ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ ಎಂದು ತಿಳಿದು ಬಂದಿದೆ.
ಇಂದು (ಜೂನ್ 11) ಬೆಳಿಗ್ಗೆ ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಬೆಂಗಳೂರಿಗೆ ಕರೆ ತಂದಿದ್ದರು. ಈ ನಡುವೆ ಪ್ರಕರಣದ ಇತರ ಆರೋಪಿಗಳನ್ನೂ ಬಂಧಿಸಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.
ಸಂಜೆ ವೇಳೆಗೆ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ನಗರದ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಪೊಲೀಸರು, ಬಳಿಕ ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶರಾದ ವಿಶ್ವನಾಥ್ ಸಿ ಗೌಡರ್ ಅವರು ಎಲ್ಲಾ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ಕಾರಣಕ್ಕೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ನಲ್ಲಿ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬವರನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾದರೆ, ದರ್ಶನ್ ಎ2 ಆರೋಪಿ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಲೋಕಸಭಾ ಚುನಾವಣೆ: 362 ಕ್ಷೇತ್ರಗಳಲ್ಲಿ 5,54,598 ಮತಗಳನ್ನು ಎಣಿಕೆಗೆ ಪರಿಗಣಿಸದೆ ಕೈಬಿಡಲಾಗಿದೆ