ಕಾರು ಮತ್ತು ಇತರೆ ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ತೀರ್ಮಾನಿಸಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ಕಾರು ಮತ್ತು ಇತರೆ ವಾಹನ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಹಿಂದಿನ ಸರ್ಕಾರ ತೀರ್ಮಾನಿಸಿತ್ತು. ಆ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯದ ಬಿಪಿಎಲ್ ಪಡಿತರ ಚೀಟಿದಾರರಿಗೆ 10 ಕೆ.ಜಿ. ಅಕ್ಕಿ ಪೂರೈಸುವುದಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 1.28 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದಾರೆ. 3 ಲಕ್ಷ ಮಂದಿ ಹೊಸದಾಗಿ ಕಾರ್ಡ್ಗೆ ಅರ್ಜಿ ಸಲ್ಲಿಸಿದ್ದು, ಪರಿಶೀಲಿಸಿ ತಿಂಗಳೊಳಗೆ ವಿತರಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
21 ಲಕ್ಷ ಬಿಪಿಎಲ್ ಪಡಿತರ ಚೀಟಿದಾರರಿಗೆ ಬ್ಯಾಂಕ್ ಖಾತೆ ಇಲ್ಲದೆ ಗೊಂದಲ ಏರ್ಪಟ್ಟಿತ್ತು. 7 ಲಕ್ಷ ಕಾರ್ಡ್ದಾರರ ಬ್ಯಾಂಕ್ ಖಾತೆ ತೆರೆದು ಜೋಡಣೆ ಮಾಡಲಾಗಿದೆ. ಉಳಿದ 14 ಲಕ್ಷ ಮಂದಿಯ ಬ್ಯಾಂಕ್ ಖಾತೆ ತೆರೆಯಲು ಸೂಚಿಸಲಾಗಿದೆ.
ಇದಲ್ಲದೆ ಪರಿಶಿಷ್ಟ ಜಾತಿ ಪಂಗಡದ ಪಡಿತರ ಚೀಟಿದಾರ ಬಗ್ಗೆ ಪರಿಶೀಲಿಸಲು ನ್ಯಾಯಬೆಲೆ ಅಂಗಡಿಯಲ್ಲಿ ಜಾತಿ ಪ್ರಮಾಣಪತ್ರ ಸಂಗ್ರಹಿಸಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ದೆಹಲಿ: ಬಾಲಕಿ ಮೇಲೆ ಅಧಿಕಾರಿಯಿಂದ ಅತ್ಯಾಚಾರ ಪ್ರಕರಣ: ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಸಚಿವೆ ಅತಿಶಿ