Homeಕರ್ನಾಟಕಮಂಗಳೂರು: 'ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?': ಬಿಜೆಪಿಗೆ ಮತ ಹಾಕುವಂತೆ...

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿದ ‘ಕರಪತ್ರ’!

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಕಣದಲ್ಲಿದ್ದಾರೆ. ಹಿಂದುತ್ವದ ಮತ್ತು ಬಿಜೆಪಿಯ ಭದ್ರಕೋಟೆ ಎನ್ನಲಾಗುತ್ತಿದ್ದ ಕರವಾಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಗೆ ದೊಡ್ಡ ಸವಾಲು ಎದುರಾಗಿದೆ. ಬಂಟ ಸಮುದಾಯದ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಪಕ್ಷದೊಳಗಿದ್ದ ಅಸಮಾಧಾನದಿಂದ ಈ ಬಾರಿ ಅದೇ ಸಮುದಾಯಕ್ಕೆ ಸೇರಿದ ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಬಿಜೆಪಿ ಟಿಕೆಟ್‌ ನೀಡಲಾಗಿತ್ತು. ಆದರೆ ಕಾಂಗ್ರೆಸ್‌ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಅವರಿಗೆ ಟಿಕೆಟ್‌ ನೀಡಿದೆ. ಇದರಿಂದಾಗಿ ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರ ಸಂಖ್ಯೆಯನ್ನು ಹೊಂದಿರುವ ಬಿಲ್ಲವರ ಮತಗಳು ಈ ಬಾರಿ ಪದ್ಮರಾಜ್ ಪೂಜಾರಿ ಪಾಲಾಗುವ ಸಾಧ್ಯತೆ ಇದ್ದು, ಬಿಜೆಪಿಗೆ ದೊಡ್ಡ ಸವಾಲಾಗಿದೆ. ಇದರ ಬೆನ್ನಲ್ಲಿ ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ‘ನಮ್ಮ ಸಮುದಾಯದ ಬ್ರಿಜೇಶ್‌ ಚೌಟರನ್ನು ಗೆಲ್ಲಿಸಲು ಬಂಟ ಮತದಾರರಿಗೆ ಮನವಿ’ ಎಂಬ ಶೀರ್ಷಿಕೆಯ ಕರಪತ್ರದಲ್ಲಿ ‘ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಕರಪತ್ರದಲ್ಲಿ, ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು ಎಂದು ಉಲ್ಲೇಖಿಸಲಾಗಿದೆ.

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಕೂಡ ಉಲ್ಲೇಖಿಸಲಾಗಿದೆ.

ಕರಪತ್ರದ ವಿಶೇಷ ಸೂಚನೆಯಲ್ಲಿ ನಮ್ಮ ಸಮುದಾಯಕ್ಕೆ ಮಾತ್ರ ನೀಡಬೇಕು ಎಂದು ಉಲ್ಲೇಖಿಸಲಾಗಿದ್ದು, ಕೊನೆಗೆ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಬಂಟ ಬ್ರಿಗೇಡ್‌ ದಕ್ಷಿಣ ಕನ್ನಡ ಮಂಗಳೂರು ಎಂದು ಬರೆಯಲಾಗಿದೆ.

ವೈರಲ್‌ ಆದ ಕರಪತ್ರದಲ್ಲಿ ಏನೇನಿದೆ?

ಪ್ರೀತಿಯ ಸ್ವಜಾತಿ ಬಾಂಧವರೇ, ಚುನಾವಣೆಯ ಅಂತಿಮ ಘಟ್ಟದಲ್ಲಿ ನಾವಿದ್ದೇವೆ. ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರವರು ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಳಿಯಾಗಿದ್ದಾರೆ. ಒಂದು ಕಾಲದಲ್ಲಿ ಬಂಟ ನಾಯಕರನ್ನು ಮೂಲೆಗೆ ಸರಿಸಿ ಬಿಲ್ಲವರು ಮೆರೆದಾಡಿದ್ದ ಕ್ಷೇತ್ರ ನಂತರದ ದಿನದಲ್ಲಿ ನಮ್ಮ ಬಂಟರ ತೆಕ್ಕೆಗೆ ಬಂದಿದೆ. ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ಗೆಲ್ಲುವ ಮೂಲಕ ನಾವು ನಮ್ಮ ಒಗ್ಗಟ್ಟನ್ನು ಸಾಬೀತುಪಡಿಸಿದ್ದೇವೆ.

ಆದರೆ ಒಂದು ಕಾಲದಲ್ಲಿ ನಮ್ಮ ಒಕ್ಕಲಿನಲ್ಲಿದ್ದ ಬಿಲ್ಲವರು, ಜನಾರ್ದನ ಪೂಜಾರಿಯವರು ಸಂಸದರಾದ ನಂತರ ದೊಡ್ಡ ದೊಡ್ಡ ಉದ್ಯಮದಲ್ಲಿ ತೊಡಗಿಸಿಕೊಂಡು ಊರಿಗೆ, ಜಿಲ್ಲೆಗೆ, ಪರ ಊರಿನಲ್ಲಿ ಪ್ರಭಾವಿಯಾಗಿದ್ದ ನಮ್ಮ ಸಮಾಜದವರ ಪ್ರಭಾವವನ್ನು ತಗ್ಗಿಸಿ ಮೆರೆದಾಡತೊಡಗಿದ್ದರು. ಇಂತಹ ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ? ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ಸೇಂದಿ ತೆಗೆದು, ಕೂಲಿ ನಾಲಿ ಮಾಡಿಕೊಂಡು ಬದುಕುತ್ತಿದ್ದವರು. ಇಂದು ನಮ್ಮ ಮೇಲೆ ಅಧಿಕಾರವನ್ನು ಚಲಾಯಿಸಲು ಹೊರಟರೆ ಅವರ ಕೈಕೆಳಗೆ ಬಾಳುವುದಕ್ಕೆ ನಮಗೆ ಸಾಧ್ಯವಿದೆಯೇ ಎನ್ನುವುದನ್ನು ಸ್ವಾಭಿಮಾನಿಗಳಾದ ನಾವು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ. ಜನಾರ್ದನ ಪೂಜಾರಿಯ ನಂತರ ಮತ್ತೊಮ್ಮೆ ಅವರ ಶಿಷ್ಯನಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ನಮ್ಮ ಬಂಟ ಸಮಾಜಕ್ಕೆ ಸವಾಲನ್ನು ಎಸೆದಿದೆ. ಈ ಸವಾಲನ್ನು ನಾವು ಸ್ವೀಕರಿಸುವ ಮೂಲಕ ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರನ್ನು ಲಕ್ಷ ಲಕ್ಷ ಬಹುಮತದಿಂದ ಗೆಲ್ಲಿಸುವುದಕ್ಕೆ ರಾತ್ರಿ ಹಗಲೆನ್ನದೆ ದುಡಿಯಬೇಕಾಗಿದೆ

ಒಂದು ವೇಳೆ ಶೂದ್ರ ವರ್ಗಕ್ಕೆ ಸೇರಿದವ ಗೆದ್ದು ಬಂದರೆ ಮುಂದಿನ ದಿನದಲ್ಲಿ ಇತರ ಶೂದ್ರ ವರ್ಗಕ್ಕೆ ಸೇರಿದವರು ಗೌಡರು, ಕುಲಾಲ್, ಕೊಟ್ಟಾರಿ, ಗಾಣಿಗ, ಭಂಡಾರಿ, ನಾಯ್ಕ, ಎಸ್ಸಿ-ಎಸ್ಟಿಗಳು ಒಗ್ಗಟ್ಟಾಗಿ ನಮ್ಮನ್ನು ಆಳಲು ಹೊರಟರೆ, ಬೇರೆ ಬೇರೆ ಚುನಾವಣೆಗಳಲ್ಲಿ ಸ್ಪರ್ಧಿಸಿ ನಮ್ಮವರನ್ನು ಮೂಲೆಗುಂಪು ಮಾಡಿದರೆ ಅದನ್ನು ನಮಗೆ ಸಹಿಸುವುದಕ್ಕೆ ಸಾಧ್ಯವಿದೆಯೇ? ಊರಿಗೆ ಪಟೇಲರಾಗಿ ವಿವಿಧ ಸ್ಥರಗಳಲ್ಲಿ ಜನಪ್ರತಿನಿಧಿಗಳಾಗಿ ಮೆರೆದಿದ್ದ ನಮ್ಮ ಸಮಾಜ ಇಂತಹ ಸಮಾಜದ ಶೂದ್ರರ ಮುಂದೆ ಕೈಕಟ್ಟಿಕೊಂಡು ನಿಲ್ಲಬೇಕೆ?

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಸತ್ಯವನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ. ಜನಾರ್ದನ ಪೂಜಾರಿ ಗೆದ್ದ ನಂತರದ ಪರಿಸ್ಥಿತಿ ಅವರ ಶಿಷ್ಯ ಗೆದ್ದ ನಂತರ ನಮಗೆ ಬಾರದಿರಲಿ ಎನ್ನುವುದಾದರೆ ನಮ್ಮ ಸಮಾಜದ ಸೈನಿಕ ಬ್ರಿಜೇಶ್ ಚೌಟ ಗೆಲ್ಲಲೇಬೇಕು.

ಸತ್ಯಜಿತ್ ಸುರತ್ಕಲ್, ಬಿರುವೆರ್ ಕುಡ್ಲದ ಉದಯ ಪೂಜಾರಿ ಬಲ್ಲಾಲ್ ಭಾಗ್ ಇಂತಹವರು ವಿವಿಧ ಸಂಘಟನೆಗಳನ್ನು ಕಟ್ಟಿಕೊಂಡು ನಮ್ಮವರಿಗೆ ಯಾವ ರೀತಿಯಲ್ಲಿ ಮಗ್ಗುಲ ಮುಳ್ಳಾಗಿದ್ದಾರೆ ಎನ್ನುವುದನ್ನು ನಾವು ಮರೆಯಲಾಗುತ್ತದೆಯೇ?

ನಮ್ಮ ಸಮಾಜದ ಒಬ್ಬ ಯುವಕನನ್ನು ಗೆಲ್ಲಿಸುವುದಕ್ಕೆ ಬೇರೆ ಬೇರೆ ರೀತಿಯಲ್ಲಿ ನಮ್ಮ ಸಮಾಜದ ಹಿರಿಯರ ಸೂಚನೆಯಂತೆ ಕೆಲಸ ಮಾಡಲಾಗಿದೆ. ನಮ್ಮ ಅಭ್ಯರ್ಥಿಯಾದ ಚೌಟರಿಗೆ ದೊಡ್ಡ ಮೊತ್ತದ ಹಣದ ನೆರವನ್ನು ಕೂಡ ನೀಡಲಾಗಿದೆ. ಇದು ಸಾಲದು. ನಮ್ಮ ಕೃಷಿ ಕಾರ್ಯದಲ್ಲಿ, ನಮ್ಮ ಮನೆಯ ಕೂಲಿ ಕೆಲಸದಲ್ಲಿ, ನಮ್ಮ ಉದ್ಯಮಗಳಲ್ಲಿ, ನಮ್ಮಲ್ಲಿ ಒಕ್ಕಲು ಇರುವವರನ್ನು ನಮ್ಮ ಪ್ರಭಾವವನ್ನು ಬಳಸಿಕೊಂಡು ಚೌಟರಿಗೆ ಮತದಾನ ಮಾಡಿಸುವ ದೊಡ್ಡ ಜವಾಬ್ದಾರಿಯನ್ನು ನಮ್ಮ ಸಮಾಜದವರು ನಿರ್ವಹಣೆ ಮಾಡಿ, ಶೂದ್ರನೊಬ್ಬ ನಮ್ಮನ್ನು ಆಳದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ.

ನಿಮ್ಮ ವಾರ್ಡ್, ಗ್ರಾಮ ವ್ಯಾಪ್ತಿಯಲ್ಲಿ ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ. ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ ಎಂದು ಕರಪತ್ರದಲ್ಲಿ ಬರೆಯಲಾಗಿದೆ.

ಇದನ್ನು ಓದಿ: 2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nange yaw rithiya desha bhaktha pradani sikkidru… Namma e silly buddi bidadidre… Uddara illa…vnammolage heege ide… Innu Muslim navru yenadru madidre thappu helthiri… Yentha cheap mentality marre Karapatra maadiddu…yentha raajamanetganalla aalvike yella helike shoodra varga yella helike…just prabapranhithvakke bembala needi… Olle nayakannu gouravisi… Adu bittu shoodra bhanta yen nimdu.. useless things

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...