ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
“ದೇಶದ ಯುವಜನರು ಗೊಂದಲದ ಜಾಲದಲ್ಲಿ ಸಿಲುಕಿಕೊಳ್ಳಬಾರದು ಎಂದು ಖಚಿತಪಡಿಸಿಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಪ್ರಧಾನ್ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ಎರಡು ಪುಟಗಳ ರಾಜೀನಾಮೆ ಪತ್ರವನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ್, “ನಮ್ಮ ಪ್ರಜಾಪ್ರಭುತ್ವದ ಶಕ್ತಿಯ ಬಗ್ಗೆ ತಮಗೆ ಯಾವಾಗಲೂ ಅಚಲ ನಂಬಿಕೆ ಇದೆ, ದೇಶದ ಯುವಕರ ಆಕಾಂಕ್ಷೆಗಳನ್ನು ಆಳವಾಗಿ ಗೌರವಿಸುತ್ತೇನೆ” ಎಂದು ಹೇಳಿದ್ದಾರೆ. ಜಂತರ್ ಮಂತರ್ನಲ್ಲಿನ ಪರಿಸ್ಥಿತಿಯನ್ನು ಉಲ್ಲೇಖಿಸಿ, “ಕಳೆದ 10 ದಿನಗಳಿಂದ ನಡೆದ ಘಟನೆಗಳ ಬಗ್ಗೆ ನಾನು ದುಃಖಿತನಾಗಿದ್ದೇನೆ” ಎಂದು ಹೇಳಿದ್ದಾರೆ.
ಜಂತರ್ ಮಂತರ್ ಮತ್ತು ದೇಶಾದ್ಯಂತದ ಪರಿಸ್ಥಿತಿಯ ಲಾಭ ಪಡೆಯಲು ರಾಷ್ಟ್ರವಿರೋಧಿ ಶಕ್ತಿಗಳಿಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದರು.
“ಇದು ನನಗೆ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ, ನೀಟ್ ಪತ್ರಿಕೆ ಸೋರಿಕೆಯ ಜವಾಬ್ದಾರಿಯನ್ನು ನಾನು ಮೊದಲ ದಿನದಿಂದಲೇ ವಹಿಸಿಕೊಂಡಿದ್ದೇನೆ” ಎಂದಿದ್ದಾರೆ.
ರಾಷ್ಟ್ರ ರಾಜಧಾನಿಯಾದ್ಯಂತ ಈಗಾಗಲೇ ಭದ್ರತಾ ವ್ಯವಸ್ಥೆಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದ್ದು, ದೆಹಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿ ಪದರಗಳ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದಾರೆ. ಭದ್ರತಾ ಕವಚಗಳನ್ನು ಭೇದಿಸುವ ಪ್ರಯತ್ನಗಳನ್ನು ತಡೆಯಲು ಭಾರೀ ಸರಪಳಿಗಳಿಂದ ಅವುಗಳನ್ನು ಬಲಪಡಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗಳು ಮತ್ತು ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಸಿಜೆಪಿ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಧರ್ಮೇಂದ್ರ ಪ್ರಧಾನ ರಾಜೀನಾಮೆ ಕೊಡದೇ ಇದ್ದರೆ ವಾರಾಂತ್ಯದಲ್ಲಿ ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆ ಇತ್ತು.
ಪೊಲೀಸ್ ಮೂಲಗಳ ಪ್ರಕಾರ, ನವದೆಹಲಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ, ವಿಶೇಷವಾಗಿ ಜಂತರ್ ಮಂತರ್ ಪ್ರತಿಭಟನಾ ಸ್ಥಳ ಮತ್ತು ಇತರ ಆಯಕಟ್ಟಿನ ಸ್ಥಳಗಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಬ್ಬಿಣದ ಬ್ಯಾರಿಕೇಡ್ಗಳ ಬಹು ಸಾಲುಗಳನ್ನು ಇರಿಸಲಾಗಿದೆ.
ಪ್ರತಿಭಟನಾ ಸ್ಥಳದ ಸುತ್ತಲೂ ಸ್ಥಾಪಿಸಲಾದ ಮುಖ ಗುರುತಿಸುವಿಕೆ ವ್ಯವಸ್ಥೆಗಳು ಕಳೆದ ಕೆಲವು ದಿನಗಳಿಂದ ಈ ಪ್ರದೇಶಕ್ಕೆ ಪ್ರವೇಶಿಸುತ್ತಿರುವ ಕ್ರಿಮಿನಲ್ ಹಿನ್ನೆಲೆಯ 2,500 ಕ್ಕೂ ಹೆಚ್ಚು ಜನರನ್ನು ಈಗಾಗಲೇ ಗುರುತಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಿರಳೆ ಜನತಾ ಪಕ್ಷ (ಸಿಜೆಪಿ) ದೆಹಲಿ ಪೊಲೀಸರ “ಹೆಚ್ಚುತ್ತಿರುವ ಸರ್ವಾಧಿಕಾರಿ ಕ್ರಮಗಳನ್ನು” ಖಂಡಿಸಿ, ಜನರ್ ಮಂತರ್ನಲ್ಲಿ ಮುತ್ತಿಗೆ ಹಾಕುವುದನ್ನು ನಿಲ್ಲಿಸುವಂತೆ ಒತ್ತಾಯಿಸಿತು.


