ವಾರದಿಂದ ಸುರಿಯುತ್ತಿರುವ ಮಳೆ ಹಾಗೂ ಮಹಾರಾಷ್ಟ್ರ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಟ್ಟ ಕಾರಣ ಕೃಷ್ಣಾ ಮತ್ತು ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೆರೆಯಲ್ಲಿ ಸಿಲುಕಿದ ಜನತೆಯ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳಿಗೆ ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ಕೃಷ್ಣಾ ಮತ್ತು ಭೀಮಾ ನದಿಯಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎನ್ಡಿಆರ್ಎಫ್ ಮತ್ತು ಸೇನಾ ತಂಡದೊಂದಿಗೆ ಜಿಲ್ಲಾಡಳಿತ ಎಲ್ಲಸಿದ್ಧತೆ ಮಾಡಿಕೊಂಡಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹೇಳಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?
ಹೈದರಾಬಾದ್ ಎನ್ಡಿಆರ್ಎಫ್ ತಂಡದಿಂದ 60, ಬೆಂಗಳೂರು ಆರ್ಮಿ ತಂಡ 54 ಮತ್ತು ಜಿಲ್ಲಾ ಅಗ್ನಿಶಾಮಕ ತಂಡ 38 ಸೇರಿ ಒಟ್ಟು 152 ಸಿಬ್ಬಂದಿ ಸ್ಥಳದಲ್ಲಿದ್ದು, ಲೈಪ್ ಜಾಕೇಟ್, ರೋಪ್, ಟಾರ್ಚ್ ಸೇರಿದಂತೆ ಹಲವು ರಕ್ಷಣೆ ಸಲಕರಣೆಗಳೊಂದಿಗೆ ಎರಡು ತಂಡಗಳನ್ನಾಗಿ ವಿಂಗಡಿಸಿ ಜನ ಜಾನುವಾರುಗಳ ರಕ್ಷಣೆಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಮೂರು ಸೇನಾ ತಂಡಗಳು ಅಫ್ಜಲ್ಪುರ, ಜೇವರ್ಗಿ ಹಾಗೂ ಶಹಾಬಾದ್ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಕಾರ್ಯಾಚರಣೆ ನಡೆಸಿದ್ದು, ನಿನ್ನೆ ರಾತ್ರಿಯಿಂದಲೇ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ಯಾದಗಿರಿ ಜಿಲ್ಲೆಯಲ್ಲಿ 6,500 ಹೆಕ್ಟೇರ್ಗೂ ಹೆಚ್ಚು ಬೆಳೆ, 2,900 ಮನೆಗಳಿಗೆ ಹಾನಿಯಾಗಿದೆ ಎಂದು ಪ್ರಜಾವಾಣಿ ವರದಿ ಮಾಡಿದ್ದು, ನಷ್ಟದ ಪ್ರಮಾಣ ಇನ್ನೂ ಹೆಚ್ಚಾಗಬಹುದು ಎಂದು ಅದು ಹೇಳಿದೆ.
ಅಕ್ಟೋಬರ್ 21 ರ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ವಾಸ್ತವಿಕ ಪ್ರಮಾಣವನ್ನು ಅರಿಯಲು ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಅ.21 ರವರೆಗೂ ಮಹಾಮಳೆ: ಹೈದರಾಬಾದ್ನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ!