ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ.ಆಕಾಶ್ ಶಂಕರ್ ಸೋಮವಾರ ನಗರಕ್ಕೆ ಆಗಮಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಡಿಡಿಪಿಐ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸತ್ಯಾನ್ವೇಷಣೆಗೆ ಆಗಮಿಸಿದ್ದೇನೆ. ಯಾವ ರೀತಿ ತನಿಖೆ ಮಾಡಬೇಕೆಂದು ನಾನೊಂದು ಯೋಜನೆ ರೂಪಿಸಿದ್ದೇನೆ. ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದೇನೆ. ಹಂತ ಹಂತವಾಗಿ ಬಹಳ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.
ಪ್ರಕರಣದ ಹಿನ್ನೆಲೆ : ಮಂಗಳೂರು ನಗರದ ವೆಲೆನ್ಸಿಯಾದ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆ. ಮಕ್ಕಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಫೆ.10ರಂದು ಕೆಲ ವಿದ್ಯಾರ್ಥಿಗಳ ಫೋಷಕರು ಶಾಲೆಯ ಬಳಿ ಜಮಾಯಿಸಿ ಆಡಳಿತ ಮಂಡಳಿ ಮತ್ತು ಶಿಕ್ಷಕರೊಂದಿಗೆ ವಾಗ್ವಾದ ನಡೆಸಿದ್ದರು. ಶಿಕ್ಷಕಿ ಪ್ರಭಾ ಅವರನ್ನು ವಜಾ ಮಾಡುವಂತೆ ಆಗ್ರಹಿಸಿದ್ದರು.
ಇದಾಗಿ ಎರಡು ದಿನಗಳ ಬಳಿಕ, ಫೆ. 12ರಂದು ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ಶಾಲೆಯ ಬಳಿ ಜಮಾಯಿಸಿದ ಪೋಷಕರು, ವಿದ್ಯಾರ್ಥಿಗಳು ಮತ್ತು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಸ್ಟೀವನ್ ಎಂಬ ಮತ್ತೊಬ್ಬ ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.
ಪೋಷಕರು ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಶಿಕ್ಷಕ ಸ್ಟೀವನ್ ಅವರನ್ನು ವಜಾ ಮಾಡಿರುವುದಾಗಿ ಶಾಲೆಯ ಆಡಳಿತ ಮಂಡಳಿ ಘೋಷಿಸಿತ್ತು. ಈ ವೇಳೆ ಶಾಸಕ ವೇದವ್ಯಾಸ ಕಾಮತ್ ಶಾಲೆಯ ಮುಂದೆ ಮಕ್ಕಳಿಂದ ಜೈ ಶ್ರೀರಾಮ್ ಘೋಷಣೆ ಕೂಗಿಸಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಇಬ್ಬರು ಶಾಸಕರು ಸೇರಿದಂತೆ ಐದು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಘಟನೆಯ ವಿಚಾರ ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲೂ ಪ್ರತಿಧ್ವನಿಸಿತ್ತು. ವಿವಾದ ಅಂತ್ಯಂತ ಸೂಕ್ಷ ಸ್ವರೂಪದ್ದಾಗಿದ್ದರಿಂದ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ಮಾಡಿಸುವುದಾಗಿ ಸರ್ಕಾರ ಘೋಷಿಸಿತ್ತು. ಅದರಂತೆ, ಐಎಎಸ್ ಅಧಿಕಾರಿ ತನಿಖೆ ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ