ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು, ರಾಜಧಾನಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಯೋಜನೆಯ ಬಗ್ಗೆ ತಮಿಳುನಾಡಿನಿಂದ ವಿರೋಧ ದಶಕಗಳಿಂದಲೇ ಇದೆ. ಭಾನುವಾರ ಇದೇ ವಿಚಾರಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದೆ.
ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ. ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಸಭೆಯಲ್ಲಿ 3 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ಕಾನೂನು ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆದಿದೆ. ಅಲ್ಲದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತಮಿಳುನಾಡು ಸರ್ಕಾರದ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು
1.ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು. 2. ಸರ್ವ ಪಕ್ಷ ಸದಸ್ಯರು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಅವರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು. 3. ಇದೇ ಸಂಧರ್ಭದಲ್ಲಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದು ಎಂದು ತಮೂರು ನಿರ್ಣಯಗಳನನ್ನು ತೆಗೆದುಕೊಳ್ಳಲಾಗಿದೆ.
ಇನ್ನು ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು.
“ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿದ್ದು, ತೀರ್ಪು ಬರುವವರೆಗೆ ಯೋಜನೆಗೆ ಅನುಮತಿ ನೀಡಬೇಡಿ. ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ” ಎಂದು ದೂರು ನೀಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ’ನೂರು ವರ್ಷ ಆದರೂ, ಅವರದ್ದು ಇದೇ ಅಜೆಂಡಾ ಇದೆ. ಡಬಲ್ ಇಂಜಿನ್ ಸರ್ಕಾರ ಇದೆಲ್ಲ ಕ್ಲಿಯರ್ ಮಾಡುತ್ತೇವೆ ಎಂದಿದ್ದರು. ಆದರೆ, ಈಗ ಏನು ಮಾಡ್ತಿದ್ದಾರೆ..? ತಮಿಳುನಾಡಿಗೆ ಒಪ್ಪಂದದ ಪ್ರಕಾರ ನೀರು ಹರಿಯುತ್ತಿದೆ. ಇದರಲ್ಲಿ ನಮ್ಮದು ಯಾವ ತಕರಾರಿಲ್ಲ. ಯೋಜನೆಯಿಂದ ಯಾವ ಸಮಸ್ಯೆಯಿಲ್ಲ, ಕಂದಾಯ ಭೂಮಿ ಹೆಚ್ಚು ಹೋಗಲ್ಲ. ಅರಣ್ಯದ ಸ್ವಲ್ಪ ಭಾಗ ಯೋಜನೆಗೆ ಹೋಗುತ್ತೆ. ಈ ಯೋಜನೆ ಕನಕಪುರಕ್ಕಾಗಿ ನಾವು ತಂದಿಲ್ಲ’ ಎಂದಿದ್ದಾರೆ.
’ತಮಿಳುನಾಡು ಬೇಕಾದರೆ ಒತ್ತಡ ಹಾಕಲಿ. ನಾಳೆಯೇ ಯೋಜನೆಗೆ ಅಡಿಗಲ್ಲು ಹಾಕಲಿ, ಕೆಲಸ ಆರಂಭಿಸಲಿ, ಭೂಮಿ ಪೂಜೆ ಮಾಡಿಬಿಡಲಿ. ಯಡಿಯೂರಪ್ಪ ತಮಿಳುನಾಡು ಸಿಎಂಗೆ ಪತ್ರ ಬರೆದಿದ್ದೇ ತಪ್ಪು. ನಮಗೆ ಯೋಜನೆ ಮಾಡಲು ಯಾರ ಒಪ್ಪಿಗೆ ಬೇಕಿಲ್ಲ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.
ಇದನ್ನೂ ಓದಿ: ಮೇಕೆದಾಟು ಯೋಜನೆ: ವಾರಾಂತ್ಯದಲ್ಲಿ ಪರಿಣಿತರ ಜೊತೆ ಸಿಎಂ ಸಭೆ- ಬಸವರಾಜ ಬೊಮ್ಮಾಯಿ