ತಮ್ಮ ವಿರುದ್ಧ ಎದುರಾಗಿರುವ ಬ್ಯಾಂಕ್ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್ಐಆರ್ ರದ್ದುಗೊಳಿಸಲು ಕೋರಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಬರೋಬ್ಬರಿ ₹439 ಕೋಟಿ ರೂಪಾಯಿ ಪಾವತಿಸದೇ ವಂಚಿಸಿರುವ ಆರೋಪವನ್ನು ರಮೇಶ್ ಜಾರಕಿಹೊಳಿ ಎದುರಿಸುತ್ತಿದ್ದಾರೆ.
ಶಾಸಕ ರಮೇಶ್ ಜಾರಕಿಹೊಳಿಯಿಂದ ಬ್ಯಾಂಕ್ಗೆ ₹439 ಕೋಟಿ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ #KarnatakaHighCourt #RameshJarakiholi https://t.co/NlMix4aET3
— ಬಾರ್ & ಬೆಂಚ್ – Kannada Bar & Bench (@Kbarandbench) January 19, 2024
ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ, ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್ ಪಾಟೀಲ್ ಮತ್ತು ಶಂಕರ್ ಪವಾಡೆ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.
ವಾದ ಆಲಿಸಿದ ನ್ಯಾಯ ಪೀಠವು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಏನಿದು ಪ್ರಕರಣ? ಬೆಳಗಾವಿಯ ಗೋಕಾಕ್ನಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮತ್ತು ಅದರ ಸಮೂಹದ ಬ್ಯಾಂಕ್ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ 12.07.2013 ರಿಂದ 31.03.2017ರ ಅವಧಿಯಲ್ಲಿ ₹232.88 ಕೋಟಿ ಸಾಲ ಪಡೆಯಲಾಗಿತ್ತು. ಇದು ಬಡ್ಡಿ ಸೇರಿ ₹439.7 ಕೋಟಿಗೆ ಏರಿಕೆಯಾಗಿದ್ದರೂ ಪಾವತಿಸಿರಲಿಲ್ಲ.
ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್ ಕಂಪೆನಿಯಲ್ಲಿ ರಮೇಶ್ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್ ಮತ್ತು ಶಂಕರ್ ಅವರು ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಅರ್ಜಿದಾರರು ಕಂಪೆನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಸಂಬಂಧಪಡದ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ.
ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ನೀಡಿದ ದೂರಿನ ಅನ್ವಯ ಬೆಂಗಳೂರಿನ ವಿ ವಿ ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ಗಳಾದ 406,420&34ರ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲ ಕಾಂಗ್ರೆಸ್ನಿಂದ ಉಚ್ಚಾಟನೆ