಮಾಧ್ಯಮ ಕ್ಷೇತ್ರದ ಅವನತಿ ಕಂಡು ದುಃಖಿತನಾಗಿ ನನ್ನ ಸುಪ್ತಮನಸ್ಸು ರಘುರಾಮ ಶೆಟ್ಟರಿಗೆ ನಾಯಕ ಪಟ್ಟವನ್ನೆ ಆಯ್ಕೆ ಮಾಡಿತ್ತೇನೊ ಎಂದೆನಿಸುತ್ತದೆ. ಇರಲಿ, ಇದು ಮುಖ್ಯವೇ ಅಲ್ಲ. ಇಂದು ಮಾಧ್ಯಮ ಕ್ಷೇತ್ರವು ಸಮಸ್ಯೆಗಳನ್ನು ವರದಿ ಮಾಡುತ್ತಿವೆಯೊ? ಅಥವಾ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿವೆಯೊ ಗೊತ್ತೇ ಆಗುತ್ತಿಲ್ಲ. ಉದಾಹರಣೆಗೆ ಹಿಜಾಬ್ ಕೇಸ್‌ನಲ್ಲಿ ನಿಜವಾದ ಸಮಸ್ಯೆಯ ಪಾಲೆಷ್ಟು, ಇದನ್ನು ಸಮಸ್ಯಾತ್ಮಕ ಮಾಡಿದ ಮಾಧ್ಯಮಗಳ ಪಾಲೆಷ್ಟು? ನಿರ್ಧರಿಸಿ ಹೇಳುತ್ತೀರಾ? ಇದೇ ರೀತಿ ಅನೇಕಾನೇಕ ಉದಾಹರಣೆಗಳನ್ನು ಹೇಳಬಹುದು. ಮಾಧ್ಯಮ ಕ್ಷೇತ್ರ ತನ್ನ ನೀತಿ, ನಿಯಮ, ಸಂಯಮ, ಮಾನ ಮಾರ್‍ಯದೆ, ಘನತೆಗಳನ್ನು ತಾನೇ ತುಳಿದು ನಿಂತಿದೆ. ಇಂಥ ಸಂದರ್ಭದಲ್ಲಿ ರಘುರಾಮ ಶೆಟ್ಟರು ನೆನಪಾಗುತ್ತಾರೆ. ನೆನಪಾಗಬೇಕೂ ಕೂಡ. ಅವರ ಕನಸು ’ಓದುಗ ಒಡೆತನದ ಮಾಧ್ಯಮ’ದ ಪ್ರಯತ್ನ ಇಂದಾದರೂ ನನಸಾಗಬೇಕಾಗಿದೆ ಎಂದು ಆಶಿಸಿದರು.

ನನಗೂ ಈಗಲೂ ಒಂದು ಕನ್‌ಫ್ಯೂಷನ್ – ಗೊಂದಲ ಇದೆ. ಈ ರಘುರಾಮಶೆಟ್ಟರು ನಾಯಕನೋ ಅಥವಾ ದುರಂತ ನಾಯಕನೋ ಅಂತ. ಒಂದು ದೊಡ್ಡ ಕನಸನ್ನು ಕಂಡು ಅದಕ್ಕೊಂದು ಮನೆ ಕಟ್ಟಿ, ಆ ಮನೆಯ ಭಾರವನ್ನು ಹೊತ್ತು, ಅದು ಕುಸಿಯುತ್ತಿದ್ದರೂ ಛಲ ಬಿಡದೆ ನೆಲಕಚ್ಚುತ್ತಾರಲ್ಲ ಇದನ್ನು ನೋಡಿದರೆ ದುರಂತ ನಾಯಕ ಎಂದೆನ್ನಿಸುತ್ತದೆ. ಆದರೆ ಅದೇ ಆ ಕ್ಷಣದಲ್ಲೆ, ಈ ವಡ್ಡರ್ಸೆ ರಘುರಾಮಶೆಟ್ಟಿ ಎಂಬ ಸಾಹಸಿಗ ’ಮುಂಗಾರು’ ಪ್ರಕಾಶನ ಸಂಸ್ಥೆ ಎಂಬ ಓದುಗರೇ ಮಾಲೀಕರಾಗಿದ್ದ ಪಬ್ಲಿಕ್ ಲಿಮಿಡೆಟ್ ಕಂಪನಿ ರಚಿಸಿ, ಓದುಗರ ಒಡೆತನದ ಸಂಸ್ಥೆ ಕಟ್ಟುತ್ತಾರಲ್ಲ – ಇದು ಇಂದು ಮಾಡಬೇಕಾಗಿರುವ ಸಾಹಸವಾಗೇ ಉಳಿದಿದೆ. ಈ ಸಂಪತ್ತನ್ನು ರಘುರಾಮಶೆಟ್ಟರು ನಾಡಿಗೆ ಬಿಟ್ಟು ಹೋಗಿದ್ದಾರೆ. ಇದನ್ನು ನೆನೆದು, ನಾಯಕಪಟ್ಟ ಮತ್ತು ದುರಂತ ನಾಯಕಪಟ್ಟ ಈ ಎರಡನ್ನೂ ತಕ್ಕಡಿಯಲ್ಲಿಟ್ಟು ತೂಗಿದಾಗ, ತಕ್ಕಡಿ ಮೇಲೆ ಕೆಳಗೆ ತೂಗಿ ತೂಗಿ, ನಾಯಕಪಟ್ಟ ಒಂದು ಗುಲಗಂಜಿ ತೂಕ ಹೆಚ್ಚಾಗಿ ತೂಗಿ, ಗೆದ್ದು ನಿಲ್ಲುತ್ತದೆ ಎಂದರು.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

“ಈಗೊಂದು ವಿಸ್ಮಯ ಹೇಳಿ ನನ್ನ ಮಾತು ಮುಗಿಸುತ್ತೇನೆ. ಎಲ್ಲರಿಗೂ ಗೊತ್ತಿದೆ. ಅಸಮಾನತೆ ಮೌಲ್ಯದ ಚಾತುರ್‍ವರ್ಣದ ಹಿಂದೂ ಗುಂಪಿನ ಪ್ರತಿಪಾದಕ ಆರ್‌ಎಸ್‌ಎಸ್‌ನ ಶ್ರೀ ಗೋಲ್ವಾಲ್ಕರ್ ಹಾಗೂ ಹಿಂಸಾಮೂರ್ತಿ ಶ್ರೀ ನಾಥುರಾಂ ಗೋಡ್ಸೆಯರ ಕುಮೌಲ್ಯಗಳನ್ನು ಭಾರತದಲ್ಲೆಡೆ ಬಿತ್ತಿ ಬೆಳೆಯಲು ನಾಗಪುರ್ ಆರ್‌ಎಸ್‌ಎಸ್ ಅವಿರತ ಪ್ರಯತ್ನಿಸುತ್ತಲೇ ಇದೆ” ಎಂದು ಎಚ್ಚರಿಸಿದರು.

“ಭಾರತದ ತುಂಬೆಲ್ಲಾ ಗೋಲ್ವಾಲ್ಕರ್ ಮತ್ತು ಗೋಡ್ಸೆ ನಿರ್ಮಾಣ ಮಾಡಲು ಸ್ಥಳಾವಕಾಶಕ್ಕಾಗಿ ಈ ಚಾತುರ್‍ವರ್ಣದ ಹಿಂದೂ ಗುಂಪು, ಭಾರತವನ್ನೆಲ್ಲಾ ಆವರಿಸಿಕೊಂಡಿರುವ ಗಾಂಧಿ ಮತ್ತು ಅಂಬೇಡ್ಕರ್‌ರನ್ನು ನಿರ್ನಾಮ ಮಾಡಲು ಸತತವಾಗಿ ಗಾಂಧಿ ಅಂಬೇಡ್ಕರ್ ಎಂಬ ಆಲ ಮತ್ತು ಅರಳಿಮರಗಳನ್ನು ಕೊಚ್ಚಿ ತರಿದು ಕತ್ತರಿಸಿ ತುಳಿದು ಏನೆಲ್ಲಾ ಮಾಡುತ್ತಿದೆ. ಆದರೂ, ಆದರೂನುವೆ ಪೌರತ್ವ ಕಾಯ್ದೆ ತಿದ್ದುಪಡಿ (ಸಿಎಎ, ಎನ್‌ಆರ್‌ಸಿ) ಸಂದರ್ಭ ಬುಗಿಲೆದ್ದಾಗ ಅದರೊಳಗಿಂದ ಮೂಡಿದ ಗಾಂಧಿ ಅಂಬೇಡ್ಕರ್ ಪ್ರಭಾವಳಿ ಭಾರತದ ತುಂಬಾ ಆವರಿಸಿಕೊಳ್ಳುವ ಪರಿ, ಇದೇನು ಚೋದ್ಯ! ಆಗ ಜನರ ಬೇಗುದಿಗೆ ಗಾಂಧಿ ಅಂಬೇಡ್ಕರ್ ಸಾಂತ್ವನ ನೀಡಿದರೆ? ಗಾಂಧಿಯವರನ್ನು ಕಡೆದು ಸತ್ವವನ್ನಷ್ಟೇ ತೆಗೆದಿಟ್ಟುಕೊಂಡು ಪ್ರತಿಮೆ ಮಾಡಿ ನಿಲ್ಲಿಸಿದರೆ ಅದರೊಳಗಿಂದ ’ಸಹನೆ ಮತ್ತು ಪ್ರೀತಿ’ ಸೂಸುತ್ತದೆ. ಹಾಗೆ ಅಂಬೇಡ್ಕರ್‌ಗಾಗಿಯೂ ಈ ನೆಲ ಕಾತರಿಸುತ್ತಿದೆ. ನ್ಯಾಯಕ್ಕೆ ನ್ಯಾಯದ ಹಕ್ಕೇ ಇಲ್ಲದ ಸಂದರ್ಭದಲ್ಲಿ ನ್ಯಾಯಕ್ಕೇನೇ ನ್ಯಾಯದ ಹಕ್ಕು ಸಿಗುವಂತಾಗಲು ಕಾರಣರು ಅಂಬೇಡ್ಕರ್. ಅಂಬೇಡ್ಕರ್‌ರನ್ನು ಕಡೆದು ಸತ್ವವನ್ನಷ್ಟೆ ತೆಗೆದಿಟ್ಟುಕೊಂಡು ಪ್ರತಿಮೆ ಮಾಡಿ ನಿಲ್ಲಿಸಿದರೆ ಅದರೊಳಗಿಂದ ನ್ಯಾಯ, ಸಮಾನತೆ ಸೂಸುತ್ತದೆ. ಸಹನೆ, ಪ್ರೀತಿ, ನ್ಯಾಯ ಸಮಾನತೆಯ ಜಲಕ್ಕಾಗಿ ಭಾರತದ ನೆಲ ಚಾತಕ ಪಕ್ಷಿಯಂತೆ ಕಾಯುತ್ತಿಲ್ಲವೆ?” ಎಂದು ಕೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ಲೇಖಕರಾದ ಡಾ.ಕೆ.ಮರುಳಸಿದ್ದಪ್ಪ, ಕೆ.ಪುಟ್ಟಸ್ವಾಮಿ, ಬೇರೆಯ ಮಾತು ಕೃತಿ ಸಂಪಾದಕರಾದ ದಿನೇಶ್‌ ಅಮಿನ್‌ಮಟ್ಟು, ಪ್ರಕಾಶಕಿ ಅಕ್ಷತಾ ಹುಂಚದಕಟ್ಟೆ, ವಕೀಲರಾದ ಅನಂತ ನಾಯಕ್‌ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯುತಮವಾದ ಲೇಖನ. ಶರಣು ಶರಣಾರ್ಥಿಗಳು.. ಗೌರಿ ಲಂಕೇಶ ಅವರಿಗೆ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...