Homeಮುಖಪುಟತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ನಕಲಿ ಮಾಹಿತಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ.

ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕೊಲ್ಲಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿ ಯ್ಯೂಟ್ಯೂಬರ್‌ ಮನೀಶ್ ಕಶ್ಯಪ್ ಬಂಧಕ್ಕೊಳಪಟ್ಟಿದ್ದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪತ್ರಕರ್ತ ಮೊಹಮ್ಮದ್‌ ಝಬೈರ್‌, ಹಲವಾರು ಬಿಹಾರದ ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳುವ ಮೂಲಕ ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರಲ್ಲಿ ಸುರಕ್ಷತೆಯ ಭಯವನ್ನು ಹೆಚ್ಚಿಸಲು ಅತ್ಯುತ್ತಮ ಪ್ರಯತ್ನ ಮಾಡಿದ್ದ ಮನೀಶ್ ಕಶ್ಯಪ್ ನೆನಪಿದೆಯೇ? ಆತನನನ್ನು ಈ ಹಿಂದೆ ಅಪಾಯಕಾರಿ ತಪ್ಪು ಮಾಹಿತಿ ನೀಡಿದ್ದಕ್ಕೆ ಬಂಧಿಸಲಾಗಿತ್ತು. ಇದೀಗ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿ ಸನ್ಮಾನಿಸಿದೆ. ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಪ್ರತಿಯೊಬ್ಬ ಪ್ರಭಾವಿಗಳಿಗೆ ಇದು ತುಂಬಾ ಉತ್ತೇಜನಕಾರಿಯಾಗಿದೆ ಎಂದು ಹೇಳಿದ್ದಾರೆ.

ಏನಿದು ಘಟನೆ?

ಮಾರ್ಚ್ 1ರಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹುಟ್ಟುಹಬ್ಬ. ಸ್ಟಾಲಿನ್ ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ತಮಿಳುನಾಡಿಗೆ ಆಗಮಿಸಿದ್ದರು. ಅದೇ ದಿನ ಬಿಹಾರದ ಬಿಜೆಪಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ “ತಮಿಳುನಾಡಿನಲ್ಲಿ ಹಿಂದಿ ಮಾತನಾಡಿದ್ದಕ್ಕಾಗಿ 12 ಜನರನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ನೇಣು ಬಿಗಿದು ಕೊಲ್ಲಲಾಗಿದೆ” ಎಂದು ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಇದರ ಬೆನ್ನಿಗೆ “ಮನೀಶ್ ಕಶ್ಯಪ್”  ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಸುದ್ದಿಯನ್ನು ಮಾಡಿದ್ದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ಬಿಹಾರದ ವಿಧಾನಸಭೆಯಲ್ಲೂ ಈ ವಿಚಾರವಾಗಿ ಭಾರಿ ಚರ್ಚೆಯಾಗಿತ್ತು. ಅಲ್ಲಿನ ವಿರೋಧ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟುಹಿಡಿದಿತ್ತು.

ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹ ಈ ಮನೀಶ್ ಕಶ್ಯಪ್ ಎಂಬ ವ್ಯಕ್ತಿಯ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದ ತೇಜಸ್ವಿ ಯಾದವ್ ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನಾಡಿದ್ದರು. ಇಂತವರ ಸರ್ಕಾರ ಬಿಹಾರಕ್ಕೆ ಬೇಕೆ? ತೇಜಸ್ವಿ ಯಾದವ್ ಸ್ಟಾಲಿನ್‌ಗೆ ಕೇಕ್ ತಿನ್ನಿಸುವ ದಿನದಲ್ಲೇ ನಮ್ಮ ಬಿಹಾರಿಗಳು ಕೊಲೆಯಾಗುತ್ತಿದ್ದಾರೆ ಎಂದು ಜನರನ್ನು ಪ್ರಚೋದಿಸಿದ್ದರು.

ಇದಲ್ಲದೆ ಬಿಜೆಪಿ ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿತ್ತು. ಈ ವಿಡಿಯೋ ವೈರಲ್ ಆಗಿದ್ದೆ ತಡ ಇಡೀ ದಿನ ಹಿಂದಿ ಮತ್ತು ಆಂಗ್ಲ ದೃಶ್ಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಸಾಲುಸಾಲು ವರದಿಗಳನ್ನು ಬಿತ್ತರಿಸಿದವು. ತಮಿಳುನಾಡಿನಲ್ಲಿ ಬಿಹಾರ ಮತ್ತು ಉತ್ತರಪ್ರದೇಶ ಸೇರಿದಂತೆ ಹಿಂದಿ ಭಾಷಿಕರಿಗೆ ರಕ್ಷಣೆ ಇಲ್ಲ, ಅಲ್ಲಿನ ಸರ್ಕಾರವೇ ತಮಿಳು ಉಗ್ರಗಾಮಿಗಳ ಬೆನ್ನಿಗೆ ನಿಂತಿದೆ ಎಂದು ವಿಷಕಾರಲು ಆರಂಭಿಸಿದವು. ಪರಿಣಾಮ ಪ್ರಕರಣದ ತನಿಖೆಗೆ ಸಿಎಂ ನಿತೀಶ್ ಕುಮಾರ್ ಒಂದು ತಂಡವನ್ನು ರಚಿಸಿ ತಮಿಳುನಾಡಿಗೂ ಕಳುಹಿಸಿದ್ದರು.

ಆದರೆ, ಘಟನೆಯ ಮರುದಿನವೇ ಫ್ಯಾಕ್ಟ್‌ಚೆಕ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಇದು ಸುಳ್ಳು ಸುದ್ದಿ ಎಂದು ಕಂಡು ಹಿಡಿದಿದ್ದರು. ಈ ಹಲ್ಲೆ ತಮಿಳುನಾಡಿನಲ್ಲಿ ನಡೆದದ್ದಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ತಮಿಳುನಾಡಿನಲ್ಲಿ ಯಾವುದೇ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆಯಾಗಿಲ್ಲ ಎಂದು ಸಾಕ್ಷಿ ಸಮೇತ ಸರಣಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಮೂಲಕ ಬಿಜೆಪಿಯ ಅಸಲಿ ತಂತ್ರಗಾರಿಕೆ ಜಗಜ್ಜಾಹೀರಾಗಿತ್ತು.

ತಮಿಳುನಾಡಿನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿಯ ಈ ಸುಳ್ಳು ಸುದ್ದಿಯ ಬಗ್ಗೆ ಬಿಸಿಬಿಸಿ ಚರ್ಚೆ ಶುರು ಮಾಡುತ್ತಿದ್ದಂತೆ ಅಣ್ಣಾಮಲೈ ತನ್ನ ಖಾಸಗಿ ಟ್ವಿಟರ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದರು. ಇದಾದ ಬಳಿಕ ಸುಳ್ಳು ಸುದ್ದಿಯನ್ನು ಹಬ್ಬಿದ ಕಾರಣಕ್ಕೆ ಮನೀಶ್ ಕಶ್ಯಪ್ ಅವರನ್ನು ಬಂಧಿಸಲಾಗಿತ್ತು.

ಇದನ್ನು ಓದಿ: ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’ ಮಾಡಿಕೊಂಡ ಬಿಜೆಪಿ: ಆದರೆ ವಾಸ್ತವವೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...