ಮತ ಎಣಿಕೆ ಶುರುವಾದ ನಂತರವೂ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ, ಹೀನಾಯ ಸೋಲಿನ ಹೊಣೆಹೊತ್ತು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ.
ಹೊಸದಾಗಿ ಚುನಾಯಿತರಾದ ೦೮ ಬಿಜೆಪಿ ಶಾಸಕರನ್ನು ದೆಹಲಿಯಲ್ಲಿ ಭೇಟಿಯಾದ ನಂತರ, ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಮನೋಜ್ ತಿವಾರಿ, ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭಾ ಸದಸ್ಯರೂ ಆಗಿರುವ ಅವರು ದೆಹಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಗುರುತಿಸಲ್ಪಟ್ಟಿದ್ದರು. ಮನೋಜ್ ತಿವಾರಿಯವರಂತು ಬಿಜೆಪಿ 46 ಸ್ಥಾನಗಳನ್ನು ಬಿಜೆಪಿ ಪಡೆದು ಸರ್ಕಾರ ರಚಿಸುತ್ತದೆ ಎಂದು ಪದೇ ಪದೇ ಹೇಳಿದ್ದರು. ಆದರೆ ದೆಹಲಿ ಮತದಾರರು ಅದಕ್ಕೆ ಅವಕಾಶ ನೀಡಿಲ್ಲ.
ಇದೇ ಸಂದರ್ಭದಲ್ಲಿ ಹೊಸದಾಗಿ ಆಯ್ಕೆಯಾದ ಎಎಪಿ ಶಾಸಕರು ಬುಧವಾರ ಸಿಎಂ ನಿವಾಸದಲ್ಲಿ ನಡೆದ ಸಭೆಯ ನಂತರ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ್ದಾರೆ.
ಫೆಬ್ರವರಿ 16 ರ ಭಾನುವಾರ ರಾಮಲೀಲಾ ಮೈದಾನದಲ್ಲಿ ಕೇಜ್ರಿವಾಲ್ ದೆಹಲಿಯ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.