Homeಕರ್ನಾಟಕ'ಒಂದು ಪೈಸೆ ಪರಿಹಾರ ನೀಡಿಲ್ಲ; ಕನ್ನಡಿಗರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ..'; ಅಮಿತ್ ಶಾ ಮುಂದೆ...

‘ಒಂದು ಪೈಸೆ ಪರಿಹಾರ ನೀಡಿಲ್ಲ; ಕನ್ನಡಿಗರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ..’; ಅಮಿತ್ ಶಾ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟ ಸಿಎಂ

- Advertisement -
- Advertisement -

ಲೋಕಸಭಾ ಚುನಾವಣಾ ತಯಾರಿಗಾಗಿ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಬರ ಪರಿಹಾರದ ಕುರಿತು ಸರಣಿ ಪ್ರಶ್ನೆಗಳನ್ನಿಟ್ಟಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಗೃಹ ಸಚಿವರಾದ ಅಮಿತ್ ಶಾ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈ ವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ’ ಎಂದು ಹೇಳಿದ್ದಾರೆ.

‘ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್‌ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ ಯಾಕೆ’ ಎಂದಿದ್ದಾರೆ.

‘ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು ₹30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ ₹1,435 ಕೋಟಿ ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ ₹8,195 ಕೋಟಿ ಮತ್ತು ಗುಜರಾತ್‌ಗೆ ₹3,894 ಕೋಟಿ ಪರಿಹಾರ ನೀಡಲಾಗಿತ್ತು. 2019ರಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾರ್‌ನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?
ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತ್‌ನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ’ ಎಂದು ಅವರು ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಗೃಹ ಸಚಿವ ಅಮಿತ್ ಶಹಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ. ಜಗತ್ತಿನ ಯಾವ ಭಾಷೆಗೂ ನಮ್ಮ ವಿರೋಧ ಇಲ್ಲ. ಆದರೆ ಕನ್ನಡದ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪೂಜೆ ಸಲ್ಲಬೇಕೆನ್ನುವುದು ಮಾತ್ರ ಕನ್ನಡಿಗರ ನಿಲುವು. ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ಉತ್ತರ ಕೊಡಿ’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಮತ್ತೆ ಮತ್ತೆ ಹೇಳಿ ಆ ಭಾಷೆಯನ್ನು ಕನ್ನಡಿಗರ ಮೇಲೆ ಹೇರುತ್ತಿರುವುದು ಯಾಕೆ? ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ? ಹೇಳಿದ್ದರೆ ಸಂವಿಧಾನದ ಯಾವ ಪರಿಚ್ಚೇದಲ್ಲಿ ಹೇಳಲಾಗಿದೆ? ದಯವಿಟ್ಟು ಅದನ್ನು ಕನ್ನಡಿಗರ ಮುಂದೆ ತೆರೆದಿಡಿ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಯ ಆಧಾರದಲ್ಲಿ ಮತಕೇಳುವ ವಿಶ್ವಾಸ ನಿಮಗೆ ಇಲ್ಲ. ಮಾಡಿರುವ ತಪ್ಪುಗಳನ್ನು ಒಪ್ಪಿಕೊಳ್ಳುವ ಸಹೃದಯತೆಯೂ ನಿಮಗೆ ಇಲ್ಲ. ರಾಜಕೀಯ ಲಾಭಕ್ಕಾಗಿ ಸಮಾಜದ ಶಾಂತಿ-ಸೌಹಾರ್ದತೆಯನ್ನು ಕೆಡಿಸಬಾರದೆಂಬ ಒಳ್ಳೆಯತನದ ವಿವೇಕವೂ ನಿಮಗೆ ಇಲ್ಲ. ನೀವು ನೀಡಿರುವ ಸಲಹೆಯಂತೆಯೇ ತಾವು ಗಲಭೆ ನಡೆಸುತ್ತಿರುವುದಾಗಿ ಮೈಸೂರಿನ ಮಾಜಿ ಸಂಸದನೊಬ್ಬ ಬಹಿರಂಗ ಹೇಳಿಕೆ ನೀಡಿದ್ದಾನೆ. ನೀವು ಹೋದಲ್ಲಿ ಬಂದಲ್ಲಿ ಗಲಭೆ ನಡೆದು ಶಾಂತಿ ಭಂಗವಾಗುತ್ತಿರುವುದಕ್ಕೆ ಇದೇ ಕಾರಣವೇ” ಎಂದು ಪ್ರಶ್ನಿಸಿದ್ದಾರೆ.

‘ಮಾನ್ಯ ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ. ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು. ಇದರ ಹೊರತಾಗಿ ಅಡ್ಡಮಾರ್ಗದ ಮೂಲಕ ಚುನಾವಣೆಯನ್ನು ಎದುರಿಸಲು ಹೊರಟರೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಖಂಡಿತ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ್ ಸಿಂಗ್ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...