ಮುಂಬರುವ ಚುನಾವಣೆಯನ್ನು ಗುರಿಯಾಗಿಸಿ ಮೋದಿ ಸರಕಾರ ಚುನಾವಣಾ ಆಯೋಗವನ್ನು ನಿಯಂತ್ರಣಕ್ಕೆ ಪ್ರಯತ್ನಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರನ್ನು (ಸಿಜೆಐ) ಹೊರಗೆ ಇರಿಸುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಿದೆ.
ಸಿಜೆಐ ಬದಲಿಗೆ ಸಂಪುಟ ದರ್ಜೆಯ ಸಚಿವರೊಬ್ಬರು ಸಮಿತಿಯ ಸದಸ್ಯರಾಗಲಿದ್ದಾರೆ.ಇದರಿಂದಾಗಿ ಸರ್ಕಾರಕ್ಕೆ ನೇಮಕಾತಿಯಲ್ಲಿ ಹೆಚ್ಚಿನ ಅಧಿಕಾರ ದೊರೆಯಲಿದೆ.
2012ರ ಜೂನ್ನಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬರೆದ ಪತ್ರವನ್ನು ಹಂಚಿಕೊಂಡ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಸಾಂವಿಧಾನಿಕ ಸಂಸ್ಥೆಗಳ ನೇಮಕಾತಿಯಲ್ಲಿ ಪಕ್ಷಪಾತ ತಪ್ಪಿಸಲು ದ್ವಿಪಕ್ಷೀಯ ರೀತಿಯಲ್ಲಿ ನೇಮಕಾತಿ ನಡೆಯಬೇಕು ಎಂದು ಹೇಳಿರುವುದನ್ನು ನೆನೆಪಿಸಿದ್ದಾರೆ.
ಆಯ್ಕೆ ಸಮಿತಿಯಲ್ಲಿ ಪ್ರಧಾನ ಮಂತ್ರಿ ಮಾತ್ರವಲ್ಲದೆ ಸಿಜೆಐ ಮತ್ತು ಉಭಯ ಸದನಗಳ ವಿರೋಧ ಪಕ್ಷದ ನಾಯಕರೂ ಇರಬೇಕು ಎಂಬ ಪ್ರಸ್ತಾವನೆಯನ್ನು ಅಡ್ವಾಣಿ ಅವರು ಹಿಂದೆಯೇ ಪ್ರಸ್ತಾಪಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಕೇಂದ್ರದ ಹೊಸ ಮಸೂದೆಯು, ಆಯುಕ್ತರ ಆಯ್ಕೆ ಸಮಿತಿಯಲ್ಲಿ 2:1ರ ಅನುಪಾತದಲ್ಲಿ ಹಸ್ತಕ್ಷೇಪ ಖಚಿತವಾಗಿದೆ.
ಲೋಕಸಭೆ ಚುನಾವಣಾ ವರ್ಷದಲ್ಲಿ ಮಂಡಿಸಿರುವ ಈ ಮಸೂದೆಯು ಚುನಾವಣಾ ಆಯೋಗದ ಮೇಲೆ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳುವ ಪ್ರಧಾನಿ ಮೋದಿ ಅವರ ತಂತ್ರವನ್ನು ದೃಢಪಡಿಸುತ್ತಿದೆ ಎಂದು ಜೈರಾಂ ರಮೇಶ್ ಆರೋಪಿಸಿದ್ದಾರೆ.
ಇದನ್ನು ಓದಿ:ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು: ಅಧಿಕಾರದ ದುರಹಂಕಾರ, ದುರುದ್ದೇಶ ಎಂದ ಖರ್ಗೆ