ಹೊಸ ರೂಪಾಂತರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಹೊಸ ವರ್ಷ ಆಚರಣೆಗೆ ನಿಷೇಧ ಹೇರಲಾಗುವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ನಿಷೇಧವು ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ನಗರಕ್ಕೆ ಸೀಮಿತವಾಗಿರುವುದಿಲ್ಲ. ರಾಜ್ಯದ ಯಾವುದೇ ಭಾಗದ ಸಾರ್ವಜನಿಕ ಸ್ಥಳಗಳಲ್ಲಿಯೂ ಹೊಸ ವರ್ಷಾಚರಣೆಯ ನೆಪದಲ್ಲಿ ಪಾರ್ಟಿಗಳನ್ನು ಆಯೋಜಿಸಲು, ಜನಜಂಗುಳಿ ಸೇರಲು ಅವಕಾಶ ನೀಡುವುದಿಲ್ಲ” ಎಂದರು.
“ಕ್ಲಬ್, ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಮಾರ್ಗಸೂಚಿಯ ಪ್ರಕಾರ ನಿಗದಿತ ಸಂಖ್ಯೆಯ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು. ಡಿ.ಜೆ. ಬಳಕೆ ಮತ್ತು ಗುಂಪು ನರ್ತನಕ್ಕೆ ಅವಕಾಶ ಇರುವುದಿಲ್ಲ. ಕೊರೊನಾ ನಿಯಂತ್ರಣದ ದೃಷ್ಟಿಯಲ್ಲಿ ಗೃಹ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಚರ್ಚಿಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದಾರೆ” ಎಂದು ಅವರು ಹೇಳಿದರು.
ಇದನ್ನೂ ಓದಿ:ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು
“ಹೊಸ ವರ್ಷಾಚರಣೆಗೆ ಮುಕ್ತ ಅವಕಾಶ ನೀಡಿದರೆ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುವ ಭೀತಿ ಇದೆ. ಬ್ರಿಟನ್ನಿಂದ ಆರಂಭಿಕ ಹಂತದಲ್ಲಿ ರಾಜ್ಯಕ್ಕೆ ಬಂದಿರುವ ವ್ಯಕ್ತಿಗಳು ಹಲವೆಡೆ ಓಡಾಡಿರುವ ಸಾಧ್ಯತೆ ಇದೆ. ಈ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೊರೊನಾ ನಿಯಂತ್ರಣ ಮಾರ್ಗಸೂಚಿಯ ಪ್ರಕಾರ ಎಲ್ಲರೂ ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯ” ಎಂದರು.
ಈ ಹಿಂದೆ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸಿತ್ತು. ಬಳಿಕ ಯಡಿಯೂರಪ್ಪನವರು ಅದನ್ನು ಮುಂದೂಡಿದ್ದೇವೆ ಎಂದು ಟ್ವೀಟ್ ಮಾಡಿದ್ದರು. ಆದರೆ ಅತಿ ಶೀಘ್ರದಲ್ಲೇ ರಾತ್ರಿ ಕರ್ಫ್ಯೂ ಅನ್ನು ಸಂಪೂರ್ಣ ಹಿಂತೆಗೆದುಕೊಂಡಿದ್ದೇವೆ ಎಂದೂ ಘೋಷಿಸಿದರು. ಯಡಿಯೂರಪ್ಪನವರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಇದನ್ನೂ ಓದಿ:ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್ಧರ್ಮೀಯ ಸಂಗಾತಿಗಳು!


