Homeಮುಖಪುಟರೈತರು, ಜನಸಾಮಾನ್ಯರು ಮೂಢಾತ್ಮರಲ್ಲ, ಬದಲಿಗೆ ಮೋದಿಶಾ ವಂಚಕಾತ್ಮರು | ದೇವನೂರ ಮಹಾದೇವ

ರೈತರು, ಜನಸಾಮಾನ್ಯರು ಮೂಢಾತ್ಮರಲ್ಲ, ಬದಲಿಗೆ ಮೋದಿಶಾ ವಂಚಕಾತ್ಮರು | ದೇವನೂರ ಮಹಾದೇವ

ಕಾಯ್ದೆಗಳಲ್ಲಿ ಬಳಸಿರುವ ಒಕ್ಕಣೆಗಳೊ ಮೋಹಕವಾಗಿವೆ, ’ಪ್ರಚಾರ ಮತ್ತು ಸೌಲಭ್ಯ’ ಅಂತೆ ಹಾಗೂ ’ಸಬಲೀಕರಣ ಮತ್ತು ಸಂರಕ್ಷಣೆಯಂತೆ!’ ಬಣ್ಣಬಣ್ಣದ ಮಾತುಗಳು ಜನ ಸಾಮಾನ್ಯರಿಗೆ; ಬಂಡವಾಳ ಮಾತ್ರ ಬಂಡವಾಳಷಾಹಿಗಳಿಗೆ.

- Advertisement -
- Advertisement -

ಪ್ರೊ. ಎಂ. ಡಿ. ನಂಜುಂಡಸ್ವಾಮಿಯವರು ಅವರು ಬದುಕಿದ್ದರೆ ಅವರಿಗೆ 84 ತುಂಬಿ 85 ನಡೆಯುತ್ತಿತ್ತು. ಮುವ್ವತ್ತು ವರ್ಷಗಳ ಹಿಂದೆ, ವಿಶ್ವ ವಾಣಿಜ್ಯ ಸಂಸ್ಥೆ (WTO), ಕಾರ್ಪೊರೇಟ್ ಕಂಪನಿಗಳ ಬಗ್ಗೆ ನಂಜುಂಡಸ್ವಾಮಿಯವರು ಆಡುತ್ತಿದ್ದ ಮಾತುಗಳನ್ನು ಇಂದು ಇಡೀ ದೇಶ ಮಾತಾಡುತ್ತಿದೆ, ಹಳ್ಳಿಗಾಡಿನ ಅನಕ್ಷರಸ್ಥರೂ ಕೂಡ ಮಾತಾಡುತ್ತಿದ್ದಾರೆ. ಒಬ್ಬ ವ್ಯಕ್ತಿ ಬದುಕಿರಲಿ ಅಥವಾ ಕಾಲವಶನಾಗಿರಲಿ ಇದಕ್ಕಿಂತ ದೊಡ್ಡಗೌರವ, ಇದಕ್ಕಿಂತ ಸ್ಮರಣೆ ಬಹುಶಃ ಬೇರೊಂದಿಲ್ಲವೇನೊ.

ನನಗೆ ಸುಮ್ಮನೆ ಒಂದು ಕುತೂಹಲ ಅಷ್ಟೆ – ಪ್ರೊ. ನಂಜುಂಡಸ್ವಾಮಿಯವರು ಬದುಕಿದ್ದರೆ ಈಗ ಎಲ್ಲಿರುತ್ತಿದ್ದರು? ಅಮೃತ ‌ಭೂಮಿ? ಡೆಲ್ಲಿ ಗಡಿಗಳಲ್ಲಿ ರೈತರೊಡನೆ? ಎಲ್ಲಿ ಇರುತ್ತಿದ್ದರು? ನನಗನ್ನಿಸುತ್ತದೆ, ಬಹುಶಃ ಅವರಿಗೆ ಈ ಅವಕಾಶವೇ ಸಿಗುತ್ತಿರಲಿಲ್ಲ. ನನಗೆ ಗ್ಯಾರಂಟಿ ಇದೆ, UAPA ಅಂದರೆ – Unlawful Activities (Prevantion) Act, ಅಂದರೆ ‘ಕಾನೂನು ಬಾಹಿರ (ತಡೆ) ಕಾಯ್ದೆ’ ಅಂತಾರಲ್ಲ, ಈ ಕಾಯ್ದೆ ಅನ್ವಯ ವಿಚಾರಣೆಯೂ ಇಲ್ಲದೆ ಬಂಧನದಲ್ಲಿರುತ್ತಿದ್ದರು. ಜೊತೆಗೆ ’ದೇಶದ್ರೋಹಿ’ ಅಂತಲೂ ಅನ್ನಿಸಿಕೊಳ್ಳುತ್ತಿದ್ದರು.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಇಂದು ಎಂ. ಡಿ. ನಂಜುಂಡಸ್ವಾಮಿ ಅವರಂತಹ ಪ್ರಖರ ಚಿಂತಕರು, ಹೋರಾಟಗಾರರು ‘ದೇಶದ್ರೋಹಿ’ಗಳು ಎಂದು ಕರೆಸಿಕೊಳ್ಳುತ್ತಾ ‘ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯ್ದೆ’ ಅನ್ವಯ ವಿಚಾರಣೆ ಇಲ್ಲದೆ ಬಂಧನದಲ್ಲಿರುವುದನ್ನು ನೋಡಿದಾಗ ಇದನ್ನಿಸುತ್ತದೆ. ಇಂದು ಗಾಂಧಿ, ಅಂಬೇಡ್ಕರ್, ಜೆ.ಪಿ. ಬದುಕಿದ್ದರೂ ಕೂಡ ಅವರ ಗತಿಯೂ ಇದಕ್ಕಿಂತ ಭಿನ್ನವಾಗಿರುತ್ತಿತ್ತು ಎಂದು ಹೇಳುವ ಧೈರ್ಯ ನನಗಿಲ್ಲ.
ಆಗ, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದಲ್ಲಿ ಒಂದು ಕಂಪನಿ ಸರ್ಕಾರದ ಆಳ್ವಿಕೆ ಇತ್ತು. ಇಂದು ಅಂಬಾನಿ ಅದಾನಿ ಮತ್ತಿತರ ಹತ್ತಾರು ಕಂಪನಿ ಸರ್ಕಾರಗಳ ಆಳ್ವಿಕೆ ನಡೆಯುತ್ತಿದೆಯೇನೊ ಅನ್ನಿಸುತ್ತಿದೆ.

ಜನರಿಂದ ಆಯ್ಕೆಯಾದ ಯಾವ ಲಕ್ಷಣವೂ ಮೋದಿಶಾರ ಆಳ್ವಿಕೆಯಲ್ಲಿ ಕಾಣುತ್ತಿಲ್ಲ. ಯಾಕೆಂದರೆ, ಕಳೆದ ಎರಡುವರೆ ತಿಂಗಳಿಂದಲೂ ಲಕ್ಷಾಂತರ ಜನರು ರಾಜಧಾನಿ ದೆಹಲಿ ಗಡಿಯ ಸುತ್ತಲೂ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಪ್ರಾಣವನ್ನು ಪಣಕ್ಕಿಟ್ಟು ಕುಳಿತಿದ್ದರೂ, ಆ ಧರಣಿ ಸ್ಥಳದಲ್ಲೆ ನೂರಾರು ಜನರು ಸತ್ತಿದ್ದರೂ ಇಡೀ ದೇಶವೇ ಒಕ್ಕೊರಳಿನಿಂದ ಅದೇ ಬೇಡಿಕೆಗಳನ್ನು ಕೂಗಿ ಕೂಗಿ ಹೇಳುತ್ತಿದ್ದರೂ ಮೋದಿಶಾರು ಕಲ್ಲುಹೃದಯವರಾಗಿದ್ದಾರೆ. ಅವರ ನಡೆನುಡಿಗಳಲ್ಲಿ ಜನರಿಂದ ಆಯ್ಕೆಯಾದ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಈ ಅಂಬಾನಿ ಅದಾನಿ ಬಂಡವಾಳಶಾಹಿ ಕಂಪನಿ ಸರ್ಕಾರಗಳಿಂದ ನೇಮಕಗೊಂಡವರಂತೆ ಮೋದಿಶಾರವರು ವರ್ತಿಸುತ್ತಿದ್ದಾರೆ.

ಜೊತೆಗೆ, ಇದೆಂಥ ವಂಚಕ ರಾಜಕಾರಣವೆಂದರೆ, ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಮೋದೀಜಿಯವರು ಕನಿಷ್ಠ ಬೆಂಬಲ ಬೆಲೆ ಬಗ್ಗೆ ಮಾತಾಡುತ್ತಾ – ’ಎಂಎಸ್‌ಪಿ ಥಾ, ಹೈ, ರಹೇಗಾ’ ಅನ್ನುತ್ತಾರೆ. ಅಂದರೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹಿಂದೆಯೂ ಇತ್ತು, ಈಗಲೂ ಇದೆ ಮುಂದೆಯೂ ಇರುತ್ತೆ ಅಂತ, ಭೂತ ವರ್ತಮಾನ ಭವಿಷತ್ ಕಾಲ ನುಡಿಯುವ ಪ್ರವಾದಿಯಂತೆ ಗಂಭೀರವಾದ ಧ್ವನಿಯಲ್ಲಿ ಹೇಳುತ್ತಾರೆ.

ಇದನ್ನೂ ಓದಿ: ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ಆಯ್ತು, ಹಾಗಾದರೆ ಡೆಲ್ಲಿ ಸುತ್ತಲೂ ಲಕ್ಷಾಂತರ ಜನರು ಮನೆ ಮಠ ಕೆಲಸಕಾರ್‍ಯ ತೊರೆದು, ನೂರಾರು ಜನರು ಅಲ್ಲೆ ಸತ್ತರೂ ಅದನ್ನು ನುಂಗಿಕೊಂಡು, ಸರ್ಕಾರ + ಪೊಲೀಸ್ + ಬಿಜೆಪಿ ಸದಸ್ಯರು ಜೊತೆಗೂಡಿ ಕೊಡುತ್ತಿರುವ ಕಷ್ಟ ಕೋಟಲೆಗಳನ್ನು ಸಹಿಸಿಕೊಂಡು ಜೀವನ್ಮರಣದ ಪ್ರಶ್ನೆ ಎಂಬಂತೆ ಕೂತಿರುವುದಾದರೂ ಯಾಕೆ? ಆ ಮೂರು ಕೃಷಿ ಕಾಯ್ದೆಗಳು ಕರಾಳ ಶಾಸನಗಳೆಂದು ಇಡೀ ದೇಶ ಒಕ್ಕೊರಲಿನಿಂದ ಕೂಗುತ್ತಿರುವುದಾದರೂ ಯಾಕೆ? ಅವರೇನೂ ಮೂಢಾತ್ಮರೆ? ಖಂಡಿತಾ ಅಲ್ಲ. ಅವರು ಕೇಳುತ್ತಿರುವುದು ಇಷ್ಟೆ: ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಶಾಸನ ಮಾಡಿ ಎಂದಷ್ಟೆ. ಇದನ್ನು ಮಾಡದಿದ್ದರೆ ಅದು ಇದ್ದರೂ ಇಲ್ಲದಂತೆ ಅಂತ ರೈತಾಪಿ ಜನರ ಅಹವಾಲು. ರೈತರು, ಜನಸಾಮಾನ್ಯರು ಮೂಢಾತ್ಮರಲ್ಲ, ಬದಲಿಗೆ ಮೋದಿಶಾ ವಂಚಕಾತ್ಮರು. ಅವರು ಬೇಕಂತಲೇ ಕೇಳಿಸಿಕೊಳ್ಳುತ್ತಿಲ್ಲ. ಮತ್ತೆ ಇದು ಅವರಿಗೆ ಗೊತ್ತಿಲ್ಲ ಅಂತಲೂ ಅಲ್ಲ.

ನಂಜುಂಡಸ್ವಾಮಿ
PC: enacademic.com

ಹಾಗಾಗಿ ಪ್ರಧಾನಿ ಮೋದಿಯವರಿಗೆ ಒಂದು ಪ್ರಾರ್ಥನೆ ಮಾಡುತ್ತೇನೆ – ನೀವು ಬೇರೆ ಯಾರ ಮಾತನ್ನೂ ಕೇಳಿಸಿಕೊಳ್ಳುವುದಿಲ್ಲ. ಒಂದು ಮಾತು, ಅದು ನಿಮ್ಮದೇ ಮಾತು, ಅದನ್ನಾದರೂ ಕೇಳಿಸಿಕೊಳ್ಳುತ್ತೀರಾ? ಇಸವಿ 2011. ನೀವು ಆಗ ಗುಜರಾತ್ ಮುಖ್ಯಮಂತ್ರಿಗಳು. ಅಂದಿನ ಕಾಂಗ್ರೆಸ್ ಸರ್ಕಾರವು ಕೃಷಿ ಮಾರುಕಟ್ಟೆ ಸುಧಾರಣಾ ಸಮಿತಿಗೆ ನಿಮ್ಮನ್ನೆ ಅಧ್ಯಕ್ಷರನ್ನಾಗಿ ಮಾಡಿರುತ್ತದೆ. ಆಗ ನೀವು ವರದಿ ಕೊಡುತ್ತೀರಿ – ಏನಂತ? ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಕಡ್ಡಾಯಗೊಳಿಸಬೇಕು – ಅಂತ’. ಇನ್ನೂ ಮುಂದುವರಿದು ನೀವು, ನಿಮ್ಮ ವರದಿಯಲ್ಲಿ ’ರೈತ ಮತ್ತು ವ್ಯಾಪಾರಿಯ ನಡುವಣ ಯಾವುದೇ ಬೆಲೆಗಳಿಗೆ ಸಂಬಂಧಿಸಿದ ವ್ಯಾಪಾರಿ ಒಪ್ಪಂದವು ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಇರಬಾರದೆಂಬ ಕಾನೂನು ಮಾಡಬೇಕೆಂದು’ ಹೇಳಿರುತ್ತೀರಿ.

ಇವೆಲ್ಲಾ ನಿಮ್ಮದೇ ವರದಿಯ ಅಧಿಕೃತ ಮಾತುಗಳು. ಈಗ ಎಲ್ಲರೂ ಕೇಳುತ್ತಿರುವುದು ಇದನ್ನೆ. ಅಂದರೆ ನೀವು ವರದಿ ಕೊಟ್ಟಿದ್ದೀರಲ್ಲ ಅದನ್ನೆ. ನೀವು ಹೇಳಿದ್ದನ್ನೇ ಈಗ ರೈತರು ಒತ್ತಾಯಿಸುತ್ತಿದ್ದರೂ ನೀವು ಪಿಟೀಲು ಬಾರಿಸುತ್ತಿದ್ದೀರಿ. ಇದಕ್ಕೆ ಏನನ್ನ ಬೇಕು? ಪದಗಳು ಸಿಕ್ಕುತ್ತಿಲ್ಲ.

ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ಇನ್ನೊಂದು – ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಂ.ಸಿ.)ಗೆ ತಂದಿರುವ ತಿದ್ದುಪಡಿಯಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಯಾರಿಗೆ ಬೇಕಾದರೂ ಮಾರಾಟ ಮಾಡಬಹುದು ಎಂದಿದೆ. ಇದು ಖಾಸಗಿಗೆ ದಿಡ್ಡಿ ಬಾಗಿಲು ತೆರೆದಂತೆ. ನಮ್ಮದೇ ಒಂದು ಉದಾಹರಣೆ: ಮುವತ್ತು ವರ್ಷಗಳ ಹಿಂದೆ – ಕಾಫಿ ಮಾರಾಟ ಮಂಡಲಿಗೇ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬೇಕಿತ್ತು. ಕಾಫಿ ಮಾರಾಟ ಮಂಡಲಿಯಲ್ಲಿ ಭ್ರಷ್ಠಾಚಾರ ತಲೆದೋರಿ ಪ್ರತಿಭಟಿಸಿದಾಗ ಇದಕ್ಕೆ ಪರಿಹಾರ ಎಂಬಂತೆ ಖಾಸಗಿ ವ್ಯಾಪಾರಸ್ಥರು ರೈತರಿಂದ ನೇರವಾಗಿ ಕೊಂಡುಕೊಳ್ಳುವ ನಿಯಮ ಜಾರಿಗೆ ಬಂತು. ಈಗ? ಕಾಫಿ ಮಾರಾಟ ಮಂಡಲಿ ಖಾಸಗಿ ಹೊಡೆತಕ್ಕೆ ಅವಶೇಷವಾಗಿದೆ.

ಆಮೇಲೆ ಈಗ 2000 ರಿಂದ 2005 ರ ಅವಧಿಯಲ್ಲಿ ಕಾಫಿಗೆ ಏನು ಬೆಲೆ ಸಿಗುತ್ತಿತ್ತೊ 2020 ರಲ್ಲಿ ಅದಕ್ಕಿಂತ ಕಡಿಮೆಯಾಗಿದೆ. ಕಾಫಿ ಬೆಳೆಗಾರ ಕಣ್ಣುಬಾಯಿ ಬಿಡುತ್ತಿದ್ದಾನೆ. ಇನ್ನು ಮುಂದೆ ಎಲ್ಲ ಕೃಷಿ ಉತ್ಪನ್ನಗಳಿಗೂ ಆಗುವುದು ಇದೇನೆ. ಲಾಭವಿಲ್ಲದೆ, ಕೆಲವೊಮ್ಮೆ ನಷ್ಟಕ್ಕೆ ಕೂಡ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುತ್ತ ಜೀವಿಸುವ ಜೀವ ಈ ಭೂಮಿ ಮೇಲೆ ರೈತ ಮಾತ್ರ ಎಂದು ಕಾಣುತ್ತದೆ! ತೆರಿಗೆ ಕಟ್ಟುತ್ತೇವೆ ಎಂದು ಅಂದುಕೊಳ್ಳುವವರು, ಲಾಭವಿಲ್ಲದೆ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಸಮಾಜಕ್ಕೆ ರೈತಾಪಿ ಕೊಟ್ಟಿದ್ದೆಷ್ಟು ಎಂದೂ ನೋಡಿದರೆ ಒಳ್ಳೆಯದು.

ಇರಲಿ, ಹೀಗೆಯೇ ಖಾಸಗಿ ಎದರು ಸರ್ಕಾರಿ ಶಾಲೆ / ಕಾಲೇಜುಗಳ ಸ್ಥಿತಿಗತಿ ಏನಾಗಿದೆ? ಖಾಸಗಿ ಜಿಯೋ ಎದುರು ಸಾರ್ವಜನಿಕ ಸಹಭಾಗಿತ್ವದ ಬಿಎಸ್‌ಎನ್‌ಎಲ್ ತೆವಳುತ್ತಿಲ್ಲವೆ? ಸರ್ಕಾರವೇ ತನ್ನದೇ ಬಿಎಸ್‌ಎನ್‌ಎಲ್‌ನ ಕತ್ತು ಹಿಸುಕುತ್ತಿಲ್ಲವೆ? ಕಣ್ಣುಬಿಟ್ಟು ನೋಡಿದ ಕಡೆಗೆಲ್ಲಾ ಇಂಥವೇ ಇಂಥವೇ ಕಾಣುತ್ತವೆ. ಈಗ ವ್ಯವಸಾಯ ಉತ್ಪನ್ನಗಳಿಗೆ ಮಾರಾಟಕ್ಕೆ ಖಾಸಗಿಗೆ ಅವಕಾಶ ಕೊಟ್ಟಲ್ಲಿ ಕಾಫಿ ಬೆಳೆಗಾರರಂತೆಯೇ ಎಲ್ಲ ರೈತರೂ ಕಣ್ಣುಬಾಯಿ ಬಿಡಬೇಕಾಗುತ್ತದೆ. ಅಥವಾ? ಇಂಥಹ ಕೃಷಿ ಕಾಯ್ದೆಗಳು ಕೊನೆಗೆ ರೈತಾಪಿಯನ್ನು ಆತನ ಭೂಮಿಯಿಂದ ಕಿತ್ತು ದೂರದ ಊರಿಗೆ ಎಸೆಯುತ್ತವೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಮಹಾತ್ಮಾ ಗಾಂಧಿ ಮೊಮ್ಮಗಳ ಬೆಂಬಲ: ಅವರು ಹೇಳಿದ್ದೇನು?

ಹಾಗೆಯೇ ಇನ್ನೊಂದು. ರೈತ ಮತ್ತು ಕಂಪನಿಗಳ ನಡುವೆ ಏರ್ಪಡುವ ಕೃಷಿ ಒಪ್ಪಂದಕ್ಕೆ ಅನುಗುಣವಾಗಿ ಈ ಭೂಮಿ ಮೇಲೆ ಎಲ್ಲೂ ಕಂಪನಿಗಳು ನುಡಿದಂತೆ ನಡೆದುಕೊಂಡ ಉದಾಹರಣೆಗಳು ವಿರಳ. ಇಲ್ಲಿಯದೇ ಒಂದು ಉದಾಹರಣೆ: ಹಾರೋಹಳ್ಳಿ ರೈತರೊಬ್ಬರು (ನಿವೃತ್ತ ಮಿಲಿಟರಿಯವರು) ಬಿಡದಿ ಹತ್ತಿರ ಒಂದು ಬೀಜದ ಕಂಪನಿಯೊಂದಿಗೆ ಕಂಟ್ರಾಕ್ಟ್ ಮಾಡಿಕೊಂಡು 7 ಲಕ್ಷ ಖರ್ಚು ಮಾಡಿ ಅಮೆರಿಕನ್ ಸೌತೆ ಬೆಳೆದು ಕುಯ್ಲು ಮಾಡಿ ತೆಗೆದುಕೊಂಡು ಹೋದಾಗ, ಕಂಪನಿಯವರು – ಕುಯ್ಲು ಒಂದು ವಾರ ಲೇಟಾಗಿದ್ದು ಈ ಸೌತೆಯಲ್ಲಿ ನೀರಿನಂಶ ಕಡಿಮೆ ಆಗಿದೆ, ಹಾಗಾಗಿ ಖರೀದಿ ಸಾಧ್ಯವಿಲ್ಲ ಎಂದು ತಿರಸ್ಕರಿಸಿದ್ದಾರೆ. ಆ ರೈತ ಏನು ಮಾಡಬೇಕು. ತನ್ನ ಕೃಷಿ ಭೂಮಿಯನ್ನೇ ಮಾರಿ ಕೈತೊಳೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿ ಇದೆಯೇ? ಪರಿಣಾಮದಲ್ಲಿ ಈ ಗುತ್ತಿಗೆ ಕೃಷಿಯೂ ಕೃಷಿಕರನ್ನು ಕೃಷಿ ಭೂಮಿಯಿಂದಲೇ ಒಕ್ಕಲೆಬ್ಬಿಸುತ್ತದೆ.

ಈ ಮೂರು ಕೃಷಿ ಕಾಯ್ದೆಗಳನ್ನು ಒಪ್ಪಿಕೊಂಡರೆ ರಾತ್ರಿ ಕಂಡ ಬಾವಿಗೆ ಹಗಲು ಬಿದ್ದಂತಾಗುತ್ತದೆ. ಲಂಗುಲಗಾಮು ಇಲ್ಲದ ಈ ಕಾನೂನುಗಳು ಜಾರಿಯಾದರೆ ಉದಾಹರಣೆಗೆ, ಈರುಳ್ಳಿ, ಬೇಳೆ ಬೆಲೆಗಳನ್ನು ಸುಗ್ಗಿಯಲ್ಲಿ ಇಳಿಸಿ ಗೋಡಾನ್‌ನಲ್ಲಿ ತುಂಬಿಟ್ಟು ಕೃತಕ ಅಭಾವ ಸೃಷ್ಟಿಸಿ ಬೆಲೆ ಗಗನಕ್ಕೇರಿಸುತ್ತಿರುವಂತೆ ಎಲ್ಲಾ ದವಸ ಧಾನ್ಯಗಳಿಗೂ ಆಗುತ್ತದೆ. ಆಗ ಏನಾಗುತ್ತದೆ? ಇಂದಿನ ಮಧ್ಯಮವರ್ಗವು ಮುಂದೆ ಬಡತನದತ್ತ ದೂಕಲ್ಪಡುತ್ತದೆ. ಇಂದಿನ ಬಡವರು ಮುಂದೆ ಹಸಿವಿನ ದವಡೆಗೆ ಸಿಲುಕುತ್ತಾರೆ. ಜನಸಾಮಾನ್ಯರ ದಿನನಿತ್ಯದ ಜೀವನ ತತ್ತರಿಸುತ್ತದೆ. ಹೇಳಿ – ಈ ಕಾನೂನುಗಳು ಯಾರಿಗೆ ಸಂಬಂಧಿಸಿದ್ದಲ್ಲ? ಬದುಕುತ್ತಿರುವ ಎಲ್ಲರದೂ ಅಲ್ಲವೆ? ರೈತರ ಈ ಹೋರಾಟದಲ್ಲಿ ಜನಸಾಮಾನ್ಯರ ಹಿತವೂ ಅಡಗಿರುವುದನ್ನು ಗಮನಿಸಬೇಕಾಗಿದೆ.

ಈ ಕಾಯ್ದೆಗಳಲ್ಲಿ ಬಳಸಿರುವ ಒಕ್ಕಣೆಗಳೊ ಮೋಹಕವಾಗಿವೆ. ನೋಡಿ – ’ಪ್ರಚಾರ ಮತ್ತು ಸೌಲಭ್ಯ’ ಅಂತೆ. ’ಸಬಲೀಕರಣ ಮತ್ತು ಸಂರಕ್ಷಣೆಯಂತೆ!’ ಬಣ್ಣಬಣ್ಣದ ಮಾತುಗಳು ಜನ ಸಾಮಾನ್ಯರಿಗೆ; ಬಂಡವಾಳ ಮಾತ್ರ ಬಂಡವಾಳಷಾಹಿಗಳಿಗೆ. ಈ ಮಾತುಗಳು ನಿಜವಲ್ಲದಿದ್ದರೆ, ಕೋವಿಡ್ ಹಾವಳಿಯ ಜರ್ಜರಿತವಾದ ಕಾಲಮಾನದಲ್ಲೆ ಕೇವಲ ನೂರು ಜನ ಶತಕೋಟ್ಯಾದೀಶರು 12½ ಲಕ್ಷ ಕೋಟಿ ಲಾಭಗಳಿಸಲು ಹೇಗೆ ಸಾಧ್ಯ? ಹೀಗಿದ್ದೂ ಈ ಕಾಯ್ದೆಗಳು ರೈತರ ಬದುಕಿಗೆ ಮುಕ್ತಿ ನೀಡುವ ಕಾಯ್ದೆಗಳು ಎಂಬಂತೆ ಮೋದಿಶಾರು ಬಿಂಬಿಸುತ್ತಿದ್ದಾರೆ. ಹೌದು, ಸಾಯಿಸುವುದಕ್ಕೂ ’ಮುಕ್ತಿ ನೀಡುವುದು’ ಎಂಬ ಅರ್ಥವೂ ಇದೆ! ಮೈಯೆಲ್ಲ ಕಣ್ಣಾಗಿರಬೇಕಾದ ಕಾಲ ಇದು.

ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...