ರಾಜ್ಯಕ್ಕೆ ಕೇಂದ್ರದಿಂದ ಸಿಗಬೇಕಿರುವ ಅನುದಾನದ ಬಾಕಿಯನ್ನು 7 ದಿನಗಳಲ್ಲಿ ಬಿಡುಗಡೆ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರಕಾರಕ್ಕೆ ಗಡುವು ನೀಡಿದ್ದು, ಲೋಕಸಭೆ ಚುನಾವಣೆ ಸಮೀಪಿಸಿದ್ದರಿಂದ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ದ ಇದನ್ನು ಪ್ರಬಲ ಅಸ್ತ್ರವಾಗಿ ತೆಗೆದುಕೊಂಡು ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ಆವಾಸ್ ಯೊಜನೆಯಡಿ 9,330 ಕೋಟಿ, ನರೇಗಾದಡಿ 6,900 ಕೋಟಿ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ 830 ಕೋಟಿ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 770ಕೋಟಿ ರೂ, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ 350 ಕೋಟಿ, ಮಿಡ್ ಡೇ ಮೀಲ್ ಸ್ಕೀಂ ಅಡಿಯಲ್ಲಿ 175 ಕೋಟಿ, ಹಾಗೆಯೇ ಇತರ ಯೋಜನೆಗಳ ಅಡಿಯಲ್ಲಿ ಹಣ ಕೇಂದ್ರದಿಂದ ಬಿಡುಗಡೆಗೆ ಬಾಕಿಯಿದೆ.
ಮಮತಾ ಬ್ಯಾನರ್ಜಿ ಅವರು ಡಿಸೆಂಬರ್ 20ರಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಬಾಕಿ ಉಳಿದಿರುವ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸಿದ್ದರು. ಈ ವೇಳೆ ರಾಜ್ಯ ಮತ್ತು ಕೇಂದ್ರದ ಅಧಿಕಾರಿಗಳು ಒಟ್ಟಿಗೆ ಕುಳಿತು ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು. ಈ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಲವು ಬಾರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ತೃಣಮೂಲದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಪಕ್ಷದ ನಾಯಕರ ತಂಡ ದೆಹಲಿಗೆ ತೆರಳಿತ್ತು, ಆದರೆ ಕೇಂದ್ರ ಸಚಿವರನ್ನು ಭೇಟಿ ಮಾಡುವಲ್ಲಿ ವಿಫಲರಾಗಿದ್ದರು.
ಈ ಬಗ್ಗೆ ಪ್ರಧಾನಿಯನ್ನು ಭೇಟಿ ಮಾಡಲು ಕಳೆದ ತಿಂಗಳು ಸಿಎಂ ಬ್ಯಾನರ್ಜಿ ದೆಹಲಿಗೆ ಭೇಟಿ ನೀಡುವ ಮೊದಲು ಕೋಲ್ಕತ್ತಾದಲ್ಲಿ ಟಿಎಂಸಿ ಪಕ್ಷದ ನಾಯಕರು ರಾಜಭವನದ ಹೊರಗೆ ಪ್ರತಿಭಟನೆ ನಡೆಸಿದ್ದರು. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಮಹಾತ್ಮ ಗಾಂಧಿ ಅವರ ಜನ್ಮದಿನದಂದು ಕೇಂದ್ರದಿಂದ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನವದೆಹಲಿಯ ರಾಜ್ಘಾಟ್ನಲ್ಲಿ ಪ್ರತಿಭಟನಾ ಧರಣಿ ನಡೆಸಲಾಗಿತ್ತು.
ಈ ಯೋಜನೆಗಳು ಗ್ರಾಮೀಣ ಮತದಾರರ ಮೇಲೆ ನೇರವಾಗಿ ಪರಿಣಾಮ ಬೀರುವುದರಿಂದ ಮತ್ತು ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಗಳು ನಡೆಯಲಿರುವುದರಿಂದ ಈ ವಿಷಯವು ಹೆಚ್ಚು ಮುನ್ನೆಲೆಗೆ ಬಂದಿದೆ. ಲೋಕಸಭೆ ಚುನಾವಣೆಯ ಹಿನ್ನೆಲೆ ಅನುದಾನ ತಡೆ ವಿಚಾರವನ್ನು ಜನರ ಮುಂದೆ ಇಡಲು ಮಮತಾ ಬ್ಯಾನರ್ಜಿ ಅವರು ಬಯಸಿದ್ದಾರೆ ಎಂದು ಹೇಳಲಾಗಿದೆ.
ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ: ಸಾರ್ವಜನಿಕ ಸಭೆಗಳಿಗೆ ಅನುಮತಿ ನೀಡದ ದೀದಿ ಸರ್ಕಾರ