ಕೊರೊನಾ ಲಾಕ್ಡೌನ್ ಸಮಯದಲ್ಲಿ ಯಾವೊಬ್ಬ ವಲಸೆ ಕಾರ್ಮಿರೂ ಸಾವನ್ನಪ್ಪಿದ ಉದಾಹರಣೆಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಕಲಬುರಗಿಯಲ್ಲಿ ಹೇಳಿದ್ದಾರೆ.
ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ನಳಿನ್ ಕುಮಾರ್, ವಲಸೆ ಕಾರ್ಮಿಕರು ಸೇರಿದಂತೆ ದೇಶದಲ್ಲಿ ಯಾರೊಬ್ಬರೂ ಆಹಾರವಿಲ್ಲದೆ ಸಾವನ್ನಪ್ಪಿದ ಉದಾಹರಣೆಗಳಿಲ್ಲ. ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್ ಮತ್ತು ರೈಲ್ವೆ ವ್ಯವಸ್ಥೆ ಹಾಗೂ ಅವರಿಗೆ ಆಹಾರವನ್ನು ಸರಕಾರವೇ ಮುಂದೆ ನಿಂತು ಕಲ್ಪಿಸಿದೆ ಎಂದು ಕಟೀಲು ಹೇಳಿದ್ದಾರೆ.
ಕೊರೊನಾ ಬಿಕ್ಕಟ್ಟನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ಇಡೀ ವಿಶ್ವವೇ ಭಾರತದ ಕ್ರಮವನ್ನು ಕೊಂಡಾಡಿದೆ. ಆದರೆ, ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಮಾತ್ರ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೊರೊನಾ ಸೋಂಕಿಗೆ ಯಾವುದೇ ಒಂದು ಜಾತಿ, ಧರ್ಮವೆಂದು ಗೊತ್ತಿಲ್ಲ. ಅದು ಒಂದು ವೈರಸ್. ಎಲ್ಲರಿಗೂ ಬರುತ್ತದೆ. ಹೀಗಾಗಿ ಎಲ್ಲರೂ ಮುನ್ನಚ್ಚರಿಕೆ ವಹಿಸುವುದು ಬಹಳ ಮುಖ್ಯ. ಆ ದೃಷ್ಟಿಯಿಂದ ಪ್ರಧಾನಿ ಮೋದಿ ಸೂಕ್ತ ಸಂದರ್ಭದಲ್ಲಿ ಲಾಕ್ಡೌನ್ ಘೋಷಣೆ ಮಾಡಿದ್ದು, ಎಲ್ಲರೂ ಸರಕಾರದ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯ ಆಯ್ಕೆಯ ಅಚ್ಚರಿ, ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲೂ ಇರಲಿದೆ, ಅಲ್ಲಿಯವರೆಗೂ ಕಾದುನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಓದಿ: ಮಾನನಷ್ಟ ಮೊಕದ್ದಮೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಜಾಮೀನು!