ಮಹಾರಾಷ್ಟ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯನ್ನು ಒಂದು ವಾರ ಲಾಕ್ಡೌನ್ ಮಾಡಲಾಗಿದೆ. ಸೋಮವಾರ (ಫೆ.22) ಸಂಜೆಯಿಂದ ಲಾಕ್ಡೌನ್ ಪ್ರಾರಂಭವಾಗಲಿದೆ ಎಂದು ಕ್ಯಾಬಿನೆಟ್ ಸಚಿವ ಯಶೋಮತಿ ಠಾಕೂರ್ ಹೇಳಿದ್ದಾರೆ.
ಕಟ್ಟುನಿಟ್ಟಾದ ಏಳು ದಿನಗಳ ಲಾಕ್ಡೌನ್ ಸಮಯದಲ್ಲಿ ಅಗತ್ಯ ಸೇವೆಗಳನ್ನು ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು ಎಂದು ಸರ್ಕಾರ ಹೇಳಿದೆ.
ಜನರು ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಲಾಕ್ಡೌನ್ ವಿಸ್ತರಿಸಲಾಗುವುದು ಎಂದು ಹೇಳಿದರು, ಮಹಾರಾಷ್ಟ್ರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಅನಿವಾರ್ಯವಾಗಿ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ: ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ಆರ್ಟಿ-ಪಿಸಿಆರ್ ಪ್ರಮಾಣಪತ್ರ ಕಡ್ಡಾಯ
ಫೆಬ್ರವರಿ 28 ರವರೆಗೆ ಪುಣೆಯ ಜಿಲ್ಲಾಡಳಿತ ಶಾಲೆಗಳು ಮತ್ತು ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಿದ ಕೆಲವೇ ಗಂಟೆಗಳ ನಂತರ ಅಮರಾವತಿಯಲ್ಲಿ ಲಾಕ್ಡೌನ್ ಘೋಷಣೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಕೊರೊನಾ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ತೆಗೆದುಕೊಂಡಿದ್ದಾರೆ.
ನಾಗ್ಪುರ, ಅಕೋಲಾ, ಅಮರಾವತಿ, ಯವತ್ಮಾಲ್, ಮುಂಬೈ ಮತ್ತು ಪುಣೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಪರಿಸ್ಥಿತಿಯನ್ನು ಅವಲೋಕಿಸಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆ ಚರ್ಚಿಸಿ, ನಿರ್ಣಯಿಸಿದ ನಂತರ ಲಾಕ್ಡೌನ್ ಅಥವಾ ಇತರ ನಿರ್ಬಂಧಗಳ ಬಗ್ಗೆ ನಾವು ಜಿಲ್ಲಾಡಳಿತಕ್ಕೆ ತಿಳಿಸಲಿದ್ದೇವೆ’ ಎಂದು ಸಚಿವ ವಿಜಯ್ ವಾಡೆಟ್ಟಿವಾರ್ ಹೇಳಿದ್ದರು.
ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಕೂಡ ಅಲ್ಲಿಂದ ಬರುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಹೊರಡಿಸಿದ್ದು, ನೆಗೆಟಿವ್ ಆರ್ಟಿ-ಪಿಸಿಆರ್ ಪ್ರಮಾಣಪತ್ರ ಕಡ್ಡಾಯ ಮಾಡಲಾಗಿದೆ.
“ವಿಮಾನಗಳು, ಬಸ್ಸುಗಳು, ರೈಲುಗಳು ಮತ್ತು ವೈಯಕ್ತಿಕ ಸಾರಿಗೆಯಿಂದ ಬರುವವರು 72 ಗಂಟೆಗಳ ನೆಗೆಟಿವ್ ಆರ್ಟಿ-ಪಿಸಿಆರ್ ಪ್ರಮಾಣಪತ್ರ ಹೊಂದಿರಬೇಕೆಂಬುದು ಕಡ್ಡಾಯವಾಗಿರುತ್ತದೆ” ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಕೃಷಿ ಕಾನೂನುಗಳ ರದ್ದತಿಗೆ ಯಾವ ರಾಜ್ಯಗಳೂ ಒತ್ತಾಯಿಸಿಲ್ಲ: ನೀತಿ ಆಯೋಗದ ಉಪಾಧ್ಯಕ್ಷ