ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಕಾಂಗ್ರೆಸ್ ಮತ್ತು ಮಾಯಾವತಿ ಅವರ ಬಿಎಸ್ಪಿ ಜೊತೆ ಯಾವುದೇ ಮೈತ್ರಿಕೂಟ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.
ಮಾಯಾವತಿ ಮತ್ತು ಕಾಂಗ್ರೆಸ್ ಅವರ ಮೈತ್ರಿಕೂಟದೊಂದಿಗೆ ಚುನಾವಣೆ ಗೆಲ್ಲಲ್ಲು ವಿಫಲವಾದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತಮ್ಮ ಪಕ್ಷವು ಸಮಾನ ಮನಸ್ಸಿನ ಸಣ್ಣ, ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಬಿಜೆಪಿಯ ಸೋಲಿನ ಮುನ್ಸೂಚನೆ ನೀಡಿದರು ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಭಿವೃದ್ಧಿಯನ್ನು ನಿರ್ಬಂಧಿಸಿದ್ದಾರೆ. ಅವರು ತಮ್ಮ ಆಳ್ವಿಕೆಯಲ್ಲಿ ಭ್ರಷ್ಟಾಚಾರ ಮತ್ತು ದಬ್ಬಾಳಿಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರಿಂದ ಜನರು ಈಗ ಬದಲಾವಣೆಯನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ
“ದೊಡ್ಡ ಪಕ್ಷಗಳೊಂದಿಗಿನ ನನ್ನ ಅನುಭವವು ಉತ್ತಮವಾಗಿಲ್ಲ, ನಾನು ಅವರೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿಯನ್ನು ಸೋಲಿಸಲು ಬಯಸುವವರು, ಸಮಾಜವಾದಿ ಪಕ್ಷಕ್ಕೆ ಸಹಾಯ ಮಾಡುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ” ಎಂದು ಎನ್ಡಿಟಿವಿಯ ವಿಶೇಷ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.
ಮಾಯಾವತಿಯವರ ಬಹುಜನ ಸಮಾಜ ಪಕ್ಷದೊಂದಿಗಿನ 2019 ರ ಮೈತ್ರಿ ವಿಫಲವಾದ ನಂತರ “ಬುವಾ-ಭತಿಜಾ” ಜೋಡಿ ಪುನರಾವರ್ತಿತವಾಗುವುದನ್ನು ಅಖಿಲೇಶ್ ಯಾದವ್ ತಳ್ಳಿ ಹಾಕಿದ್ದಾರೆ. ಇದರ ಜೊತೆಗೆ ಬಿಎಸ್ಪಿಯ ಕೆಲವು ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಇನ್ನು ಕಾಂಗ್ರೆಸ್ ಬಗ್ಗೆ ಮಾತನಾಡಿರುವ ಅಖಿಲೇಶ್ ಯಾದವ್, ಬಿಜೆಪಿಯನ್ನು ಸೋಲಿಸಲು ಯುಪಿಯಲ್ಲಿ ಕಾಂಗ್ರೆಸ್ ಪಕ್ಷವು ತುಂಬಾ ದುರ್ಬಲವಾಗಿದೆ ಎಂದು ಹೇಳಿದ್ದಾರೆ. “ನಾವು ಕಾಂಗ್ರೆಸ್ನೊಂದಿಗೆ 2017 ರಲ್ಲಿ ಉತ್ತಮ ಅನುಭವವನ್ನು ಹೊಂದಿಲ್ಲ. ನಾವು ಅವರಿಗೆ 100 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿದ್ದೇವು ಆದರೆ ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ. ರಾಜ್ಯದಲ್ಲಿ ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ” ಎಂದು ಯಾದವ್ ಹೇಳಿದ್ದಾರೆ.
2024 ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ಬರುತ್ತಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಯುಪಿಯ 403 ಸ್ಥಾನಗಳಲ್ಲಿ 350 ಸ್ಥಾನಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.
“ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿಗೆ ಖಂಡಿತ ಸೋಲುಂಟಾಗಲಿದೆ. ಬಿಜೆಪಿ ತಮ್ಮ ನಾಯಕತ್ವದಲ್ಲಿ ರಾಜ್ಯದಲ್ಲಿ ನಡೆದ ಅತಿದೊಡ್ಡ ಪರೀಕ್ಷೆಯಲ್ಲಿ ಜನರನ್ನು ಸೋಲಿಸಿದ್ದಾರೆ. ರಾಜ್ಯದ ಜನರನ್ನು ಸರ್ಕಾರ ಕೈಬಿಟ್ಟಿದೆ” ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್ ಮುಖ್ಯಮಂತ್ರಿ ಅಭ್ಯರ್ಥಿ: ಬಿಜೆಪಿ