ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಶೀಘ್ರದಲ್ಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಮತ್ತು ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡುತ್ತೇವೆ. ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು.
ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ ಹಾಗೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸಿಎಂ ಸೂಚಿಸಿದರು.
ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚಿಸಲಾಗಿದೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚಿಸಿದ್ದೇವೆ ಎಂದು ತಿಳಿಸಿದರು.
‘Banning of Unregulated lending Activities’ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ ಕೈಗೊಳ್ಳುತ್ತೇವೆ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ಸಾಲ ವಸೂಲಾತಿ ಕುರಿತಾಗಿ ಆರ್ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು. ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು ಎಂದು ಸಿಎಂ ಹೇಳಿದರು.
ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ


