ಕರ್ನಾಟಕ ಸರ್ಕಾರವು ಫ್ಯಾಕ್ಟ್ಚೆಕ್ ಘಟಕದ ಮೂಲಕ ವ್ಯಕ್ತಿಗಳ ಅಥವಾ ಮಾಧ್ಯಮ ಸಂಸ್ಥೆಗಳ ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಪ್ರಯತ್ನಿಸುವುದಿಲ್ಲ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಸ್ಪಷ್ಟನೆ ನೀಡಿದೆ.
ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ”ನಾವು ಯಾರನ್ನೂ ನಿಯಂತ್ರಿಸುವುದಿಲ್ಲ. ಯಾವುದೇ ವ್ಯಕ್ತಿಗಳು ಅಥವಾ ಪತ್ರಿಕಾ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದ್ದಾರೆ.
”ತಪ್ಪು ಮಾಹಿತಿ ಅಥವಾ ಸುಳ್ಳು ಸುದ್ದಿ ಹರಡುವ ಪ್ರಕರಣಗಳಲ್ಲಿ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆ, ಭಾರತೀಯ ದಂಡ ಸಂಹಿತೆಯಡಿ ಕ್ರಮ ಕೈಗೊಳ್ಳುತ್ತದೆ” ಎಂದು ಖರ್ಗೆ ಹೇಳಿದರು.
”ಕೆಲವು ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ನೀಡುತ್ತಿವೆ. ಸಮಾಜದ ಮೇಲೆ ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯ ಪರಿಣಾಮವನ್ನು ಕಡಿಮೆ ಮಾಡುವುದು ಅತ್ಯಗತ್ಯ. ಫ್ಯಾಕ್ಟ್ಚೆಕ್ ಘಟಕವು ತಪ್ಪು ಮಾಹಿತಿಯ ವಿರುದ್ಧ ಹೋರಾಟ ಮಾಡುವ ಕೋಶವಾಗಿರುತ್ತದೆ” ಎಂದು ಅವರು ಹೇಳಿದರು.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಕಳೆದ ತಿಂಗಳು ವಾಸ್ತವ ಪರಿಶೀಲನಾ ಘಟಕ ಸ್ಥಾಪನೆಗೆ ಅನುಮೋದನೆ ನೀಡಿತ್ತು. ಇದು ನಕಲಿ ಸುದ್ದಿಗಳು, ಫಿಶಿಂಗ್ ಇಮೇಲ್ಗಳು ಮತ್ತು ಸೈಬರ್ ಅಪರಾಧಗಳನ್ನು ಹತ್ತಿಕ್ಕಲು ರಚನೆ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ.
ಆಗಸ್ಟ್ 27ರಂದು, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಈ ಕ್ರಮದ ಬಗ್ಗೆ ತನ್ನ ಕಳವಳವನ್ನು ವ್ಯಕ್ತಪಡಿಸಿತ್ತು. ನಕಲಿ ವಿಷಯವನ್ನು ಪರಿಶೀಲಿಸುವ ಪ್ರಯತ್ನಗಳನ್ನು ಸರ್ಕಾರದ ವ್ಯಾಪ್ತಿಯಲ್ಲಿಲ್ಲದ ಸ್ವತಂತ್ರ ಸಂಸ್ಥೆಗಳಿಗೆ ನೀಡಬೇಕು ಎಂದು ಹೇಳಿತ್ತು.
ಹಿಂದಿ ಸುದ್ದಿ ವಾಹಿನಿ ಆಜ್ ತಕ್ನ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರು, ಧಾರ್ಮಿಕ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ವಾಣಿಜ್ಯ ವಾಹನ ಸಬ್ಸಿಡಿ ಯೋಜನೆಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದರಿಂದ ಕರ್ನಾಟಕ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.