ನನ್ನ ಮಗ ಕಾಂತೇಶ್ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, “ಹಾಲಿ ಸಂಸದ ಶಿವಕುಮಾರ್ ಉದಾಸಿಯವರು ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ನನ್ನ ಪುತ್ರ ಆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಟಿಕೆಟ್ ಕೊಡುವುದು, ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, 40% ಕಮಿಷನ್ ಆರೋಪದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎಸ್.ಈಶ್ವರಪ್ಪನವರು ಕಳೆದ ಏಪ್ರಿಲ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆಯುವ ಮೂಲಕ ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೇನೆ” ಎಂದು ಘೋಷಿಸಿದ್ದರು. ಆ ಮೂಲಕ ಅವರು ತಮ್ಮ ಪುತ್ರ ಕೆ.ಇ.ಕಾಂತೇಶ್ಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಈಶ್ವರಪ್ಪನವರಿಗೆ ಫೋನ್ ಕರೆ ಮಾಡಿ ಅಭಿನಂದಿಸಿದ್ದರು.
ಆದರೆ ಈಶ್ವರಪ್ಪನವರು ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ತಮ್ಮ ಪುತ್ರ ಕಾಂತೇಶ್ಗೆ ನೀಡಬೇಕೆಂದು ಅವರು ಲಾಭಿ ಮಾಡಿದ್ದರು. ಆದರೂ ಟಿಕೆಟ್ ಬಿಜೆಪಿ ಮುಖಂಡ ಚನ್ನಬಸಪ್ಪನವರ ಪಾಲಾಯಿತು ಮಾತ್ರವಲ್ಲದೇ ಅವರು ಗೆಲುವು ಕೂಡ ಸಾಧಿಸಿದ್ದಾರೆ. ಹಾಗಾಗಿ ಇನ್ನು ಆ ಕ್ಷೇತ್ರದ ಟಿಕೆಟ್ ಸಿಗುವುದು ಕಷ್ಟ ಎಂಬುದನ್ನು ಅರಿತಿರುವ ಈಶ್ವರಪ್ಪನವರು ತಮ್ಮ ಪುತ್ರನಿಗೆ ಈಗ ಹಾವೇರಿ ಎಂಪಿ ಟಿಕೆಟ್ಗಾಗಿ ಬೇಡಿಕೆಯಿಟ್ಟಿದ್ದಾರೆ. ಹೈಕಮಾಂಡ್ ಈ ಬೇಡಿಕೆಗೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ಸಿದ್ಧಗೊಂಡಿದೆ: ಡಿ.ಕೆ ಶಿವಕುಮಾರ್