ಭಾರತವು ಬದಲಾವಣೆಯನ್ನು ಬಯಸುತ್ತಿದ್ದು, ಮೋದಿ ಗ್ಯಾರೆಂಟಿ, 2004ರ ಕೇಸರಿ ಪಕ್ಷದ ‘ಇಂಡಿಯಾ ಶೈನಿಂಗ್’ ಅಭಿಯಾನದಂತೆ ತೆರೆಗೆ ಸರಿಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಬಿಜೆಪಿಯ ‘ಮೋದಿ ಗ್ಯಾರೆಂಟಿ’ ಅಭಿಯಾನದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಅಂತಿಮಗೊಳಿಸಲು ಆಯೋಜಿಸಲಾಗಿದ್ದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ದೇಶದ ಪ್ರತಿಯೊಂದು ಮನೆಗೂ ಕಾಂಗ್ರೆಸ್ನ ನ್ಯಾಯದ ಸಂದೇಶವನ್ನು ಕೊಂಡೊಯ್ಯುವಂತೆ ಅವರು ಎಲ್ಲಾ ಕಾರ್ಯಕರ್ತರನ್ನು ಒತ್ತಾಯಿಸಿದ್ದಾರೆ. ಈಗ ದೇಶವು ಬದಲಾವಣೆಯನ್ನು ಬಯಸುತ್ತಿದೆ. ಪ್ರಸ್ತುತ ಕೇಂದ್ರ ಸರ್ಕಾರವು ಪ್ರಸ್ತುತಪಡಿಸುತ್ತಿರುವ ಖಾತರಿಗಳು 2004ರ ‘ಇಂಡಿಯಾ ಶೈನಿಂಗ್’ ಘೋಷಣೆಯಂತೆಯೇ ಅದೇ ಭವಿಷ್ಯವನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.
ಸಭೆಯಲ್ಲಿ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ನೇತೃತ್ವದ ಸಮಿತಿಯು ಸಿದ್ಧಪಡಿಸಿದ ಕರಡು ಪ್ರಣಾಳಿಕೆ ಬಗ್ಗೆ ಚರ್ಚೆಯನ್ನು ನಡೆಸಲಾಗಿದೆ. ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರವು 2004ರ ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ ಶೈನಿಂಗ್’ ಅಭಿಯಾನವನ್ನು ದೊಡ್ಡ ಮಟ್ಟದಲ್ಲಿ ಮಾಡಿತ್ತು. ಆದರೆ ಚುನಾವಣೆಯಲ್ಲಿ ಬಿಜೆಪಿಗೆ ಸರ್ಕಾರವನ್ನು ರಚಿಸಲು ಸಾಧ್ಯವಾಗಲಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರ ಪಡೆದುಕೊಂಡಿತ್ತು ಎಂದು ಖರ್ಗೆ ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ವಿಚಲಿತರಾಗಬಾರದು, ಸಾರ್ವಜನಿಕರಿಗೆ ಸಂಬಂಧಿಸಿದ ಮೂಲಭೂತ ವಿಷಯಗಳ ಬಗ್ಗೆ ಮಾತ್ರ ಗಮನ ಹರಿಸಬೇಕು ಮತ್ತು ಕಾಂಗ್ರೆಸ್ ಪಕ್ಷದ ನೀತಿ, ಕಾರ್ಯಕ್ರಮಗಳು ಮತ್ತು ಮುಂದಿನ ಐದು ವರ್ಷಗಳ ಆದ್ಯತೆಗಳ ಬಗ್ಗೆ ಜನರಿಗೆ ತಿಳಿಸಬೇಕು. ದೇಶದ ಎಲ್ಲಾ ಪ್ರಸ್ತುತ ಸಮಸ್ಯೆಗಳ ಬಗ್ಗೆ ಪ್ರತಿ ಮನೆ ಮನೆಗೆ ತಲುಪಿಸವಲ್ಲಿ ಕಾರ್ಯಕರ್ತರಿಗೆ ಹಿರಿಯ ನಾಯಕರು ಪ್ರೇರಣೆಯಾಗಬೇಕು. ಪ್ರಣಾಳಿಕೆಯಲ್ಲಿ ಏನೇ ಭರವಸೆ ನೀಡಿದ್ದರೂ ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುವ ಮೊದಲು, ಈ ಭರವಸೆಗಳು ಕಾರ್ಯರೂಪಕ್ಕೆ ತರುವ ಬಗ್ಗೆ ಆಳವಾದ ಚರ್ಚೆಯನ್ನು ಮಾಡಲಾಗಿದೆ. ಇದೇ ಕಾರಣದಿಂದ 1926ರಿಂದಲೇ ಕಾಂಗ್ರೆಸ್ನ ಪ್ರಣಾಳಿಕೆಯನ್ನು ‘ನಂಬಿಕೆ ಮತ್ತು ಬದ್ಧತೆಯ ದಾಖಲೆ’ ಎಂದು ಪರಿಗಣಿಸಲಾಗಿದೆ. ಸ್ವಾತಂತ್ರ್ಯದ ನಂತರ ಜವಾಹರಲಾಲ್ ನೆಹರು ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಇದೇ ವೇಳೆ ಖರ್ಗೆ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯ ಬಗ್ಗೆ ಮಾತನಾಡಿದ್ದಾರೆ. ಇಬ್ಬರೂ ಹಲವಾರು ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರು ಯಾತ್ರೆಯ ಐದು ಸ್ತಂಭಗಳಾದ ರೈತ ನ್ಯಾಯ, ಯುವ ನ್ಯಾಯ, ನಾರಿ ನ್ಯಾಯ, ಶ್ರಮಿಕ ನ್ಯಾಯ ಮತ್ತು ಹಿಸ್ಸೆದಾರಿ ನ್ಯಾಯ ಸೇರಿ ಕಾಂಗ್ರೆಸ್ ಖಾತರಿಗಳು ಮತ್ತು ಬದ್ಧತೆಗಳ ಬಗ್ಗೆ ಮಾತನಾಡಿದ್ದಾರೆ.
The country wants change. The guarantees of the current government are going to meet the same fate as the 'India Shining' slogan in 2004: @kharge at Congress Working Committee meeting in Delhi @DeccanHerald pic.twitter.com/vgq4Stc64r
— Shemin (@shemin_joy) March 19, 2024
ಇದನ್ನು ಓದಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎನ್ಡಿಎ ಮೈತ್ರಿಯಲ್ಲಿ ಬಿರುಕು: ಕೇಂದ್ರ ಸಚಿವ ಪಶುಪತಿ ಕುಮಾರ್ ರಾಜೀನಾಮೆ