ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ ಘಟಕದ (TMCP) ರ್ಯಾಲಿ ಸಭೆಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಆಗಸ್ಟ್ 28 ರಂದು ರಾಜಧಾನಿ ಕೋಲ್ಕತ್ತಾದ ಕ್ಯಾಥೆಡ್ರಲ್ ರಸ್ತೆಯಲ್ಲಿ ತೃಣಮೂಲ ಛತ್ರ ಪರಿಷತ್ತಿನ (ಟಿಎಮ್ಸಿಪಿ) ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲು ಕಲ್ಕತ್ತಾ ಹೈಕೋರ್ಟ್ ಮಮತಾ ಬ್ಯಾನರ್ಜಿ ಅವರಿಗೆ ಷರತ್ತುಬದ್ಧ ಅನುಮತಿ ನೀಡಿತ್ತು. ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಯ ಒಂದು ಭಾಗವನ್ನು (flank) ತೆರೆದಿಡಬೇಕು ಹಾಗೂ ನಿರ್ದಿಷ್ಟ ಸಮಯದ ಮಿತಿಯನ್ನು ಪಾಲಿಸಬೇಕು ಎಂದು ನ್ಯಾಯಾಲಯ ಸೂಚಿಸಿತ್ತು.
ಆದರೆ, ಕಾರ್ಯಕ್ರಮದ ವೇಳೆ ರಸ್ತೆಯನ್ನು ಮುಕ್ತವಾಗಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಲಾಗಿದೆ ಮತ್ತು ಕೋರ್ಟ್ ನಿಗದಿಪಡಿಸಿದ್ದ ಸಮಯದ ಮಿತಿಯನ್ನು ಮೀರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಹಾಗೂ ಟಿಎಮ್ಸಿಪಿ ಸಭೆಯ ಸಂಘಟಕರ ವಿರುದ್ಧ ಕೋಲ್ಕತ್ತಾದ ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆಯಲ್ಲಿ ಭಾಗಿಯಾದ ಎಲ್ಲರ ಪಾತ್ರದ ಕುರಿತು ತನಿಖೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಇನ್ನೊಂದೆಡೆ, ಶುಕ್ರವಾರದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಮ್ಮ ಆಡಳಿತದ ಅವಧಿಯಲ್ಲಿ ಪೊಲೀಸರು ಮಾನವೀಯತೆಯಿಂದ ನಡೆದುಕೊಳ್ಳುತ್ತಿದ್ದರು, ಆದರೆ ಪ್ರಸ್ತುತ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಪೊಲೀಸ್ ಪಡೆಯನ್ನು ಒಂದು ದೈತ್ಯ ಹಾಗೂ ರಾಕ್ಷಸಿ ಶಕ್ತಿಯನ್ನಾಗಿ ಮಾರ್ಪಡಿಸಿದೆ ಎಂದು ಆರೋಪಿಸಿದ್ದರು.
ತಮ್ಮ ಬೆಂಬಲಿಗರ ಮೇಲಿನ ‘ಪೊಲೀಸ್ ದೌರ್ಜನ್ಯ’ವನ್ನು ತಡೆಗಟ್ಟುವುದಾಗಿ ರಕ್ಷಾ ಬಂಧನದ ದಿನದಂದು ವಾಗ್ದಾನ ಮಾಡಿದ್ದಾಗಿ ಹೇಳಿದ ಅವರು, ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಮತ್ತು ಸಾರ್ವಜನಿಕ ಸಭೆಗಳಿಗೆ ಅನುಮತಿ ಸಿಗದಿದ್ದರೆ ಬೀದಿಗಿಳಿದು ಹೋರಾಡುವುದಾಗಿ ಎಚ್ಚರಿಸಿದ್ದರು.
ಪ್ರತಿಯೊಂದು ಸಭೆಗೂ ಅನುಮತಿ ಪಡೆಯಲು ನ್ಯಾಯಾಲಯದ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ, ಇನ್ಮುಂದೆ ತಾವು ಬಯಸಿದ ಸ್ಥಳಗಳಲ್ಲಿ ಸಭೆ ನಡೆಸಲು ಸಾರ್ವಜನಿಕರ ಅನುಮತಿಯನ್ನೇ ಪಡೆಯುವುದಾಗಿ ತಿಳಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಅಕ್ರಮ ಎಸಗಿದೆ ಹಾಗೂ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರವು ಬೀದಿ ಬದಿ ವ್ಯಾಪಾರಿಗಳನ್ನು ಸರಿಯಾದ ಪುನರ್ವಸತಿ ಕಲ್ಪಿಸದೆ ತೆರವುಗೊಳಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಭಾರಿ ವಾಗ್ದಾಳಿ ನಡೆಸಿದ್ದರು.


