Homeಕರ್ನಾಟಕ‍ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

‍ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ಡಿ.ಕೆ.ಸುರೇಶ್‌ ಮತ್ತು ಅಶ್ವತ್ಥ್‌ ನಾರಾಯಣ್ ನಡುವಿನ ಗಲಾಟೆಯ ಕುರಿತು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್‌ ನಾರಾಯಣ್ ಅವರ ನಡುವೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ರಾಮನಗರದ ಘಟನೆ ಒಬ್ಬ ಸಚಿವರ ದುರಹಂಕಾರದ ಪರಮಾವಧಿ. ಸಚಿವ ಅಶ್ವತ್ಥ್‌ ನಾರಾಯಣ ಅವರು ಮುಖ್ಯಮಂತ್ರಿಯನ್ನು ಕರೆದುಕೊಂಡು ಬಂದಿದ್ದಾರೆ. ಅವರು ಮುಖ್ಯಮಂತ್ರಿಗಳಿರುವ ವೇದಿಕೆಯಲ್ಲಿ ಏನು ಮಾತನಾಡಬೇಕು, ಅವರಿಗೆ ಯಾವ ರೀತಿ ಗೌರವ ಕೊಡಬೇಕು ಎಂಬ ಪರಿಜ್ಞಾನ ಇರಬೇಕು” ಎಂದು ತಿಳಿಸಿದರು.

ರಾಜಕಾರಣದಲ್ಲಿ ಜೈಕಾರ ಹಾಕುವವರು, ಧಿಕ್ಕಾರ ಕೂಗುವವರು, ಕಲ್ಲು, ಮೊಟ್ಟೆ, ಟೊಮೆಟೋ ಹೊಡೆಯುವವರು ಇರುತ್ತಾರೆ. ಯಾವುದೋ ಸನ್ನಿವೇಶದಲ್ಲಿ ದಲಿತರಿಗೆ ನೋವಾಗಿದ್ದು, ಅವರು ಘೋಷಣೆ ಕೂಗಿದ್ದಾರೆ. ಇಂತಹ ಘಟನೆಯನ್ನು ನಾವೂ ಎದುರಿಸಿದ್ದೇವೆ ಎಂದು ಪ್ರತಿಕ್ರಿಯಿಸಿದರು.

ಸಭೆಯನ್ನು ಹೇಗೆ ನಿಭಾಯಿಸಬೇಕು. ಸಿಎಂ ಬಂದ ಸಂದರ್ಭದಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಕನಿಷ್ಟ ಜ್ಞಾನ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಇರಬೇಕು. ಅವರಿಗೆ ಆ ಜ್ಞಾನ ಇಲ್ಲವೋ, ಸಮಯಪ್ರಜ್ಞೆ ಇಲ್ಲವೋ, ಇದು ಅವರ ಸಂಸ್ಕೃತಿಯೋ ಗೊತ್ತಿಲ್ಲ. ಇಲ್ಲಿ ಯಾವುದನ್ನೂ ಕತ್ತಲಲ್ಲಿ ಇಡಲು ಸಾಧ್ಯವಿಲ್ಲ ಎಂದರು.

ನನ್ನ ಸೋದರಿ ಅನಿತಾ ಅವರ ಮನಸಿಗೂ ನೋವಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಮುಖ್ಯಮಂತ್ರಿಗಳು ಕೂಡ ಆ ರೀತಿ ಮಾತಾಡುವುದು ಬೇಡ, ನಿಲ್ಲಿಸು ಎಂದು ಆ ಸಚಿವರಿಗೆ ಸನ್ನೆ ಮಾಡುತ್ತಾರೆ. ಆದರೂ ಅವರು ನಿಲ್ಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆ ಕೆಂಗಲ್ ಹನುಮಂತಯ್ಯ, ರಾಮಕೃಷ್ಣ ಹೆಗಡೆ, ದೇವೇಗೌಡರು, ಎರಡು ಬಾರಿ ಕುಮಾರಸ್ವಾಮಿ ಅವರನ್ನು, 2 ಕಿ.ಮೀ. ದೂರದಲ್ಲಿನ ಎಸ್.ಎಂ. ಕೃಷ್ಣ ಅವರನ್ನು ಸಿಎಂ ಆಗಿ ಕೊಟ್ಟಂತಹ ಜಿಲ್ಲೆ. ಪ್ರತಿ ಮನೆಗೂ ರಾಜಕಾರಣ ಗೊತ್ತಿದೆ. ನಾವು ಅಶ್ವತ್ ನಾರಾಯಣ್ ಅವರಷ್ಟು ದೊಡ್ಡವರಲ್ಲ, ಎಳಸು ಇರಬಹುದು. ಆದರೆ ರಾಮನಗರ ಜಿಲ್ಲೆಯವರು ಅವರ ಬೆದರಿಕೆಗೆ ಹೆದರುವ ಮಕ್ಕಳಲ್ಲ ಎಂದು ಸ್ಪಷ್ಟಪಡಿಸಿದರು.

ಅವರು ಬಂದಿರುವುದು ಬೆಂಗಳೂರು ಕಟ್ಟಿದ ಕೆಂಪೇಗೌಡರು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಕ್ಕೆ. ಅದನ್ನು ಮಾಡಿಸಿದ್ದು ಇವರಲ್ಲ. ಜಿಲ್ಲಾ ಮಂತ್ರಿಯಾಗಿದ್ದಾಗ ನಾನು ಹಾಗೂ ಎಲ್ಲರೂ ಸೇರಿ ನಿರ್ಮಾಣ ಮಾಡಿದ ಪ್ರತಿಮೆ ಎಂದು ಹೇಳಿದರು.

ಅವರು ಅವರ ಪಕ್ಷದ ವೇದಿಕೆಯಲ್ಲಿ ಏನು ಬೇಕಾದರೆ ಹೇಳಿಕೊಳ್ಳಲಿ. ಇದು ಸಿಎಂ ಅವರ ಸಭೆ. ಸಿಎಂ ಇಳಿಸಲು ಮೊದಲಿನಿಂದಲೂ ಬಿಜೆಪಿಯಲ್ಲಿ ಪ್ರಯತ್ನ ನಡೆಯುತ್ತಿದೆ. ಯಡಿಯೂರಪ್ಪನವರನ್ನು ಇಳಿಸಲು ದೊಡ್ಡ ಷಡ್ಯಂತ್ರ ಮಾಡಿದ್ದರು. ಈಗ ಬೊಮ್ಮಾಯಿ ಅವರನ್ನು ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಟ್ ಕಾಯಿನ್ ವಿಚಾರ ತೆಗೆದುಕೊಳ್ಳಿ, ಬೇರೆ ವಿಚಾರ ತೆಗೆದುಕೊಳ್ಳಿ ಎಂದು ನಮಗೆ ಮಾಹಿತಿ ಕೊಟ್ಟವರೇ ಬಿಜೆಪಿಯವರು, ಇದೇ ಅಶ್ವಥ್ ನಾರಾಯಣ್. ಈ ವಿಚಾರಗಳ ಬಗ್ಗೆ ಸಮಯ ಬಂದಾಗ ನಾವು ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದರು.

ಈಗಲೂ ಗುತ್ತಿಗೆದಾರರ ಕಮಿಷನ್ ವಿಚಾರ ಬಳಸಿಕೊಳ್ಳುತ್ತಿದ್ದಾರೆ. ಅವರ ಆಂತರಿಕ ಸಮಸ್ಯೆಗೆ ಮುಖ್ಯಮಂತ್ರಿಗಳನ್ನು ವೇದಿಕೆ ಮೇಲೆ ಕೂರಿಸಿಕೊಂಡು ಅಪಮಾನ ಮಾಡಿದರೆ ಅದು ಸರಿಯೇ? ಮಾಡಲಿ ಬಿಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅನಿತಕ್ಕ ಹಾಗೂ ಮುಖ್ಯಮಂತ್ರಿಗಳೇ ಅವರ ಮಾತು ಸರಿಯಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮೇಲೆ ಅದರ ಬಗ್ಗೆ ನಾನು ಹೇಳುವುದಾದರೂ ಏನಿದೆ. ಅವರ ಎಲ್ಲ ಸವಾಲುಗಳನ್ನು ಎದುರಿಸಲು ನಾವು ಸಿದ್ಧ ಎಂದರು.

ಇದು ಮುಖ್ಯಮಂತ್ರಿ, ಅವರ ಪಕ್ಷ, ಆರ್‌‌ಎಸ್‌ಎಸ್‌, ಜಿಲ್ಲಾಡಳಿತ, ಜಿಲ್ಲೆಯ ಜನರಿಗೆ ಆಗಿರುವ ಅಪಮಾನ. ಇಂಥವರು ಮಂತ್ರಿಯಾಗಿರುವುದೇ ದೊಡ್ಡ ಅವಮಾನ. ಅವರು ಯಾವ ಅಭಿವೃದ್ಧಿ ಮಾಡಿದ್ದಾರೆ. ಅಭಿವೃದ್ಧಿ ಎಂದರೆ ಏನು ಎಂದು ನನಗೂ ತಿಳಿಸಲಿ. ನಾನು ಏಳು ಬಾರಿ ಶಾಸಕನಾಗಿದ್ದೇನೆ, ನನಗೂ ತಿಳಿಸಲಿ. ನಾಳೆ ಅವರೇ ಸಮಯ ನಿಗದಿ ಮಾಡಲಿ. ನಾವು ಬಂದು ತಿಳಿದುಕೊಳ್ಳುತ್ತೇವೆ ಎಂದು ಸವಾಲು ಹಾಕಿದರು.

ಅಂಬೇಡ್ಕರ್ ಪ್ರತಿಮೆ ಅವರು ನಿರ್ಮಿಸಿದರಾ? ಅವರೇನು ಆಣೆಕಟ್ಟು ಕಟ್ಟಿದ್ದಾರಾ? ನರೇಗಾ ಯೋಜನೆಯಲ್ಲಿ ಯಾವುದಾದರೂ ಊರಿನ ಅಂತರ್ಜಲ ಹೆಚ್ಚಿಸಿದ್ದಾರಾ? ಕಟ್ಟಡ ಕಟ್ಟಿದ್ದಾರಾ? ರಸ್ತೆ ಮಾಡಿಸಿದ್ದಾರಾ? ಶಾಲೆ ನಿರ್ಮಿಸಿದ್ದಾರಾ? ಅವರು ಒಂದು ದಿನ ನನ್ನ ಜತೆ ಮಾತನಾಡಿಲ್ಲ. ಯಾವುದೂ ಗೊತ್ತಿಲ್ಲ. 900 ಕೋಟಿ ರೂ. ಎಲ್ಲಿ ಕೊಟ್ಟಿದ್ದಾರೆ? ಸರ್ಕಾರದಿಂದ ಅನುದಾನ ಹೋಗುತ್ತಿದೆಯಾ, ಅದೂ ಗೊತ್ತಿಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನಕ್ಕೆ ನಾವು ಗೌರವ ನೀಡುತ್ತೇವೆ. ಅವರನ್ನು ವೈಯಕ್ತಿಕವಾಗಿ ನಾವು ಮೆಚ್ಚಿಕೊಳ್ಳುತ್ತೇವೆ. ಹಾಗೆಂದು ಅವರ ಸಮ್ಮುಖದಲ್ಲಿ ಮಂತ್ರಿಯೊಬ್ಬರು ಹೇಳಿದ್ದನ್ನೆಲ್ಲ ಕೇಳಿಸಿಕೊಂಡು ಕೂರಲು ಸಾಧ್ಯವೇ? ನಮಗೂ ಸ್ವಾಭಿಮಾನ ಇದೆ. ವೇದಿಕೆ ಮೇಲೆ ಕೂರಿಸಿ ನೀವು ಗಂಡಸಾ ಎಂದು ಕೇಳಿದರೆ ಸುಮ್ಮನೆ ಕೂರಲು ಸಾಧ್ಯವೇ? ರಾಜಕೀಯ, ಅಧಿಕಾರ ಬರುತ್ತದೆ ಹೋಗುತ್ತದೆ. ಆದರೆ ಅವರಿಗೆ ಗೊತ್ತಿರಲಿ. ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರಿನ ಜನರ ರಕ್ತವೇ ಬೇರೆ ಎಂದು ಎಂದು ಎಚ್ಚರಿಸಿದರು.


ಇದನ್ನೂ ಓದಿರಿ: ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...