ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರವು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕನ್ಯಾ ಪೂಜೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಆದೇಶ ಹೊರಡಿಸಿದೆ ಎನ್ನಲಾಗಿದೆ.
ರಾಜ್ಯದ ಯಾವುದೇ ಸರ್ಕಾರಿ ಕಾರ್ಯಕ್ರಮ ಪ್ರಾರಂಭಕ್ಕೆ ಮುನ್ನ ಮುಖ್ಯ ಅತಿಥಿಗಳು ಕನ್ಯಾ ಪೂಜೆ ನೆರವೇರಿಸಬೇಕು. ಈ ಬಗ್ಗೆ ಸಂಬಂಧಿಸಿದ ಇಲಾಖೆ ಸಕಲ ಸಿದ್ದತೆ ಮಾಡಿಕೊಳ್ಳಲಿವೆ ಎಂದು ಸರ್ಕಾರ ಹೇಳಿದೆ. ಕಾರ್ಯಕ್ರಮ ಪ್ರಾರಂಭಿಸುವ ಮುನ್ನ ಹೆಣ್ಣನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವಂತೆ ಸೂಚಿಸಿ ಆದೇಶ ಹೊರಡಿಸಲಾಗಿದೆ.
ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ’ಶಿವರಾಜ್ ಅವರೇ, ರಾಜ್ಯದ ಪ್ರತಿಯೊಂದು ಕಾರ್ಯಕ್ರಮಕ್ಕೂ ಮುನ್ನ ಕನ್ಯಾಪೂಜೆ ಮಾಡಲು ನಿರ್ಧರಿಸಿದ್ದೀರಿ, ಇದನ್ನು ಸ್ವಾಗತಿಸಲಾಗುತ್ತದೆ ಏಕೆಂದರೆ ನಮ್ಮ ಸಮಾಜದಲ್ಲಿ ಎಲ್ಲೆಡೆ ಹೆಣ್ಣುಮಕ್ಕಳನ್ನು ಪೂಜಿಸಲಾಗುತ್ತದೆ, ಅವರನ್ನು ಗೌರವಿಸಲಾಗುತ್ತದೆ, ಇದು ನಮ್ಮ ಸಾಮಾಜಿಕ ವಿಧಿಗಳೂ ಆಗಿದೆ” ಎಂದಿದ್ದಾರೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್ ಚೌಧರಿ
शिवराज जी आप प्रदेश में हर कार्यक्रम के पूर्व कन्या पूजन का निर्णय लीजिये , उसका सदैव स्वागत है क्योंकि हमारे समाज में बेटियों की सर्वत्र पूजा होती है , उनका सम्मान किया जाता है ,यह हमारे सामाजिक संस्कार भी है।
— Office Of Kamal Nath (@OfficeOfKNath) December 25, 2020
ಶಿವರಾಜ್ ಸಿಂಗ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚಿನಿಂದಲೂ ಹೆಣ್ಣುಮಕ್ಕಳಿಗೆ ಪೂಜೆ ಮಾಡಿಯೇ ಸರ್ಕಾರದ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತಿತ್ತು. ಆದರೆ, ಡಿಸೆಂಬರ್ 2018ರಲ್ಲಿ ಅಧಿಕಾರಕ್ಕೆ ಬಂದಿದ್ದ ಕಮಲ್ನಾಥ್ ಸರ್ಕಾರ ಈ ಪರಂಪರೆಯನ್ನು ನಿಲ್ಲಿಸಿತ್ತು.
2020ರಿಂದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮತ್ತೆ ಹಳೆಯ ಪರಂಪರೆಯನ್ನು ಮುಂದುವರಿಸುತ್ತಿದ್ದಾರೆ. ಶುಕ್ರವಾರ ನಡೆದ ಸಾಮಾನ್ಯ ಶಾಸನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
2020 ರ ಆಗಸ್ಟ್ 15 ರಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಈ ಬಗ್ಗೆ ಘೋಷಣೆ ಮಾಡಿದ್ದನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈ ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಜಿಲ್ಲೆಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: PM-CARES ಸರ್ಕಾರದ ನಿಯಂತ್ರಣದಲ್ಲಿದೆ; ಆದರೆ RTI ವ್ಯಾಪ್ತಿಗೆ ಬರುವುದಿಲ್ಲ ಎಂದ ಸರ್ಕಾರ!