ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಗೆ ರಾಮನಗರ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಬರೆದಿದ್ದಾರೆ ಎನ್ನಲಾದ ಪತ್ರದ ಸತ್ಯಾಸತ್ಯತೆ ಅರಿಯಲು ಸಿಐಡಿ ತನಿಖೆ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚೆಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಅಧಿಕಾರಿಗಳು ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರದ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದವು.
ಈ ಕುರಿತು ಅಧಿಕಾರಿಯೊಬ್ಬರು ಪೊಲೀಸರಿಗೆ ದೂರು ನೀಡುವುದರೊಂದಿಗೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮಂಡ್ಯ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್. ಅಶೋಕ್ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ನಕಲಿ ಪತ್ರದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಈ ಸಂಬಂಧ ಕಾಂಗ್ರೆಸ್ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗೌಡ, ಎಂಎಲ್ ಸಿಗಳಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ ಕೂಡ ಪೊಲೀಸರಿಗೂ ದೂರು ನೀಡಿದ್ದಾರೆ.
ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪತ್ರ ನಕಲಿ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪ ಅವರ ಪುಣ್ಯ ತಿಥಿ ಅಂಗವಾಗಿ ಅವರ ಪ್ರತಿಮೆಯ ಬಳಿ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ”ಈ ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ಕೃಷಿ ನಿರ್ದೇಶಕ ಅಶೋಕ್ ಕುಮಾರ್ ದೂರು ನೀಡಿದ್ದಾರೆ. ತನಿಖೆ ಮಾಡಿ ಸತ್ಯ ಅಂಶ ತಿಳಿಯಲು ಸೂಚಿಸಲಾಗಿದೆ ಎಂದರು.
ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ”ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ” ಎಂದಿದ್ದರು.
”ಬಿಜೆಪಿ ನಾಯಕರೇ, ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”? ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪರೋಕ್ಷವಾಗಿ ಕುಮಾರಸ್ವಾಮಿ ಅವರನ್ನು ಕೆಣಕಿದ್ದರು.
ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.
ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ… pic.twitter.com/kPR5TQColK
— Siddaramaiah (@siddaramaiah) August 7, 2023
ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಾಸ್ವಾಮಿ ಅವರು ”ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್
ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ?” ಎಂದು ತಿರುಗೇಟು ಕೊಟ್ಟಿದ್ದಾರೆ.
ನಿಮ್ಮ ಸಚಿವರ ವಿರುದ್ಧ ನಿಮ್ಮ @INCKarnataka ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? 4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023