ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್ಆರ್(HR) ಅಮಿತ್ ಚಕ್ರವರ್ತಿ ಅವರು ಯುಎಪಿಎಯಡಿ ಬಂಧನ ಮತ್ತು ಬಂಧನಕ್ಕೆ ತಡೆ ನಿರಾಕರಿಸಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಬಂಧನವನ್ನು ವಾಪಾಸ್ಸು ಪಡೆಯಲು ನಿರಾಕರಿಸಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಬಂಧನವನ್ನು ಪ್ರಶ್ನಿಸಿ ಪ್ರಬೀರ್ ಪುರ್ಕಾಯಸ್ಥ ಅವರು ಹೈಕೋರ್ಟ್ ಮೊರೆ ಹೋಗಿದ್ದ ವೇಳೆ ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎಯಡಿ ಬಂಧನದ ಸಮಯದಲ್ಲಿ ಬಂಧನದ ಬಗ್ಗೆ ಪೊಲೀಸರು ಲಿಖಿತ ಆಧಾರಗಳನ್ನು ಒದಗಿಸುವ ಅಗತ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.
ಅ.3 ರಂದು ದೆಹಲಿ ಪೊಲೀಸರು ನ್ಯೂಸ್ ಕ್ಲಿಕ್ ಪೋರ್ಟಲ್ನ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್ಆರ್(HR) ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಿದ್ದರು. ನ್ಯೂಸ್ಕ್ಲಿಕ್ ಕಚೇರಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳಿಂದ 300ಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದರು.
ಅ.4 ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ, ನೆವಿಲ್ಲೆ ರಾಯ್ ಸಿಂಗಮ್, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಪರಸ್ಪರ ನೇರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರವಿಲ್ಲದೆ ಭಾರತದ ನಕ್ಷೆಯನ್ನು ಹೇಗೆ ರಚಿಸುವುದು ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶವೆಂದು ತೋರಿಸುವುದು ಹೇಗೆ ಎಂದು ಇವರು ಚರ್ಚಿಸುತ್ತಿರುವುದು ಕಂಡುಬಂದಿದೆ. ಈ ಉದ್ದೇಶವನ್ನು ಸಾಧಿಸಲು ಆರೋಪಿಗಳು ವಿದೇಶಿ ನಿಧಿಯ ಹೆಸರಿನಲ್ಲಿ ಪಿಪಿಕೆ ನ್ಯೂಸ್ಕ್ಲಿಕ್, ಜಿಸ್ಪಾನ್ ಇಂಡಿಯಾ, ಜೆಜೆ ಎಂಟರ್ಪ್ರೈಸಸ್, ವರ್ಚುನೆಟ್ ಸಿಸ್ಟಮ್ ಹೆಸರಿನ ಕಂಪನಿಗಳಲ್ಲಿ 115 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನು ಓದಿ: ‘ನ್ಯೂಸ್ ಕ್ಲಿಕ್’ ಪ್ರಧಾನ ಸಂಪಾದಕರಿಗೆ ಹೈಕೋರ್ಟ್ ನೊಟೀಸ್