ಯಾವುದೇ ಕಾರಣಕ್ಕೂ ರೈತರಿಂದ ಬಿಪಿಎಲ್ ಕಾರ್ಡುಗಳನ್ನು ವಾಪಸ್ ಪಡೆಯಲು ಬಿಡುವುದಿಲ್ಲ. ಒಂದು ವೇಳೆ ಸರಕಾರ ಅಂತಹ ಪ್ರಯತ್ನಕ್ಕೆ ಕೈ ಹಾಕಿದರೆ ರೈತರ ಪರವಾಗಿ ನಿಲ್ಲುತ್ತೇವೆ ಎಂದು ಕೆಪಿಸಿಸಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಕಚೇರಿಯಲ್ಲಿ ಜೂ.14ರಂದು ಅಧ್ಯಕ್ಷರಾಗಿ ಪದಗ್ರಹಣ ಮಾಡುವ ಸಮಾರಂಭದ ಸಿದ್ಧತೆಗಳ ಕುರಿತು ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಟ್ರ್ಯಾಕ್ಟರ್ ಇರುವ ರೈತರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ವಾಪಸ್ ಕೊಡಬೇಕು ಎಂಬ ಸರಕಾರದ ನಿರ್ಧಾರ ಸರಿಯಲ್ಲ. ಎರಡು ಎಕರೆ ಜಮೀನು ಹೊಂದಿರುವ ರೈತ ಕೂಡಾ ಇವತ್ತು ಟ್ರ್ಯಾಕ್ಟರ್ ಹೊಂದಿರುತ್ತಾನೆ. ಅವನನ್ನು ದೊಡ್ಡ ರೈತ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರೈತರು ಆರ್ಥಿಕವಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರಿಂದ ಪಡಿತರ ಕಾರ್ಡ್ ವಾಪಸ್ ಪಡೆಯುವುದು ಸರಿಯಲ್ಲ. ದೇಶದಲ್ಲಿ ಆಹಾರ ಭದ್ರತೆ ಕಾನೂನು ಜಾರಿಯಲ್ಲಿದೆ. ಪಡಿತರ ಚೀಟಿ ಹೊಂದಿರುವ ರೈತರಿಗೆ ಅನ್ನಭಾಗ್ಯ ಯೋಜನೆ ಮೂಲಕ ಅಕ್ಕಿ ವಿತರಿಸಬೇಕು ಎಂದು ಅವರು ಆಗ್ರಹಿಸಿದರು.
ಕೊರೊನಾ ವಿಚಾರದಲ್ಲಿ ಸರಕಾರ ಪ್ರಕಟಿಸಿರುವ ಪ್ಯಾಕೇಜ್ ಕೇವಲ ಘೋಷಣೆಯಾಗಿದೆ. ಇದು ಯಾವುದೇ ರೈತ, ಕಾರ್ಮಿಕರಿಗೆ ತಲುಪಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಹಳ್ಳಿಗಳ ಸುತ್ತಮುತ್ತಲು ಇರುವ ರೈತರು, ಕಾರ್ಮಿಕರಿಗೆ ಆನ್ಲೈನ್ನಲ್ಲಿ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ನೆರವು ನೀಡುವಂತೆ ಶಿವಕುಮಾರ್ ಕರೆ ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ಜೂನ್ 14 ರಂದು 150 ಜನರನ್ನು ಸೇರಿಸಿ ಪದಗ್ರಹಣ ಕಾರ್ಯಕ್ರಮ ಕಾರ್ಯಕ್ರಮ ನಡೆಸಲು ಕೋರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಆನ್ಲೈನ್ ಮೂಲಕ ಪ್ರತಿಜ್ಞಾ ಕಾರ್ಯಕ್ರಮವನ್ನು ಪ್ರಸಾರ ಮಾಡುವುದರಿಂದ ಯಾರು ಕೂಡ ಈ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಗಳಿಂದ ಬರುವುದು ಬೇಡ ಎಂದು ಶಿವಕುಮಾರ್ ಮನವಿ ಮಾಡಿದರು.
ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಡಿಗೆ ಮಾಡಿದ ಅಪಮಾನ: ಎಚ್ಡಿಕೆ ಆಕ್ರೋಶ