Homeಮುಖಪುಟಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

"ಚುನಾವಣೆಯಲ್ಲಿ ಸೋಲಿಸಲಾಗದ ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ" -ಕೇಜ್ರಿವಾಲ್

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಬಿಜೆಪಿ ಕಾರ್ಯಕರ್ತರು ತಮ್ಮ ಮನೆಯ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ‘ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ’ ಎಂದಿದ್ದಾರೆ.

“ಪ್ರಪಂಚದ ಅತಿ ದೊಡ್ಡ ಪಕ್ಷ ಮತ್ತು ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿಯು ಈ ರೀತಿಯ ಗೂಂಡಾಗಿರಿ ನಡೆಸಿದರೆ ದೇಶದ ಯುವಜನರಿಗೆ ಯಾವ ಸಂದೇಶ ನೀಡಿದಂತಾಗುತ್ತದೆ? ಈ ರೀತಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಏಕೆಂದರೆ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ” ಕೇಜ್ರಿವಾಲ್ ಹೇಳಿದ್ದಾರೆ.

ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಕೇಜ್ರಿವಾಲ್‌ ನೀಡಿದ ಹೇಳಿಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗಿದ್ದು ಕೇಜ್ರಿವಾಲ್ ಮನಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸಿದೆ ಎಂದು ಆಮ್‌ ಆದ್ಮಿ ಪಾರ್ಟಿ (ಎಎಪಿ) ಆರೋಪಿಸಿದ್ದು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ.

ಪಂಜಾಬ್ ವಿಧಾನಸಭೆಯಲ್ಲಿ ಎಎಪಿ ಗೆಲುವು ಬಿಜೆಪಿಯನ್ನು ಕಂಗೆಡಿಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಪಂಜಾಬ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಈಗ ಅವರನ್ನು ಕೊಲ್ಲಲು ಬಯಸಿದೆ ಎಂದಿದ್ದಾರೆ.

ಬುಧವಾರ ಮುಖ್ಯಮಂತ್ರಿಯವರ ಮನೆ ಮೇಲೆ ನಡೆದ ದಾಳಿಯು, ಪೊಲೀಸರ ಸಹಾಯದಿಂದ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸುತ್ತಿದೆ ಎಂಬುದನ್ನು ತೋರಿಸುತ್ತದೆ. ಇದರ ವಿರುದ್ಧ ನಾವು ಔಪಚಾರಿಕ ದೂರು ನೀಡುತ್ತೇವೆ ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಕೇಜ್ರಿವಾಲ್ ಮೇಲೆ ನಡೆದಿರುವ ಜೀವ ಬೆದರಿಕೆಯ ದಾಳಿ ಇದಾಗಿದೆ. ದಾಳಿಯನ್ನು ವ್ಯವಸ್ಥಿತವಾಗಿ ಯೋಜಿಸಲಾಗಿದೆ” ಎಂದು ಅವರು ದೂರಿದ್ದಾರೆ.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಸಂಸದರ ನೇತೃತ್ವದಲ್ಲಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಕಾರ್ಯಕರ್ತರು ಬುಧವಾರ ದೆಹಲಿ ಮುಖ್ಯಮಂತ್ರಿಯವರ ನಿವಾಸದ ಬಳಿ ಘೋಷಣೆಗಳನ್ನು ಕೂಗಿದರು. ಕಾಶ್ಮೀರಿ ಪಂಡಿತರ ದುಸ್ಥಿತಿಯನ್ನು ಕೇಜ್ರಿವಾಲ್ ಅಣಕಿಸಿದ್ದಾರೆಂದು ಆರೋಪಿಸಿ, ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಸೂರ್ಯ ಸೇರಿದಂತೆ ಕೆಲವು ಸದಸ್ಯರು ಸಿಎಂ ನಿವಾಸದ ಮುಖ್ಯ ಗೇಟ್ ತಲುಪಲು ಯಶಸ್ವಿಯಾದರು. ಸ್ಟೀಲ್ ಬಾಗಿಲಿಗೆ ಬಣ್ಣ ಎಸೆದರು. ಗೇಟ್ ಬಳಿ ಅಳವಡಿಸಲಾದ ಸಿಸಿಟಿವಿಯನ್ನು ಹಾನಿಗೊಳಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದಾರೆ.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದರು.

‘ಇದು ಕೇಜ್ರಿವಾಲ್ ಅವರನ್ನು ಕೊಲ್ಲುವ ಪ್ರಯತ್ನವಾಗಿದೆ’ ಎಂಬ ಸಿಸೋಡಿಯಾ ಹೇಳಿಕೆಯನ್ನು ಉಲ್ಲೇಖಿಸಿದ ಸೂರ್ಯ, “ನಾವು ಅವರನ್ನು (ಕೇಜ್ರಿವಾಲ್) ಭೇಟಿ ಮಾಡಿ ನಮ್ಮ ದುಃಖವನ್ನು ವ್ಯಕ್ತಪಡಿಸಲು ಬಯಸಿದ್ದೇವೆ. ಇದು ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವ ಯತ್ನ ಎಂದಿರುವುದು ಉನ್ಮಾದ ಮತ್ತು ಕಲ್ಪನೆಯಿಂದ ಕೂಡಿದೆ” ಎಂದಿದ್ದಾರೆ.

ಎಎಪಿ ಶಾಸಕ ಅತಿಶಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಿಎಂ ಮನೆಗೆ ಹೇಗೆ ತಲುಪಲು ಸಾಧ್ಯವಾಯಿತು ಎಂದು ಕೇಳಿದ್ದಾರೆ. “ಶಾಕಿಂಗ್! ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಆಕ್ರೋಶ ವ್ಯಕ್ತಪಡಿಸಿದಾಗ ದೆಹಲಿ ಪೊಲೀಸರು ಏನು ಮಾಡುತ್ತಿದ್ದರು?” ಎಂದು ಟ್ವೀಟ್ ಮಾಡಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 70 ಮಂದಿಯನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ಐಪಿ ಕಾಲೇಜು ಬಳಿಯ ಲಿಂಕ್ ರಸ್ತೆಯಲ್ಲಿರುವ ಸಿಎಂ ನಿವಾಸದ ಹೊರಗೆ ಬಿಜೆವೈಎಂನ ಸುಮಾರು 150-200 ಪ್ರತಿಭಟನಾಕಾರರು ಧರಣಿ ಆರಂಭಿಸಿದರು ಎಂದು ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಮಾಹಿತಿ ನೀಡಿದ್ದಾರೆ.

“ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ದೆಹಲಿ ಸಿಎಂ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಸಿಎಂ ನಿವಾಸದ ಹೊರಗೆ ಬಂದು ಗದ್ದಲ ಎಬ್ಬಿಸಿ ಘೋಷಣೆಗಳನ್ನು ಕೂಗಿದರು. ಸಿಎಂ ಮನೆ ಬಾಗಿಲಿಗೂ ಬಣ್ಣ ಎರಚಿದ್ದಾರೆ. ಬೂಮ್ ತಡೆಗೋಡೆ ಮತ್ತು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನೂ ಧ್ವಂಸಗೊಳಿಸಲಾಗಿದೆ” ಎಂದು ಹೇಳಿದರು.

ಕಳೆದ ಗುರುವಾರ, ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ಕಾಶ್ಮೀರಿ ಪಂಡಿತರ ನಿರ್ಗಮನವನ್ನು “ದೊಡ್ಡ ದುರಂತ” ಮತ್ತು “ಅನ್ಯಾಯ” ಎಂದು ಕರೆದಿರುವ ಕೇಜ್ರಿವಾಲ್, “ಬಿಜೆಪಿಗೆ ಕಾಶ್ಮೀರ ಫೈಲ್‌ಗಳು ಮುಖ್ಯವಾಗಿದೆ. ನನಗೆ ಕಾಶ್ಮೀರಿ ಪಂಡಿತರು ಹೆಚ್ಚು ಮುಖ್ಯ. ಕಾಶ್ಮೀರದಿಂದ ಪಂಡಿತರು ವಲಸೆ ಬಂದಾಗ 1993ರಲ್ಲಿ 233 ಪಂಡಿತರು ದೆಹಲಿ ಸರ್ಕಾರಕ್ಕೆ ಗುತ್ತಿಗೆ ಶಿಕ್ಷಕರಾಗಿ ಸೇರಿದ್ದರು. ನಮ್ಮ ಸರ್ಕಾರ ಬಂದಾಗ ಅವರನ್ನೆಲ್ಲ ಖಾಯಂ ಮಾಡಿದೆವು. ನಾವು ಅವರ ಮೇಲೆ ಸಿನಿಮಾ ಮಾಡಿಲ್ಲ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...