ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್ನ (ಟಿಎಂಸಿ) ಹಿರಿಯ ಮುಖಂಡ ಆಶಿಶ್ ಬ್ಯಾನರ್ಜಿ ಅವರು, ಭಾನುವಾರ (ಆ.16) ಬೆಳಿಗ್ಗೆ ಬೀರ್ಭೂಮ್ ಜಿಲ್ಲೆಯ ರಾಂಪುರಹತ್ನ ಹಟ್ಟಾಲಾ ಪಾರಾದಲ್ಲಿರುವ ಅವರ ಮನೆಯ ಸಮೀಪದ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಪಕ್ಷದ ಕಚೇರಿಯಿಂದ ಡೆತ್ ನೋಟ್ (ಆತ್ಮಹತ್ಯೆ ಪತ್ರ) ಎಂದು ಶಂಕಿಸಲಾದ ಪತ್ರವೊಂದನ್ನು ವಶಪಡಿಸಿಕೊಳ್ಳಲಾಗಿದ್ದು, ಅವರ ಸಾವಿಗೆ ಕಾರಣವಾದ ಸಂದರ್ಭಗಳನ್ನು ಪತ್ತೆಹಚ್ಚಲು ಪೊಲೀಸರು ಅದರ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಪತ್ರದಲ್ಲಿ, ಬ್ಯಾನರ್ಜಿ ಅವರು ತಮ್ಮ ಸಾವಿಗೆ ಯಾರೂ ಜವಾಬ್ದಾರರಲ್ಲ ಎಂದು ತಿಳಿಸಿದ್ದಾರೆ ಹಾಗೂ ರಾಜಕೀಯಕ್ಕೆ ಪ್ರವೇಶಿಸಿದ್ದಕ್ಕಾಗಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಆಶಿಶ್ ಬ್ಯಾನರ್ಜಿ ಅವರು 2001ರಿಂದ 2026ರವರೆಗೆ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ರಾಂಪುರಹತ್ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸಿದ್ದರು. ಅವರು ಉಪ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಲ್ಲದೆ, ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಶಾಲಾ ಶಿಕ್ಷಣ ಮತ್ತು ಕೃಷಿ ಸೇರಿದಂತೆ ಹಲವು ಸಚಿವ ಸ್ಥಾನಗಳ ಜವಾಬ್ದಾರಿಯನ್ನೂ ನಿರ್ವಹಿಸಿದ್ದರು.
ಬ್ಯಾನರ್ಜಿ ಅವರು 2026ರ ವಿಧಾನಸಭಾ ಚುನಾವಣೆಯಲ್ಲಿ ರಾಂಪುರಹತ್ ಕ್ಷೇತ್ರದಿಂದ ಟಿಎಂಸಿ ಟಿಕೆಟ್ನಲ್ಲಿ ಸ್ಪರ್ಧಿಸಿದ್ದರಾದರೂ, ಬಿಜೆಪಿ ಅಭ್ಯರ್ಥಿ ಧ್ರುವ ಸಹಾ ಅವರ ವಿರುದ್ಧ 24,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು. ಚುನಾವಣಾ ಸೋಲಿನ ನಂತರ ಬ್ಯಾನರ್ಜಿ ಅವರು ರಾಜಕೀಯದಲ್ಲಿ ಅಷ್ಟಾಗಿ ಸಕ್ರಿಯರಾಗಿರಲಿಲ್ಲ ಎಂದು ವರದಿಗಳು ಉಲ್ಲೇಖಿಸಿವೆ.
ಬೀರ್ಭೂಮ್ ಜಿಲ್ಲಾ ಅಧ್ಯಕ್ಷರಾಗಿದ್ದ ಪಕ್ಷದ ಪ್ರಭಾವಿ ನಾಯಕ ಅನುಬ್ರತ ಮೊಂಡಲ್ ಅವರ ಅವಧಿಯಲ್ಲಿ ಬ್ಯಾನರ್ಜಿ ಅವರು ಪ್ರಮುಖ ಟಿಎಂಸಿ ನಾಯಕರಾಗಿದ್ದರು. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ 2026ರ ವಿಧಾನಸಭಾ ಚುನಾವಣೆಯ ಸೋಲಿನ ನಂತರ, ರಾಜ್ಯದಲ್ಲಿ ಭಾರಿ ರಾಜಕೀಯ ಬದಲಾವಣೆಗಳು ನಡೆಯುತ್ತಿರುವ ಬೆನ್ನಲ್ಲೇ ಬ್ಯಾನರ್ಜಿ ಅವರ ಸಾವು ಸಂಭವಿಸಿದೆ.
ಹಲವಾರು ಟಿಎಂಸಿ ಮಾಜಿ ಶಾಸಕರು ಮತ್ತು ಮುಖಂಡರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ತನಿಖೆಗಳು ಹಾಗೂ ಬಂಧನಗಳನ್ನು ಎದುರಿಸುತ್ತಿದ್ದಾರೆ.
ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104


