ತವರು ಜಿಲ್ಲೆ ಶಿವಮೊಗ್ಗ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಬಿಜೆಪಿಯ ಹಿರಿಯ ಮುಖಂಡ ಮತ್ತು ಸಚಿವ ಕೆ.ಎಸ್ ಈಶ್ವರಪ್ಪ ಅವರು ಅಂತರ ಕಾಯ್ದುಕೊಂಡಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಈಶ್ವರಪ್ಪನವರು ಭಾಗವಹಿಸದೇ ಈ ಇಬ್ಬರೂ ನಾಯಕರ ನಡುವಿನ ಮುನಿಸು ಇದೆ ಎಂಬ ಚರ್ಚೆಗೆ ಸಾಕ್ಷಿಯಾಗಿದ್ದಾರೆ.
ಸಿ.ಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದ ಶಾಸಕ ಬಸನಗೌಡ ಯತ್ನಾಳ್ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದ ಸಚಿವ ಈಶ್ವರಪ್ಪ ಅವರು ಇಂದು ತಮ್ಮದೇ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಮನೆಯಲ್ಲೆ ಉಳಿದಿದ್ದಾರೆ.
ನಿಗದಿತ ಸಾಹಿತ್ಯ ಗ್ರಾಮ ಮತ್ತು ಸರ್ಕಾರಿ ನೌಕರರ ಸಂಘದ ಸಭಾಂಗಣ ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರೆವೇರಿಸಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಬೇಕಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರೂ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಈಶ್ವರಪ್ಪ ಅವರು ಗೈರುಹಾಜರಾಗಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಹಬ್ಬ ಮತ್ತು ಹಿರಿಯರ ಪೂಜೆ ನೆಪದಲ್ಲಿ ಸಿ.ಎಂ ಜೊತೆ ವೇದಿಕೆ ಹಂಚಿಕೊಳ್ಳದೆ ಮನೆಯಲ್ಲೆ ಉಳಿದ ಈಶ್ವರಪ್ಪನವರ ನಡೆ ಕುತೂಹಲ ಹುಟ್ಟಿಸಿದೆ. ಈ ಇಬ್ಬರೂ ನಾಯಕರ ನಡುವಿನ ರಾಜಕೀಯ ವೈಷಮ್ಯ ಕುರಿತು ಪಕ್ಷದ ವಲಯದಲ್ಲೆ ತರಾವರಿ ಮಾತುಗಳು ಕೇಳಿಬರುತ್ತಿವೆ.
ಜಿಲ್ಲೆಯ ಎಂ.ಎಡಿಬಿ, ನಗರಾಭಿವೃದ್ಧಿ ಪ್ರಾಧಿಕಾರ, ಕಾಡಾ ಗಳಿಗೆ ಅಧ್ಯಕ್ಷರ ನೇಮಕಾತಿ ಹಾಗೂ ವಿವಿಧ ನಿಗಮಗಳಿಗೆ ಸದಸ್ಯರ ನೇಮಕಾತಿ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ತಮ್ಮನ್ನು ನಿರ್ಲಕ್ಷಿಸಲಾಗಿದೆ. ಪಕ್ಷದ ಸಕ್ರಿಯ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನ ಈಶ್ವರಪ್ಪ ಅವರ ಮುನಿಸಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಜಿಲ್ಲೆಯ ವಿಚಾರಗಳಲ್ಲಿ ಸಂಸದ ಬಿ.ವೈ ರಾಘವೇಂದ್ರ ಮತ್ತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರ ಮಾತಿಗೆ ಹೆಚ್ಚಿನ ಮನ್ನಣೆ ಸಿಗುತ್ತಿರುವುದು ಈಶ್ವರಪ್ಪ ಅವರನ್ನು ಕೆರಳಿಸಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ. ಇದೇ ಕಾರಣಕ್ಕೆ ಇಂದು ಈಶ್ವರಪ್ಪನವರು ಇಂದಿನ ಸಿ.ಎಂ ಕಾರ್ಯಕ್ರಮಗಳಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಯಡಿಯೂರಪ್ಪನವರು ಹೋದರೆ ಮುನಿರತ್ನ ಕಥೆ ಗೋವಿಂದ: ಡಿ.ಕೆ. ಶಿವಕುಮಾರ್