ಹಿಜಾಬ್ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ದ ಸಲ್ಲಿಸಲಾಗಿರುವ ಮೇಲ್ಮನವಿಗಳ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಹೋಳಿ ರಜೆಯ ನಂತರ ನ್ಯಾಯಾಲಯವು ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರಿಗೆ ನ್ಯಾಯಾಲಯ ತಿಳಿಸಿದೆ.
ಹಿಜಾಬ್ ನಿಷೇಧದ ವಿರುದ್ಧ ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಹಿಜಾಬ್ ಧರಿಸುವ ಹಕ್ಕನ್ನು ಸಂವಿಧಾನದ 19(1)(ಎ) ಪರಿಚ್ಛೇದದ ಅಡಿಯಲ್ಲಿ ಸಂರಕ್ಷಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಗುರುತಿಸಲು ವಿಫಲವಾಗಿದೆ ಎಂದು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮುಂದೆ ವಾದ ಮಂಡಿಸಿದ್ದಾರೆ. ಸಂವಿಧಾನದ 25 ನೇ ವಿಧಿಯನ್ನು ಉಲ್ಲೇಖಿಸಿರುವ ವಿದ್ಯಾರ್ಥಿಗಳು ಹಿಜಾಬ್ ಧರಿಸುವ ಹಕ್ಕನ್ನು ಸಮರ್ಥಿಸಿಕೊಂಡಿದ್ದಾರೆ.
ಇದನ್ನೂ ಓದಿ: ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು
ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್ ನೀಡಿದ್ದು, ಹಿಜಾಬ್ ಪರವಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರಿಗೆ ನಿರಾಸೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವ ಹೈಕೋರ್ಟ್, ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿ, ರಾಜ್ಯ ಸರ್ಕಾರದ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ.
ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.
ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.
ಇದನ್ನೂ ಓದಿ: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡುವಂತೆ ಮಹಿಳಾ ಸಂಘಟನೆಗಳ ಆಗ್ರಹ
“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.
ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.
ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದನ್ನೂ ಓದಿ: ಹಿಜಾಬ್ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ


