ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು, 2013-18 ನಡುವೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿತ್ತು ಎಂಬುವುದಾಗಿ ಶ್ಲಾಘಿಸಿದ್ದರು ಎಂದು ಸ್ಮರಿಸಿದರು.
ಬೆಳಗಾವಿಯಲ್ಲಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಸಿಎಂ, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರು, ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ ನರಸಿಂಹರಾವ್ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

‘ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ರ ಹೆಜ್ಜೆ ಗುರುತು’
2004ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು, ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನ ಮಂತ್ರಿಗಳಲ್ಲಿ ಮನಮೋಹನ್ ಸಿಂಗ್ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಕೊಂಡಾಡಿದರು.
‘ಮನಮೋಹನ್ ಸಿಂಗ್ ನಿಧನದಿಂದ ದೇಶಕ್ಕೆ ನಷ್ಟ’
ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಮನಮೋಹನ್ ಸಿಂಗ್ ಅವರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಅವರ ಅಗಲಿಕೆ ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಿಳಿಸಿದರು.
‘ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆ’
ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದಲ್ಲಿ ಬಡತನ ಇದ್ದಿದ್ದರಿಂದ ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಅದನ್ನು ಐದು ಕೆಜಿಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟ ನಿವಾರಣೆಗೆ ಪೂರಕ ಯೋಜನೆಗಳನ್ನು ಮನಮೋಹನ್ ಸಿಂಗ್ ಜಾರಿಗೊಳಿಸಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
‘ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸೆ’
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಭೇಟಿಯಾಗಿದ್ದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಅವರು, ರಾಜ್ಯದ ಆರ್ಥಿಕತೆ ಸ್ಥಿತಿ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದರು. ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ


