ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮಾಡುವುದಕ್ಕೆ ನನ್ನ ವಿರೋಧವೂ ಇಲ್ಲ, ನನಗೆ ಬೇಸರವೂ ಇಲ್ಲ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2024 ಲೊಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಜೆಡಿಯು ಮತ್ತು ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಿಂದ ಹೋರಾಡಲಿವೆ. ದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪ ಮಾಡಿರುವ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ” ಎಂದಿದ್ದಾರೆ.
“ಯಾರನ್ನು ಬೇಕಾದರು ಪ್ರಧಾನಿ ಅಭ್ಯರ್ಥಿ ಮಾಡಲಿ ನನಗೆ ಯಾವುದೇ ಬೇಸರವಿಲ್ಲ. ಸೀಟು ಹಂಚಿಕೆಯ ಬಗ್ಗೆ ಆದಷ್ಟು ಬೇಗ ನಿರ್ಧಿರಿಸುವಂತೆ ನಾನು ಕೋರಿದ್ದೇನೆ. ಸೀಟು ಹಂಚಿಕೆ ಸೀಟು ಹಂಚಿಕೆ ಸೂತ್ರವನ್ನು ಶೀಘ್ರದಲ್ಲೇ ರೂಪಿಸಲಾಗುವುದು” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಡಿಸೆಂಬರ್ 19ರಂದು ದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಕುರಿತು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟದ ವಿರುದ್ದ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.
ಖರ್ಗೆ ಪ್ರಧಾನಿ ಅಭ್ಯರ್ಥಿಯಾಗುವುದಕ್ಕೆ ನಿತೀಶ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಅವರು ಇಂಡಿಯಾ ಮೈತ್ರಿಕೂಟ ತೊರೆಯುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ರಾಹುಲ್ ಗಾಂಧಿ ಕೂಡ ನಿತೀಶ್ ಮನೆಗೆ ಭೇಟಿ ಕೊಟ್ಟಿರುವುದು ಈ ವಿಚಾರಕ್ಕೆ ಪುಷ್ಠಿ ನೀಡಿತ್ತು. ಇಂದು ನಿತೀಶ್ ಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ : ಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್ಗೆ ಪತ್ರ ಬರೆದ ಖರ್ಗೆ