Homeಮುಖಪುಟವಿರೋಧಾಭಾಸಗಳ ಜಗತ್ತಿನಲ್ಲಿ ಧಿಕ್ಕರಿಸಬೇಕಿದೆ ಶ್ರೇಷ್ಠತೆಯ ವ್ಯಸನ : ನಟರಾಜು ವಿ.

ವಿರೋಧಾಭಾಸಗಳ ಜಗತ್ತಿನಲ್ಲಿ ಧಿಕ್ಕರಿಸಬೇಕಿದೆ ಶ್ರೇಷ್ಠತೆಯ ವ್ಯಸನ : ನಟರಾಜು ವಿ.

- Advertisement -
- Advertisement -

ಕನ್ನಡದ ಪ್ರತಿಭಾನ್ವಿತ ಪತ್ರಕರ್ತರು -ಅಂಕಣಕಾರರಲ್ಲೊಬ್ಬರಾದ ನಟರಾಜು.ವಿ ಅವರು ತಣ್ಣನೆಯ ಶೈಲಿಯಲ್ಲೇ ಕಟುಸತ್ಯಗಳನ್ನು ಬಿಡಿಸಿಡುವ ಬರಹಗಾರರು. ಸಾಮಾಜಿಕ ರಾಜಕೀಯ ವಿಶ್ಲೇಷಣೆ, ಸಮಕಾಲೀನ ವಿದ್ಯಮಾನಗಳ ಕುರಿತ ಅವರ ಅಂಕಣ ‘ಪಠ್ಯ – ಪ್ರಮಾಣ’ ಕನ್ನಡಪ್ರಭದಲ್ಲಿ ಪ್ರಕಟವಾಗಿತ್ತು. ಟೈಮ್ಸ್ ಆಫ್ ಇಂಡಿಯಾ, ವಿಜಯನೆಕ್ಸ್ಟ್ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಳೆದ 15 ವರ್ಷಗಳಿಂದ ಕೆಲಸ ಮಾಡಿದ ಅನುಭವವಿರುವ ಇವರು ‘ದಿ ಸ್ಟೇಟ್’ ನಲ್ಲಿ ಸೀನಿಯರ್ ಅಸಿಸ್ಟೆಂಟ್ ಎಡಿಟರ್ ಆಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಟೆಕ್ ಕನ್ನಡ ವೆಬ್‍ಜಾಲದ ‘ತಂತ್ರ ತಾಂಡವ’ ಅಂಕಣದ ಜೊತೆಗೆ, ನಟರಾಜುರವರು ನ್ಯಾಯಪಥ ಪತ್ರಿಕೆಯಲ್ಲಿ ಪ್ರಮುಖ ವಿಶ್ಲೇಷಕ ಬರಹಗಳನ್ನು ಬರೆಯುತ್ತಿದ್ದಾರೆ.

ಈ ವಿಶೇಷ ಸಂಚಿಕೆಯನ್ನು ಕೈಯಲ್ಲಿ ಹಿಡಿದು ಕಣ್ಣಾಡಿಸುತ್ತಿರುವ ಈ ಹೊತ್ತಿನಲ್ಲಿ ಬಹುಶಃ ನಿಮಗೆ ಮೇಲುನೋಟಕ್ಕೇ ಸಮಕಾಲೀನ ಭಾರತೀಯ ಸಮಾಜ ಎದುರಿಸುತ್ತಿರುವ ಹತ್ತು ಹಲವು ತಲ್ಲಣಗಳು, ಪ್ರಜಾಪ್ರಭುತ್ವ, ಸಂವಿಧಾನಗಳಿಗೆ ಎದುರಾಗಿರುವ ಗಂಭೀರ ಸವಾಲುಗಳ ಕುರಿತಾದ ತೀವ್ರ ಕಾಳಜಿ ಈ ಬರಹಗಳಲ್ಲಿ ಕಾಣಬಹುದು. ಇದಾಗಲೇ ಜಾತಿವ್ಯವಸ್ಥೆಯಲ್ಲಿ ಸಿಲುಕಿ ಶತಶತಮಾನಗಳಿಂದ ಹೈರಾಣಾಗಿಹೋಗಿರುವ ಭಾರತೀಯ ಸಮಾಜದ ಸೂಕ್ಷ್ಮ ನೇಯ್ಗೆಗಳು ಇಂದು ಮೂಲಭೂತವಾದದ ತೀವ್ರ ಹೆಚ್ಚಳದೊಂದಿಗೆ ಮತ್ತೂ ಗಂಭೀರವಾಗಿ ಘಾಸಿಗೊಂಡಿವೆ. ನಮ್ಮ ಸುತ್ತಣ ಸಮಾಜದ ಆಲೋಚನೆಗಳನ್ನು ಮೂಲಭೂತವಾದವು ವ್ಯಾಪಿಸಿಕೊಳ್ಳುತ್ತಿರುವ ಪರಿ, ಪಡೆಯುತ್ತಿರುವ ರೂಪ, ಭಾಷೆ ಎಲ್ಲ ಪ್ರಜ್ಞಾವಂತರ ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಬಹುತೇಕ ಲೇಖನಗಳು ವಿವಿಧ ಆಯಾಮಗಳಿಂದ ಈ ಸವಾಲುಗಳನ್ನು ಸಂಕೀರ್ಣವಾಗಿಯೂ, ಚಿಕಿತ್ಸಕವಾಗಿಯೂ ಎದುರುಗೊಂಡಿವೆ. ಪ್ರಸಕ್ತ ಲೇಖನ ಇದರಾಚೆಗಿನ ಕೆಲ ಸಂದಿಗ್ಧಗಳು, ಸವಾಲುಗಳ ಬಗ್ಗೆ ಗಮನ ಹರಿಸಲಿದೆ. ಆದರ್ಶ, ವಾಸ್ತವ, ಬೂಟಾಟಿಕೆ, ನೈತಿಕ ವಿರೋಧಾಭಾಸಗಳ ಗೋಜಲುಗಳ ಸುತ್ತಲಿನ ಚರ್ಚೆ ಈ ಲೇಖನದ ತಿರುಳು.

ಇಂದು ಸಾಮಾಜಿಕ ಕಾರ್ಯಕರ್ತರು, ಸಮಾಜಮುಖಿ ಚಿಂತಕರು, ಪ್ರಜ್ಞಾವಂತರು, ಪತ್ರಕರ್ತರೆಲ್ಲರನ್ನೂ ಒಂದಿಲ್ಲೊಂದು ಬಗೆಯಲ್ಲಿ ನೈತಿಕ ತಳಮಳಗಳು ಬಾಧಿಸುತ್ತಿವೆ. ಮೌಲ್ಯಗಳ ಹೆಸರಿನಲ್ಲಿ ತಾವು ಕಟ್ಟಿಕೊಂಡಿದ್ದ ಕೋಟೆ ಎಲ್ಲ ದಿಕ್ಕಿನಲ್ಲಿಯೂ ಕುಸಿದು ಬೀಳುತ್ತಿರುವುದು ಕಣ್ಣುಮುಚ್ಚಿದರೂ ಗೋಚರಿಸುತ್ತಿದೆ. ಈ ಸತ್ಯಕ್ಕೆ ಮುಖಾಮುಖಿಯಾಗುವುದೋ ಅಥವಾ ಕೋಟೆ ಕುಸಿದರೇನು ನಮ್ಮ ಸುತ್ತ ನಾವೇ ಒಂದು ಗೂಡು ಕಟ್ಟಿಕೊಂಡು ಚಿಟ್ಟೆಯಾಗಿ ಪರಿವರ್ತನೆ ಹೊಂದೋಣ, ಯಾರ ಜಪ್ತಿಗೂ ಸಿಗದೆ ಹಾರಿಬಿಡೋಣ ಎಂದು ರಮ್ಯವಾಗಿ ಉತ್ತರಿಸುವುದೋ ತಿಳಿಯುತ್ತಿಲ್ಲ. ನಾವು ನಿಂತಿರುವ ನೆಲದ ಮೇಲೆಯೇ ಸಂಶಯವೇಳುತ್ತಿರುವ ಈ ಹೊತ್ತಿನಲ್ಲಿ ತಲೆಯನ್ನು ನೆಲದಲ್ಲಿ ಹುದುಗಿಸಿಕೊಂಡು ಎಲ್ಲದಕ್ಕೂ ಕಣ್ಣುಮುಚ್ಚಿಕೊಂಡು ಬಿಡುವುದು ಸಂವೇದನಾಶೀಲರ ಆಯ್ಕೆಯೂ ಅಲ್ಲ.

ಕಪ್ಪುಬಿಳುಪು ಇವೆರಡನ್ನು ಮಾತ್ರವೇ ಗುರುತಿಸಲು, ಬೇರ್ಪಡಿಸಲಷ್ಟೇ ಕಲಿತಿರುವವರಿಗೆ ಜಗವೆಲ್ಲಾ ಕಂದು ಬಣ್ಣದಲ್ಲೇ ಇರುವಾಗ ಅದನ್ನು ಹೇಗೆ ವರ್ಗೀಕರಿಸುವುದು ತಿಳಿಯದಾಗಿದೆ. ಮಾಧ್ಯಮವೂ ಸೇರಿದಂತೆ ಇಂದು ಎಲ್ಲ ಉದ್ಯಮಗಳೂ ಬಂಡವಾಳಶಾಹಿಗಳ ಹಿಡಿತದಲ್ಲಿವೆ. ಒಂದಿಲ್ಲೊಂದು ರೀತಿಯಲ್ಲಿ ಸರ್ಕಾರ, ಅಧಿಕಾರಸ್ಥರ ಸಹಾಯ, ಸಹಕಾರಗಳನ್ನು ಅವಲಂಬಿಸಿವೆ. ಈ ಅವಲಂಬನೆ ಕೆಲವೆಡೆ ಅಲ್ಪವೇ ಇರಬಹುದು ಮತ್ತೆ ಹಲವೆಡೆ ಅವಕಾಶವಾದಿತನ, ವಶೀಲಿಬಾಜಿಗಾಗಿಯೇ ಈ ಉದ್ಯಮಗಳು ಆರಂಭವಾಗಿಯೂ ಇರಬಹುದು.

ಮೌಲ್ಯಗಳೆನ್ನುವುದು ಇಂದು ತುಲನಾತ್ಮಕವಾಗಿ ನೋಡಬಹುದಾದ ವಿಷಯವಾಗಿದೆಯೇ ಹೊರತು ಪಾವಿತ್ರ್ಯದ ವಿಷಯವಾಗಿ ಉಳಿದಿಲ್ಲ. ಅವರಿಗಿಂತ ಇವರು ಉತ್ತಮ, ಆ ಸಂಸ್ಥೆಗಿಂತ ಈ ಸಂಸ್ಥೆ ಉತ್ತಮ ಎನ್ನಬಹುದೇ ಹೊರತು ಪರಮಪವಿತ್ರವೂ, ಅಗ್ನಿದಿವ್ಯವೂ ಆದ ಸಾಂಸ್ಥಿಕ ರಚನೆಗಳು ಸಾರ್ವಜನಿಕವಾಗಿ ಕಾಣೆಯಾಗಿವೆ. ಇದಕ್ಕೆ ಸರ್ಕಾರಿ, ಖಾಸಗಿ ಎನ್ನುವ ಭೇದಭಾವವಿಲ್ಲ. ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ತಾನು ದುಡಿದು ತಿಂದಿರುವುದಾಗಿ ಯಾರೇ ಹೇಳಿದರೂ ಆ ದುಡಿಮೆಯನ್ನು ಬಳಸಿಕೊಂಡ ಸಂಸ್ಥೆಗಳು ಸಂಬಳಕ್ಕಾಗಿ ತೆತ್ತ ಹಣದ ಹರಿವು ಎಲ್ಲಿಯದು, ಆ ಸಂಸ್ಥೆಗಳ ವ್ಯಾವಹಾರಿಕ ಚೌಕಟ್ಟಿನ ಸ್ವರೂಪವೇನು ಎನ್ನುವುದನ್ನು ಅರಿತರೆ ಭ್ರಷ್ಟತೆ ಎನ್ನುವುದು ನಮ್ಮೆಲ್ಲರನ್ನೂ ಒಂದಿಲ್ಲೊಂದು ಹಂತದಲ್ಲಿ ತಾಕಿಯೂ ಅರಿವಿಗೇ ಬಾರದೆ ಉಳಿದಿರುವುದು ಗಮನಕ್ಕೆ ಬರುತ್ತದೆ.

ಮಾರುಕಟ್ಟೆ ಎನ್ನುವುದು ಸರ್ವವ್ಯಾಪಿಯಾಗಿರುವ ಈ ಯುಗದಲ್ಲಿ ಅರ್ಥವ್ಯವಸ್ಥೆಯ ಸ್ವರೂಪ ಸಂಕೀರ್ಣವೂ, ಪರಸ್ಪರ ವ್ಯಾಪಕವಾಗಿ ಅವಲಂಬಿತವೂ ಆಗಿರುವಂಥದ್ದು. ಮಾರುಕಟ್ಟೆ ಆಧರಿತ ಜೀವನ ವಿಧಾನದ ಈ ದಿನಗಳಲ್ಲಿ ಹಣವೆನ್ನುವುದು ಎಲ್ಲರ ಬದುಕಿನ ಕೇಂದ್ರದಲ್ಲಿದೆ. ಇದಕ್ಕೆ ನಗರ ಹಾಗೂ ಗ್ರಾಮೀಣ ಎನ್ನುವ ವ್ಯತ್ಯಾಸಗಳಿಲ್ಲ, ಪ್ರಮಾಣದಲ್ಲಿ ಕೊಂಚಮಟ್ಟಿಗಿನ ಅಂತರವಿರಬಹುದು ಅಷ್ಟೇ. ಹೀಗೆ ಹಣದ ಹರಿವು ಮತ್ತು ಅದರ ಅವಲಂಬನೆಗಳು ಹೆಚ್ಚಾದಂತೆಲ್ಲಾ ವ್ಯವಸ್ಥೆಯಲ್ಲಿ ಕಪ್ಪುಬಿಳುಪು ಎನ್ನುವ ವರ್ಗೀಕರಣವೇ ಕ್ರಮೇಣ ಅಪ್ರಸ್ತುತವೂ, ಗೊಂದಲಮಯವೂ ಆಗತೊಡಗುತ್ತದೆ. ಹಣದ ಮೌಲ್ಯವು ಪೂರ್ವನಿರ್ಧರಿತವಾಗಿದ್ದು ಅದು ತನ್ನ ಮೌಲ್ಯವನ್ನು ತನ್ನನ್ನು ಗಳಿಸಿದ, ದುಡಿದ ಮಾರ್ಗದಿಂದಾಗಿ ಪಡೆಯುವುದಿಲ್ಲ. ಶ್ರಮಿಕರು, ಜ್ಞಾನಿಗಳು, ಪ್ರತಿಭಾವಂತರು, ವಯೋವೃದ್ಧರು, ವಿಶೇಷಚೇತನರು ಕಷ್ಟಪಟ್ಟು ದುಡಿದ ಹಣಕ್ಕೂ, ಭ್ರಷ್ಟವೂ, ಅನೈತಿಕವೂ, ವಾಮಮಾರ್ಗದಿಂದಲೂ ಗಳಿಸಿದ ಹಣಕ್ಕೂ ಮೌಲ್ಯದಲ್ಲಿ ಯಾವುದೇ ವ್ಯತ್ಯಾಸಗಳಿರುವುದಿಲ್ಲ. ಇದು ಆಧುನಿಕ ಅರ್ಥವ್ಯವಸ್ಥೆಯಲ್ಲಿನ ದೊಡ್ಡ ನ್ಯೂನತೆ. ಹಣವೆನ್ನುವುದು ಗುಣಗ್ರಾಹಿಯಾಗಿಲ್ಲ. ಜಾತಿ, ಧರ್ಮ, ಜನಾಂಗ, ಬಣ್ಣಗಳ ಆಧಾರದಲ್ಲಿ ಶ್ರೇಷ್ಠತೆಯ ವ್ಯಸನ ಮೆರೆಯುವ ನಮ್ಮ ನಾಗರಿಕತೆಗಳು, ಇದಕ್ಕೆ ಬದಲಾಗಿ ಮೌಲ್ಯ, ನೈತಿಕತೆಯ ಹೆಸರಿನಲ್ಲಿ ಶ್ರೇಷ್ಠತೆಯ ವ್ಯಸನ ಬೆಳೆಸಿಕೊಂಡಿದ್ದರೆ ಹಣಕ್ಕೆ ಗುಣಗ್ರಾಹಿಯಾಗುವ ಅಗತ್ಯ ಖಂಡಿತ ಬರುತ್ತಿತ್ತು. ಆದರೆ, ವಾಸ್ತವ ಹಾಗಿಲ್ಲ. ಹಣ ಇಂದು ನಮ್ಮೆಲ್ಲರ ಬದುಕಿನ ಕೇಂದ್ರದಲ್ಲಿದೆ, ನಮ್ಮೆಲ್ಲರ ಜೀವನಾವಶ್ಯಕತೆಗಳನ್ನು, ಬದುಕು, ಭವಿಷ್ಯವನ್ನು ನಿರ್ಧರಿಸುವ ಪ್ರಖರ ಮಾಧ್ಯಮವಾಗಿದೆ. ಹೀಗೆ ನಮ್ಮೆಲ್ಲರ ಬದುಕನ್ನು ನಿಯಂತ್ರಿಸುವ, ನಿರ್ಧರಿಸುವ ಹಣಕ್ಕೆ ನ್ಯಾಯನೀತಿಯ ಪರಿವೆಯೇ ಇಲ್ಲ! ಗುಣಕ್ಕೆ, ಮೌಲ್ಯಗಳಿಗೆ ಕುರುಡಾಗಿರುವ ಇಂತಹ ಹಣವನ್ನು ಕೇಂದ್ರದಲ್ಲಿರಿಸಿಕೊಂಡೇ ನವ ನಾಗರಿಕತೆಗಳು ಅಸ್ತಿತ್ವ ಕಟ್ಟಿಕೊಂಡಿವೆ. ದೇಶ, ಮಾರುಕಟ್ಟೆಗಳು ಉಸಿರಾಡುತ್ತಿವೆ. ಇಂದು ಇಡೀ ಜಾಗತಿಕ ಅರ್ಥವ್ಯವಸ್ಥೆಯವೆನ್ನುವುದು ಹೃದಯಹೀನವೂ, ಅಮಾನವೀಯವೂ ಆಗಿ ಪರಿವರ್ತಿತವಾಗಲು ಈ ಲೋಪವೇ ಕಾರಣ. ಈ ಸಂಕೀರ್ಣತೆಗಳನ್ನು ಅರಿಯದೆ ಭ್ರಷ್ಟಾಚಾರದ ಬಗ್ಗೆ ತೆಳುಗ್ರಹಿಕೆಯಲ್ಲಿ ಮಾತನಾಡುವುದು ಯಾವತ್ತೂ ಅಪಾಯಕಾರಿ.

ಇಷ್ಟೆಲ್ಲಾ ಹೇಳಲು ಕಾರಣ, ಇಂದು ಮಾನವೀಯ, ಜನಪರ, ಜನಮುಖಿ ಚಿಂತನೆಗಳುಳ್ಳವರಲ್ಲಿ ಯಾವ ವಿಚಾರಗಳಲ್ಲಿ ಒಮ್ಮತ ಮೂಡಬೇಕಿತ್ತೋ ಅದು ಸಾಧ್ಯವಾಗದೆ ಹೋಗಿರುವುದರಿಂದಾಗಿ. ಬಹುತೇಕ ಸಂದರ್ಭಗಳಲ್ಲಿ ಹಣದ ವಿಚಾರದಲ್ಲಿ ಕೆಲವೊಂದು ಸೀಮಿತ ಕಲ್ಪನೆಗಳಿಂದ ನಾವು ವ್ಯವಹರಿಸುವುದು ಇದಕ್ಕೆಲ್ಲಾ ಕಾರಣವಾಗುತ್ತದೆ. ಇಂದು ಸಮಾಜದ ಕೇಂದ್ರಕ್ಕೆ ಮತ್ತೆ ಮಾನವೀಯ ಮೌಲ್ಯಗಳನ್ನು ತರಬೇಕೆಂದರೆ ಗುಣಗ್ರಾಹಿಯಾಗಿಲ್ಲದ ಹಣದ ವಿಚಾರವಾಗಿ ಅತಿ ಎನಿಸುವಷ್ಟು ಪ್ರಾಮಾಣಿಕವಾಗಿಯೂ, ಕಟುವಾಗಿಯೂ ವರ್ತಿಸುವಂತೆ ಮಾಡಿರುವ ಸ್ಥಾಪಿತ ಮೌಲ್ಯಗಳ ಬಗ್ಗೆಯೇ ನಾವು ಸಂಶಯವನ್ನಿರಿಸಿಕೊಳ್ಳಬೇಕಿದೆ. ಈ ವಿಚಾರದಲ್ಲಿ ನಮ್ಮ ಚಿಂತನೆಗಳು ಹೆಚ್ಚು ಉದಾರವಾಗಬೇಕಿದೆ. ಉತ್ತಮ ಉದ್ದೇಶಗಳು, ಕೆಲಸಕ್ಕಾಗಿ ಹಣ ಹಾಗೂ ಶ್ರಮವನ್ನು ಹೇಗೆ ಒಗ್ಗೂಡಬೇಕು ಎನ್ನುವ ವಿಚಾರದಲ್ಲಿ ಶ್ರೇಷ್ಠತೆಯ ವ್ಯಸನಗಳಿಂದ ನಾವಿಂದು ಹೊರಬರಬೇಕಿದೆ. ಉತ್ತಮ ಉದ್ದೇಶ, ದೂರದರ್ಶಿತ್ವ, ಸಮತೆಯಲ್ಲಿ ನಂಬಿಕೆಯಿಟ್ಟವರನ್ನು ಅಧಿಕಾರದ ಕೇಂದ್ರಕ್ಕೆ ತರಲು ಲಾಬಿ ಮಾಡುವುದು, ಉತ್ತಮ ಧ್ಯೇಯೋದ್ದೇಶಗಳ ಸಾಕಾರಕ್ಕಾಗಿ ಸಂಪನ್ಮೂಲ ಸಂಗ್ರಹದ ವಿಚಾರದಲ್ಲಿ ಅವಾಸ್ತವವೂ, ಅಪ್ರಾಯೋಗಿಕವೂ ಆಗಿರದೆ ಸಮಾಜಕಂಟಕವಲ್ಲದ ಮಾರ್ಗಗಳ ಬಗ್ಗೆ ಪುನರ್ ಪರಿಶೀಲಿಸುವುದು ಇಂದಿನ ಅಗತ್ಯವಾಗಿದೆ. ಒಳಿತನ್ನು ಕೆಟ್ಟದ್ದರಿಂದ ಗೆಲ್ಲಿಸಲು ಸಾಧ್ಯವಿಲ್ಲ ಎನ್ನುವುದು ದಿಟ. ಹಾಗೆಂದು, ಒಳಿತನ್ನು ಒಳಿತಿನಿಂದಲೇ ಸೋಲಿಸಬಾರದು ಕೂಡ. ವಿಚಾರಶೀಲರಿಗೆ ಇವೆರಡರ ನಡುವೆ ಸಮತೋಲನ ಸಾಧಿಸುವುದು ಕಷ್ಟವಾಗಲಾರದು.

ಒಳಿತಿನ ಬೇರುಗಳು ಸಮಾಜದಲ್ಲಿ ಆಳವಾಗಬೇಕೆಂದರೆ, ಮೊದಲು ಉತ್ತಮರ ಪರವಾಗಿ ಪ್ರಜ್ಞಾವಂತರೆಲ್ಲರೂ ಸಕಾರಾತ್ಮಕವಾಗಿ ಲಾಬಿ ಮಾಡಬೇಕಿದೆ. ಸಜ್ಜನರ ಒಳ್ಳೆಯತನಕ್ಕೆ ಪ್ರಾಮಾಣಿಕತೆಯ ಬೇಡಿ, ಸಲಾಕೆಗಳನ್ನು ಹಾಕಿ, ವಸ್ತುನಿಷ್ಠತೆಯ ಲಕ್ಷ್ಮಣರೇಖೆಯನ್ನೆಳೆದು ಪಂಜರದಲ್ಲಿರಿಸಿ ಆ ಮೂಲಕ ಅಧಿಕಾರ ಕೇಂದ್ರಗಳಿಗೆ, ಆಯಕಟ್ಟಿನ ಸ್ಥಳಗಳಿಗೆ ಒತ್ತರಿಸಿಕೊಳ್ಳುವ ದುಷ್ಟರು, ಧನದಾಹಿಗಳು, ಅಯೋಗ್ಯರನ್ನು ದೂರವಿರಿಸಬೇಕಿದೆ. ಉತ್ತಮರು, ಪ್ರತಿಭಾವಂತರು, ಮಾನವೀಯ ಮೌಲ್ಯಗಳುಳ್ಳವರನ್ನು ಅಧಿಕಾರ ಹಾಗೂ ಸಂಪನ್ಮೂಲಗಳಿರುವೆಡೆ ಕೂರಿಸಿ ರಚನಾತ್ಮಕ ಹಾಗೂ ಮಾನವೀಯ ಕೆಲಸಗಳಿಗೆ ಹೆಚ್ಚೆಚ್ಚು ಶಕ್ತಿ, ಸಂಪನ್ಮೂಲಗಳನ್ನು ಹರಿಸಬೇಕಿದೆ. ಇದು ಸಾಧ್ಯವಾಗಬೇಕೆಂದರೆ ನಾವುಗಳು ಅವಾಸ್ತವ ನೆಲೆಗಳಲ್ಲಿ ರೂಢಿಸಿಕೊಂಡಿರುವ ಶ್ರೇಷ್ಠತೆಯ ವ್ಯಸನವನ್ನು ಬದಿಗಿರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...