ರಾಜ್ಯದಲ್ಲಿ 25 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ತಾನು ಸ್ಪರ್ಧಿಸಿದ್ದ 20 ಸ್ಥಾನಗಳ ಪೈಕಿ 11ರಲ್ಲಿ ಗೆಲುವು ಸಾಧಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಕೂಡಾ 20 ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿಗೆ ಸಮಾನವಾಗಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಸಾಧನೆ ಮಾಡಿದೆ.
2015ರ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದಿತ್ತು. ಈ ನಡುವೆ ಜೆಡಿಎಸ್ ಎರಡು ಕ್ಷೇತ್ರಕ್ಕೆ ಸಮಾಧಾನ ಪಟ್ಟುಕೊಂಡರೆ, ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ.
ಇದನ್ನೂ ಓದಿ:ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ: ಪರಿಷತ್ ಫಲಿತಾಂಶ ಕುರಿತು ಎಚ್ಡಿಕೆ ಪ್ರತಿಕ್ರಿಯೆ
ಪರಿಷತ್ಗೆ ಡಿಸೆಂಬರ್ 10 ರಂದು ಚುನಾವಣೆ ನಡೆದಿತ್ತು. 75 ಸದಸ್ಯ ಬಲದ ಪರಿಷತ್ನಲ್ಲಿ ಪಕ್ಷವು ಈಗ ಬಹುಮತ ಪಡೆದಿದೆ ಎಂದು ಆಡಳಿತಾರೂಢ ಬಿಜೆಪಿ ನಾಯಕರು ಹೇಳಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಮಾತನಾಡಿ, ಪರಿಷತ್ತಿನಲ್ಲಿ ಬಿಜೆಪಿಗೆ ಹೆಚ್ಚಿನ ಬಲ ಬಂದಿದ್ದು, ಇದರಿಂದ ಯಾವುದೇ ತೊಂದರೆಯಿಲ್ಲದೆ ಹೊಸ ಕಾರ್ಯಕ್ರಮಗಳು ಮತ್ತು ಕಾನೂನುಗಳನ್ನು ತರಲು ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಇದು ಜನಪರ ಆಡಳಿತ ನೀಡಲು ಸರ್ಕಾರವನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಶುರುವಾಗಿದ್ದು, ಇಲ್ಲಿ ಪಕ್ಷದ ಬೇರುಗಳು ಮತ್ತೆ ಗಟ್ಟಿಯಾಗುತ್ತಿವೆ ಎನ್ನುವುದಕ್ಕೆ ಪರಿಷತ್ ಚುನಾವಣೆ ಫಲಿತಾಂಶ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಆರು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಜನತಾದಳ (ಜಾತ್ಯತೀತ) ಪಕ್ಷವು ಕೇವಲ ಒಂದು ಸ್ಥಾನವನ್ನು ಗೆದ್ದಿದ್ದು, ಭಾರಿ ಆಘಾತವನ್ನು ಅನುಭವಿಸಿದೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್ ರೇವಣ್ಣ ಅವರು ಹಾಸನ ಸ್ಥಳೀಯ ಸಂಸ್ಥೆ ಕ್ಷೇತ್ರದಿಂದ ಪರಿಷತ್ ಸದಸ್ಯರಾಗಿ ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ:ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?