ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಸ್ವಪಕ್ಷದ ವಿರುದ್ಧವೇ ವಾಗ್ಧಾಳಿ ನಡೆಸಿದ್ದು, ಶೀಘ್ರದಲ್ಲಿ ರಾಜ್ಯದಲ್ಲಿ ಬಿಜೆಪಿ ಮುಕ್ತವಾಗಲಿದೆ ಎಂದು ಹೇಳಿದ್ದಾರೆ.
ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಲಾಗಿದೆ. ಇದರಿಂದ ಪಕ್ಷಕ್ಕೆ ಭಾರೀ ಹಾನಿಯಾಗಿದೆ.
ಬಿಜೆಪಿ ನಾಯಕರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಇದರಿಂದ ಮೊದಲು ಹೊರಬರಬೇಕು. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿನ ಬೆಳವಣಿಗೆಯಿಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮನಸ್ಸಿಗೆ ಬೇಸರವಾಗಿದೆ. ಕೆಲವರು ಪತ್ರಿಕಾ ಹೇಳಿಕೆ ನೀಡುವ ಮೂಲಕ ಟೈಗರ್ಸ್ಗಳಾಗಿದ್ದಾರೆ. ಪಕ್ಷ ನನಗೆ ತಾಯಿ ಸಮಾನ, ನಾವು ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ. ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ ಅದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ಹಲವು ನಾಯಕರು ಮೋದಿ ಮುಖ ತೋರಿಸಿ ಗೆಲ್ಲುತ್ತೇವೆ ಎನ್ನುವ ಭ್ರಮಾಲೋಕದಲ್ಲಿದ್ದಾರೆ. ರಾಜ್ಯ ನಾಯಕರ ಕೊಡುಗೆ ಏನಿದೆ? ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮೋದಿಯವರ ಕೆಲಸವನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಾರೆ. ನಮ್ಮ ರಾಜ್ಯದ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಕಿ ಪ್ರಚಾರ ಮಾಡುತ್ತಾ ಇದ್ದಾರೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ರೇಣುಕಾಚಾರ್ಯ ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು. ನಾನು ಮಾತನಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾನೆಂದು ಸುದ್ದಿ ಹಬ್ಬಿಸುತ್ತಾರೆ. ಯಾರು ರಾಜಕೀಯವಾಗಿ ಬೆಳೆಯುತ್ತಾರೆ ಅವರನ್ನು ಕತ್ತರಿಸುತ್ತಾರೆ. ಯಾರು ಬಕೆಟ್ ಹಿಡಿಯುತ್ತಾರೆ ಅವರನ್ನು ಬೆಳೆಸುತ್ತಾರೆ ಎಂದು ರೇಣುಕಾಚಾರ್ಯ ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.
ಇದನ್ನು ಓದಿ: ದಲಿತ ಎಂಬ ಕಾರಣಕ್ಕೆ ನನಗೆ ತಾರತಮ್ಯ ಮಾಡುತ್ತಿದ್ದಾರೆ: ಹಿರಿಯ ಐಎಎಸ್ ಅಧಿಕಾರಿ ಆರೋಪ