Homeಕರ್ನಾಟಕಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

ಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

- Advertisement -
- Advertisement -

ಹಿಜಾಬ್‌ ಕೇಸರಿ ವಿವಾದದ ಬೆನ್ನಲ್ಲೇ ಮೂರು ದಿನಗಳ ರಜೆಯ ಬಳಿಕ ರಾಜ್ಯದ ಪ್ರೌಢಶಾಲೆಗಳು ಸೋಮವಾರ ಮತ್ತೆ ಆರಂಭವಾದವು. ಶಾಲೆಗಳ ಮುಂದೆ ಹೋಗಿ ಕ್ಯಾಮೆರಾ ಹಿಡಿದು ನಿಂತ ಮಾಧ್ಯಮ ಪ್ರತಿನಿಧಿಗಳು, ಮುಖ್ಯವಾಹಿನಿ ದೃಶ್ಯ ಮಾಧ್ಯಮಗಳ ಸಂಪಾದಕರು ಮಕ್ಕಳ ಮೇಲೆ ದ್ವೇಷವನ್ನೇ ಹರಿಬಿಡಲು ಯತ್ನಿಸಿದ್ದಾರೆ.

ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿಗಳನ್ನು ಗೇಟ್‌ಗಳ ಬಳಿಯೇ ಶಾಲಾ ಆಡಳಿತ ಮಂಡಳಿ ತಡೆಯಿತು. ಹಿಜಾಬ್‌ ಬಿಚ್ಚಿಸಲಾಯಿತು. ಶಿಕ್ಷಕಿಯೊಬ್ಬರು ಬುರ್ಕಾವನ್ನು ಸಾರ್ವಜನಿಕವಾಗಿ ತೆಗೆದ ವಿಡಿಯೊ ವೈರಲ್ ಆಗಿದೆ.

ಕಾಲೇಜು ಮಟ್ಟದಲ್ಲಿದ್ದ ಹಿಜಾಬ್‌ – ಕೇಸರಿ ಶಾಲು ವಿವಾದ, ಪ್ರೌಢಶಾಲೆಗಳಿಗೂ ಹಬ್ಬಿಸಲು ಮಾಧ್ಯಮಗಳು ಯತ್ನಿಸಿದಂತೆ ಕಾಣುತ್ತಿವೆ. ಪೂರ್ವ ಸಿದ್ಧತಾ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರನ್ನು ತಡೆಯುವಲ್ಲಿ ಮಾಧ್ಯಮಗಳ ಪಾತ್ರವೂ ಆಗಾಧವಾಗಿದೆ. ಕ್ಯಾಮೆರಾ ಹಿಡಿದು ನಿಂತು ಸೌಹಾರ್ದತೆಯನ್ನು ಕದಡಲು ಯತ್ನಿಸಿರುವುದು ಕಂಡು ಬಂದಿದೆ.

ಮಾಧ್ಯಮಗಳಲ್ಲಿ ಬಂದ ಕೆಲವು ವರದಿಗಳು

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಜಾಬ್‌‌ ತೆಗೆಯಲು ನಿರಾಕರಿಸಿ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸಾದರು.

ಚಿಕ್ಕಮಗಳೂರು ತಾಲ್ಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್‌ ನಿಷೇಧ. ವಿದ್ಯಾರ್ಥಿನಿಯರು ವೇಲ್‌ಅನ್ನೇ ತಲೆಯ ಮೇಲೆ ಧರಿಸಿದ್ದರು. ಹಿಜಾಬ್‌ ಅಲ್ಲ ಇದು ವೇಲ್‌ ಎಂದು ಹೇಳುತ್ತಿರುವ ವಿದ್ಯಾರ್ಥಿನಿಯರಿಗೆ ಮಾಧ್ಯಮವೊಂದರ ವರದಿಗಾರ, “ಕೋರ್ಟ್ ಆದೇಶ ಇದೆಯಮ್ಮ. ಧರಿಸಿ ಬರಬಾರದೆಂದು. ನಿಮಗೆ ತಿಳಿದಿಲ್ಲವಾ?” ಎಂದು ಕೇಳುತ್ತಾರೆ. “ನಮಗೆ ಎಜುಕೇಷನ್‌ ಹಾಗೂ ಹಿಜಾಬ್‌ ಎರಡೂ ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಹೇಳುತ್ತಾರೆ.

ಶಿಕಾರಿಪುರದ ಮೌಲಾನಾ ಹಜಾದ್ ಶಾಲೆಯಲ್ಲಿ ಹೈಡ್ರಾಮಾ ಎಂದು ಕನ್ನಡದ ಮುಖ್ಯವಾಹಿನಿ ದೃಶ್ಯಮಾಧ್ಯಮದ ಸಂಪಾದಕರೊಬ್ಬರು ಪ್ರೈಮ್‌ಟೈಮ್‌ನಲ್ಲಿ ಹೇಳುತ್ತಾರೆ. ಜೊತೆಗೆ ವಿದ್ಯಾರ್ಥಿಗಳಿಗೆ ಧರ್ಮ ಬೋಧನೆ ಮಾಡುತ್ತಾರೆ.

ಯಾದಗಿರಿ ನಗರದ ಸರ್ಕಾರಿ ಉರ್ದು ಹೈಸ್ಕೂಲ್‌ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿದ್ದರೆಂದು ಅಡ್ಡಿಪಡಿಸಲಾಯಿತು. ಪ್ರಾಂಶುಪಾಲರು ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ್ದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಗಲಿಬಿಲಿಯಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಡಿಡಿಪಿಐ ಶಾಂತಗೌಡ ಪಾಟೀಲ್‌, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರು ಶಾಲೆಗೆ ಆಗಮಿಸಿ ಹಿಜಾಬ್‌ ಹಾಕಿಸಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ಆದೇಶ ಅರಿಯದ ಅಧಿಕಾರಿಗಳು, ಮಾಧ್ಯಮಗಳು?

ಪುಟಾಣಿ ಮಕ್ಕಳ ಮೇಲೆ ಕ್ಯಾಮೆರಾ ದಾಳಿ ಒಂದೆಡೆಯಾದರೆ ಮತ್ತೊಂದೆಡೆ ಹೈಕೋರ್ಟ್ ಆದೇಶವನ್ನೇ ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂಬ ಆರೋಪಗಳು ಬಂದಿವೆ.  “ಕೆಲವು ಶಿಕ್ಷಣ ಸಂಸ್ಥೆಗಳು ಮತ್ತು ಶೈಕ್ಷಣಿಕ ಜಿಲ್ಲಾಡಳಿತದಿಂದ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಾಗುತ್ತಿದೆ” ಎಂದು ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಅವರು ಶಿಕ್ಷಣ ಆಯುಕ್ತರಿಗೆ ಪತ್ರ ಬರೆದಿದ್ದಾರೆ. “ಉಲ್ಲಂಘನೆಯನ್ನು ತಕ್ಷಣವೇ ನಿಲ್ಲಿಸಲು ಜಿಲ್ಲಾ ಮತ್ತು ಬ್ಲಾಕ್‌ ಅಂತದ ಅಧಿಕಾರಿಗಳಿಗೆ ಕೂಡಲೇ ಸ್ಪಷ್ಟೀಕರಣವನ್ನು ನೀಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಆದೇಶವು ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಆದೇಶದ 11ನೆಯ ಕ್ರಮ ಸಂಖ್ಯೆಯಲ್ಲಿ ತಿಳಿಸಲಾಗಿದೆ. ಆದರೆ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸದಂತೆ ನಿರ್ಬಂಧ ಹೊಂದಿರದ ಶಿಕ್ಷಣ ಸಂಸ್ಥೆಗಳ ಮೇಲೂ ನಿಷೇಧವನ್ನು ವಿಧಿಸುತ್ತಿವೆ. ಇದು ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಲ್ಲದೆ ಮತ್ತೇನೂ ಅಲ್ಲ” ಎಂದು ತಿಳಿಸಿದ್ದಾರೆ.

ಸುದ್ದಿಯಾಗಿರುವ ಹಲವು ಶಾಲೆಗಳ ಸಂಬಂಧ ಸ್ಥಳೀಯ ಅಧಿಕಾರಿಗಳಿಂದ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ನಮ್ಮೊಂದಿಗೆ ಮಾತನಾಡಿದ ಅಧಿಕಾರಿಗಳಿಗೆ ಕೋರ್ಟ್ ಆದೇಶದ ಕುರಿತು ಸ್ಪಷ್ಟತೆಗಳಿಲ್ಲ ಎಂಬುದು ಕಂಡುಬಂದಿದೆ. ಜೊತೆಗೆ ಕೆಲವು ಅಧಿಕಾರಿಗಳು ಮಾಧ್ಯಮಗಳ ಅತಿರೇಕ, ಮಾಧ್ಯಮಗಳು ಸೃಷ್ಟಿಸುತ್ತಿರುವ ಭಯದ ವಾತಾವರಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಪ್ರತಿಕ್ರಿಯೆ

ಮಂಡ್ಯ ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದ ಕುರಿತು ವರದಿಯಾದ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, “ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದಿದ್ದು ತಿಳಿಯಿತು. ನಾವು ಈ ಕುರಿತು ಯಾವುದೇ ಆದೇಶ ನೀಡಿಲ್ಲ. ಮೀಡಿಯಾದವರನ್ನು ನೋಡಿ ಹೆದರಿದ ಶಿಕ್ಷಕಿ ಭಯ ಬಿದ್ದು ತೆಗೆದಿದ್ದಾರೆ. ಆ ರೀತಿ ತೆಗೆಯುವ ಅಗತ್ಯವಿಲ್ಲ ಎಂದು ನಾವು ತಿಳಿಸಿದ್ದೇವೆ. ಇಂತಹ ಘಟನೆಗಳು ನಡೆದದ್ದು ವರದಿಯಾದರೆ ನಮ್ಮ ಗಮನಕ್ಕೆ ತನ್ನಿ, ಕ್ರಮ ಜರುಗಿಸುತ್ತೇನೆ” ಎಂದಿದ್ದಾರೆ.

ಶಿವಮೊಗ್ಗ ಡಿಡಿಪಿಐ ಎಂ.ಎನ್‌.ರಮೇಶ್‌ ಅವರೊಂದಿಗೆ ಮಾತನಾಡುತ್ತಾ, ಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಮಾತು ಮುಂದುವರಿಸಿದ ಡಿಡಿಪಿಐ, “ನಾನು ಅಷ್ಟೊಂದು ಬುದ್ಧಿವಂತನಲ್ಲ. ರಾಜ್ಯಾದ್ಯಂತ ಇದೇ ಪ್ರಕರಣ ನಡೆಯುತ್ತಿದೆ. ನಾವು ಕೆಲವು ಕಡೆ ವಿದ್ಯಾರ್ಥಿಗಳನ್ನು ತಡೆದಿದ್ದೇವೆ. ಕೋರ್ಟ್ ಆದೇಶವನ್ನು ಸರಿಯಾಗಿ ತಿಳಿದುಕೊಂಡು ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ಸೂಫಿ ಸಂತರ ನಾಡು ಹೈದ್ರಾಬಾದ್ ಕರ್ನಾಟಕ. ಬಹುಶಃ ಅತಿ ಹೆಚ್ಚು ಕೋಮು ಸೌಹಾರ್ದತೆಯನ್ನು ಇಲ್ಲಿ ಕಾಣಬಹುದು. ಇಂತಹ ಹೈದ್ರಾಬಾದ್ ಕರ್ನಾಟಕಕ್ಕೆ ಸೇರಿದ ಯಾದಗಿರಿ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದ ಘಟನೆಯ ಕುರಿತು ಅಲ್ಲಿನ ಡಿಡಿಪಿಐ ಪ್ರತಿಕ್ರಿಯೆಯನ್ನು ನಾವು ಪಡೆದವು. ಡಿಡಿಪಿಐ ಶಾಂತಗೌಡ ಪಾಟೀಲ್‌ ಬಹಳ ವಿಷಾದದಿಂದ ಮಾಧ್ಯಮಗಳ ಕುರಿತು ಮಾತನಾಡಿದರು.

“ಶಾಲೆಗಳು ಸೋಮವಾರ ರೀಓಪನ್ ಆದವು. ಸಾಮಾನ್ಯವಾಗಿ ಎಂದಿನಂತೆ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದರು. ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತಿದ್ದೇವೆ. ಯಾವುದೇ ವಿವಾದ ಇಲ್ಲಿನ ಶಾಲೆಯಲ್ಲಿ ಇರಲಿಲ್ಲ. ಆದರೆ ಕೆಲವು ಮಾಧ್ಯಮಗಳು ಮುಂಚಿತವಾಗಿ ಹೋಗಿ ಇದನ್ನು ವಿವಾದ ಮಾಡಿವೆ. ಇಲ್ಲಿನ ಸಾರ್ವಜನಿಕರಿಗೆ ಈ ಕುರಿತು ಆಸಕ್ತಿಯೂ ಇಲ್ಲ. ವಿರೋಧನೂ ಇಲ್ಲ. ಪರವಾದ ವಾದವೂ ಇಲ್ಲ. ಆದರೆ ಮಾಧ್ಯಮಗಳು ಮಾತ್ರ ಇದನ್ನು ಸೃಷ್ಟಿಸುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕೋರ್ಟ್ ಆದೇಶದಂತೆ ಸರ್ಕಾರದ ಆದೇಶವಿತ್ತು. ಹೀಗಾಗಿ ಜಿಲ್ಲಾಡಳಿತ ನಮಗೆ ಸೂಚನೆ ನೀಡಿತ್ತು. ತರಗತಿಯಲ್ಲಿ ಕೂತಾಗ ಮಾತ್ರ ಹಿಜಾಬ್‌ ಧರಿಸದಿರಲು ಹೇಳಿದ್ದೆವು. ಆದರೆ ಶಾಲೆ ಆರಂಭಕ್ಕೂ ಮುನ್ನ ಮಾಧ್ಯಮಗಳು ಅಲ್ಲಿಗೆ ಹೋಗಿ- ನೋಡಿ, ಹಿಜಾಬ್ ಧರಿಸಿದ್ದಾರೆ, ಹಾಗೇ ಹೀಗೆ ಎಂದು ಸುದ್ದಿ ಮಾಡಲು ಶುರುಮಾಡಿದವು. ಈ ಮಾಧ್ಯಮಗಳು ಹೀಗೆ ನ್ಯೂಸ್ ಮಾಡುತ್ತಿರುವುದರಿಂದಲೇ ಸಮಸ್ಯೆಗಳು ಆಗುತ್ತಿರುವುದು” ಎಂದು ಅಭಿಪ್ರಾಯಪಟ್ಟರು ಶಾಂತಗೌಡ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...