ಮೈಸೂರು: ಎನ್ಇಪಿ-2020 ಅಡಿ ವ್ಯಾಸಂಗ ಮಾಡಿರುವ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇ಼ಷನ್ (ಎಐಡಿಎಸ್ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ವಿದ್ಯಾರ್ಥಿಗಳು, “ಕೂಡಲೇ ಫಲಿತಾಂಶ ಬಿಡುಗಡೆ ಮಾಡಬೇಕು, ವಿದ್ಯಾರ್ಥಿ ವೇತನವನ್ನು ಸಂಪೂರ್ಣವಾಗಿ ವಿತರಿಸಬೇಕು, ಬೇಡಿಕೆ ಇರುವಷ್ಟು ಹಾಸ್ಟೆಲ್ಗಳ ಸಂಖ್ಯೆ ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಒ ಜಿಲ್ಲಾಧ್ಯಕ್ಷರಾದ ಸುಭಾಷ್, “ಈಗಾಗಲೇ ರಾಜ್ಯದಲ್ಲಿ ಎನ್ಇಪಿ ಮೊದಲ ಬ್ಯಾಚ್ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಅವರ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ. ಈ ಕೂಡಲೇ ಎನ್ಇಪಿ ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.
“ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಬಹಳ ಆತಂಕ ಮೂಡಿಸಿದೆ. ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿದ್ದಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೇ ಕಷ್ಟಕರವಾಗುತ್ತದೆ. ಈ ಕೂಡಲೇ ಪದವಿ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು” ಎಂದರು.
ಸಂಘಟನೆಯ ಸೆಕ್ರೆಟರಿಯಟ್ ಸದಸ್ಯರಾದ ಸ್ವಾತಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮೂಲಭೂತ ಅವಶ್ಯಕತೆಯಾಗಿದೆ. ಆದರೆ ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ವ್ಯವಸ್ಥೆ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹಾಗೂ ದಾಖಲಾತಿಯನ್ನು ಹೆಚ್ಚಿಸಬೇಕು” ಎಂದು ತಿಳಿಸಿದರು.
ಪ್ರತಿಭಟನೆಯ ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಂಘಟನೆಯ ಜಿಲ್ಲಾ ಸಮಿತಿಯ ಕಾರ್ಯದರ್ಶಿ ನಿತಿನ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಸಮಿತಿಯ ಸದಸ್ಯರಾದ ಚಂದ್ರಿಕಾ, ಬಿ.ಆರ್.ಚಂದನಾ, ಹೇಮಲತಾ, ವಿದ್ಯಾರ್ಥಿಗಳಾದ ಜೀವನ್, ಪ್ರಜ್ವಲ್, ತೇಜು, ಮೇಘನಾ, ಶಿವು, ಪ್ರಶಾಂತಿ, ಕೋಮಲ, ಶ್ರೇಯಸ್ ಹಾಜರಿದ್ದರು.