ಮಂಗಳೂರಿನ ಬೈಕಂಪಾಡಿಯ ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆಯಾಗಿ ಸುಮಾರು 26 ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳವಾರ ನಡೆದಿದೆ. ಘಟನೆಯ ವೇಳೆ ಕಾರ್ಖಾನೆಯಲ್ಲಿ 80 ಕಾರ್ಮಿಕರು ಇದ್ದರು ಎಂದು ವರದಿಯಾಗಿದೆ.
ಕೈಗಾರಿಕಾ ಪ್ರದೇಶವಾದ ಬೈಕಂಪಾಡಿಯಲ್ಲಿರುವ ಎವರೆಸ್ಟ್ ಮೀನು ಸಂಸ್ಕರಣಾ ಘಟಕದಲ್ಲಿ ಮಧ್ಯಾಹ್ನದ ವೇಳೆ ಈ ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಅಮೋನಿಯಂ ಸೋರಿಕೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಘಟನೆಯಿಂದಾಗಿ ಅಸ್ವಸ್ಥರಾಗಿದ್ದ ಸುಮಾರು 26 ಜನರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ನಂತರ ಕೆಲವರು ಬಿಡುಗಡೆಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದು, ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
“ರಾಸಾಯನಿಕ ಸೋರಿಕೆಯಿಂದಾಗಿ ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್ ಲಿಮಿಟೆಡ್ನ 26 ಸಿಬ್ಬಂದಿ ಅಸ್ವಸ್ಥರಾಗಿದ್ದರು. ಇವರಲ್ಲಿ 10 ಮಂದಿ ಪ್ರಾಥಮಿಕ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ 16 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಇದನ್ನೂ ಓದಿ:ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ