ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.
ಹಾಸ್ಟೆಲ್ನಲ್ಲಿ ನೀಡಲಾದ ಊಟ ಸೇವಿಸಿದ ಕೆಲವೇ ಸಮಯದಲ್ಲೇ ಹಲವು ವಿದ್ಯಾರ್ಥಿಗಳಲ್ಲಿ ತೀವ್ರ ಸ್ವರೂಪದ ವಾಂತಿ, ಹೊಟ್ಟೆನೋವು ಹಾಗೂ ಜಠರದುರಿತದ (ಗ್ಯಾಸ್ಟ್ರೋಎಂಟರೈಟಿಸ್) ಲಕ್ಷಣಗಳು ಕಾಣಿಸಿಕೊಂಡವು. ಒಂದರ ಮೇಲೊಂದರಂತೆ ಮಕ್ಕಳು ಅಸ್ವಸ್ಥಗೊಳ್ಳಲು ಪ್ರಾರಂಭಿಸಿದ್ದರಿಂದ ಹಾಸ್ಟೆಲ್ ಆವರಣದಲ್ಲಿ ಹಾಗೂ ಪೋಷಕರಲ್ಲಿ ತೀವ್ರ ಭೀತ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಸುಳಿವು ಸಿಗುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಹಾಸ್ಟೆಲ್ ಸಿಬ್ಬಂದಿ ಮತ್ತು ಸ್ಥಳೀಯರು ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಹಾಡಾದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದರು. ಒಟ್ಟು 40 ಬಾಧಿತ ಮಕ್ಕಳ ಪೈಕಿ 25 ವಿದ್ಯಾರ್ಥಿಗಳಿಗೆ ತಕ್ಷಣದ ವೈದ್ಯಕೀಯ ತುರ್ತು ಚಿಕಿತ್ಸೆಯ ಅಗತ್ಯವಿದ್ದರಿಂದ ಆಸ್ಪತ್ರೆಗೆ ಸೇರಿಸಲಾಗಿದೆ. ಇವರಲ್ಲಿ 20 ಮಕ್ಕಳು ಶಹಾಡಾದ ಸರ್ಕಾರಿ ಗ್ರಾಮೀಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಐದು ವಿದ್ಯಾರ್ಥಿಗಳಲ್ಲಿ ರಕ್ತದೊತ್ತಡದ ತೀವ್ರ ಏರಿಳಿತ ಹಾಗೂ ಉಸಿರಾಟದ ತೊಂದರೆಗಳು ಕಂಡುಬಂದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಕೈಮೀರದಂತೆ ತಡೆಯಲು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಿ ಕಂಟಿನ್ಯೂಯಸ್ ಆಕ್ಸಿಜನ್ ಸಪೋರ್ಟ್ ನೀಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ನಂದೂರ್ಬಾರ್ ಜಿಲ್ಲಾಧಿಕಾರಿ ಮಿತಾಲಿ ಸೇಥಿ ಅವರು ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ವೈಯಕ್ತಿಕವಾಗಿ ಭೇಟಿ ನೀಡಿ ಸ್ಥಿತಿಗತಿಯ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬ ಮಗುವಿನ ಬಳಿಗೂ ತೆರಳಿ ಆರೋಗ್ಯ ವಿಚಾರಿಸಿದ ಅವರು, ವೈದ್ಯರೊಂದಿಗೆ ಚರ್ಚಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿ ಆಸ್ಪತ್ರೆಯ ಆವರಣದಲ್ಲಿ ಕಣ್ಣೀರಿಡುತ್ತಿದ್ದ ಪೋಷಕರನ್ನು ಭೇಟಿಯಾದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ಉತ್ತಮ ವೈದ್ಯಕೀಯ ಆರೈಕೆ ಸಿಗುತ್ತಿದ್ದು ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಿತಾಲಿ ಸೇಥಿ, ಶಹಾಡಾದ ಸಮಾಜ ಕಲ್ಯಾಣ ಹಾಸ್ಟೆಲ್ನಲ್ಲಿ ಸುಮಾರು 40 ಮಕ್ಕಳಿಗೆ ಆಹಾರ ವಿಷಪೂರಿತವಾಗಿ ಜಠರದುರಿತದ ತೊಂದರೆ ಕಾಣಿಸಿಕೊಂಡಿತ್ತು. ತಕ್ಷಣವೇ 25 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಐವರಿಗೆ ಬಿಪಿ ಮತ್ತು ಆಮ್ಲಜನಕದ ಅಭಾವ ಕಂಡುಬಂದಿದ್ದರಿಂದ ಐಸಿಸಿಯುಗೆ ಸೇರಿಸಲಾಗಿತ್ತು. ವೈದ್ಯರು ನೀಡುತ್ತಿರುವ ನಿರಂತರ ಮಾಹಿತಿಯಂತೆ ಪ್ರಸ್ತುತ ಎಲ್ಲಾ 25 ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಅಪಾಯದ ವಲಯದಿಂದ ಹೊರಬಂದಿದ್ದಾರೆ. ಗ್ರಾಮೀಣ ಆಸ್ಪತ್ರೆಯಲ್ಲಿರುವ ಮಕ್ಕಳನ್ನು ಮುನ್ನೆಚ್ಚರಿಕೆಯಾಗಿ 24 ಗಂಟೆಗಳ ಕಾಲ ವೈದ್ಯರ ಕಣ್ಣಾವಲಿನಲ್ಲಿಯೇ ಇರಿಸಲಾಗುವುದು. ಪರಿಸ್ಥಿತಿ ಸಂಪೂರ್ಣ ಹದಕ್ಕೆ ಬಂದ ನಂತರವೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಇನ್ನೊಂದೆಡೆ ಘಟನೆಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಮತ್ತು ಹೊಣೆಗಾರಿಕೆಯನ್ನು ನಿಗದಿಪಡಿಸಲು ಆಡಳಿತ ಮಂಡಳಿ ತನಿಖೆಯನ್ನು ಚುರುಕುಗೊಳಿಸಿದೆ. ಆಹಾರ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ಹಾಸ್ಟೆಲ್ನ ಅಡುಗೆ ಕೋಣೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಆಹಾರ ಧಾನ್ಯಗಳು, ತಯಾರಿಸಿದ ಅಡುಗೆ ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಇದರ ಜೊತೆಗೆ ಅಸ್ವಸ್ಥಗೊಂಡ ವಿದ್ಯಾರ್ಥಿಗಳ ವಾಂತಿಯ ಮಾದರಿಗಳನ್ನು ಸಹ ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಮತ್ತು ವೈದ್ಯಕೀಯ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಲ್ಯಾಬ್ ವರದಿ ಬಂದ ತಕ್ಷಣವೇ ಘಟನೆಗೆ ಯಾರು ಹೊಣೆ ಎಂಬುದನ್ನು ಅಧಿಕೃತವಾಗಿ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹಾಸ್ಟೆಲ್ನ ಮುಖ್ಯೋಪಾಧ್ಯಾಯರು (HM), ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಹಾಸ್ಟೆಲ್ ವಾರ್ಡನ್ ಅವರ ಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಕುರಿತು ಕಟ್ಟುನಿಟ್ಟಿನ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಆತಂಕದಲ್ಲಿರುವ ಪೋಷಕರ ಸಂಶಯಗಳನ್ನು ನಿವಾರಿಸಲು ಪೊಲೀಸ್ ತಂಡವು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪೋಲಿಸ್ ಠಾಣೆಯೊಂದಿಗೆ ನಿಕಟ ಸಮನ್ವಯ ಸಾಧಿಸಲಾಗುತ್ತಿದೆ. ಬರುವ ಮುಂದಿನ ಎರಡು ತಿಂಗಳ ಒಳಗಾಗಿ ಜಿಲ್ಲೆಯ ಹಾಸ್ಟೆಲ್ಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ, ಅಲ್ಲಿನ ನೈರ್ಮಲ್ಯ, ಆಹಾರದ ಗುಣಮಟ್ಟ ಮತ್ತು ಭದ್ರತೆಗೆ ಸಂಬಂಧಿಸಿದ ಎಲ್ಲಾ ಕುಂದುಕೊರತೆಗಳನ್ನು ಶಾಶ್ವತವಾಗಿ ಬಗೆಹರಿಸುವುದಾಗಿ ಆಡಳಿತ ಭರವಸೆ ನೀಡಿದೆ. ಪ್ರಸ್ತುತ ತನಿಖೆ ಮುಂದುವರಿದಿದೆ.


