ಎರಡು ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ನಂತರ ನ್ಯಾಷನಲ್ ಕಾನ್ಫರೆನ್ಸ್ನ ಮುಖ್ಯಸ್ಥರಾದ ಒಮರ್ ಅಬ್ದುಲ್ಲಾ ಮತ್ತು ಅವರ ತಂದೆ ಮತ್ತು ಫಾರೂಕ್ ಅಬ್ದುಲ್ಲಾ ಅವರನ್ನು ಮೊದಲ ಬಾರಿಗೆ ತಮ್ಮ ಪಕ್ಷದ ಮುಖಂಡರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ.
ಕೇಂದ್ರ ಸರ್ಕಾರವು ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮುನ್ನ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಬಂಧನದಲ್ಲಿರಿಸಿದ್ದರು. ಇದು ಮೂಲಭೂತ ಹಕ್ಕುಗಳ ನಿರಾಕರಣೆ ಎಂದು ಸರ್ಕಾರದ ವಿರುದ್ಧ ಸಾಕಷ್ಟು ಟೀಕೆ ಕೇಳಿಬಂದಿತ್ತು.
ಸಭೆಯ ನಂತರ, ನ್ಯಾಷನಲ್ ಕಾನ್ಫರೆನ್ಸ್ನ ಹಿರಿಯ ನಾಯಕರಾದ ಅಕ್ಬರ್ ಲೋನ್ ಮತ್ತು ಹಸ್ನೈನ್ ಮಸೂಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ “ಅವರ ಯೋಗಕ್ಷೇಮದ ಬಗ್ಗೆ ಕೇಳಲು ನಾವು ಬಂದಿದ್ದೇವೆ. ಯಾವುದೇ ರಾಜಕೀಯವನ್ನು ಚರ್ಚಿಸಲಾಗಿಲ್ಲ” ಎಂದು ಹೇಳಿದ್ದಾರೆ.
ಆದಾಗ್ಯೂ, “ಸಂಪೂರ್ಣ ನಾಯಕತ್ವ ಜೈಲಿನಲ್ಲಿರುವುದರಿಂದ ರಾಜ್ಯದ ಪಂಚಾಯತ್ ರಾಜ್ ವ್ಯವಸ್ಥೆಯ ಎರಡನೇ ಹಂತದ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಚುನಾವಣೆಯಲ್ಲಿ ಪಕ್ಷವು ಭಾಗವಹಿಸುವುದಿಲ್ಲ” ಎಂದು ಉಭಯ ನಾಯಕರು ಹೇಳಿದ್ದಾರೆ.
ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಚುನಾವಣೆ ಘೋಷಣೆಯಾದ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ನಿರ್ಬಂಧಗಳನ್ನು ಸರ್ಕಾರ ಸಡಿಲಗೊಳಿಸಿತ್ತು. ಜಮ್ಮುವಿನಲ್ಲಿ ಬಂಧನಕ್ಕೊಳಗಾದ ಎಲ್ಲ ರಾಜಕೀಯ ಮುಖಂಡರನ್ನು ಬಿಡುಗಡೆ ಮಾಡಲಾಗಿದ್ದರೆ, ಗವರ್ನರ್ ಸತ್ಯ ಪಾಲ್ ಮಲಿಕ್ ಅವರ ಸಲಹೆಗಾರ ಫಾರೂಕ್ ಖಾನ್, ಕಾಶ್ಮೀರಿ ನಾಯಕರನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು.
ಮಾಜಿ ಮುಖ್ಯಮಂತ್ರಿಗಳಾದ 83 ವರ್ಷದ ಫಾರೂಕ್ ಅಬ್ದುಲ್ಲಾ, ಅವರ ಪುತ್ರ ಒಮರ್ ಅಬ್ದುಲ್ಲಾ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥ ಮೆಹಬೂಬಾ ಮುಫ್ತಿ ಸೇರಿದಂತೆ ಸುಮಾರು 400 ರಾಜಕೀಯ ಮುಖಂಡರನ್ನು ಬಂಧನ ಅಥವಾ ಗೃಹಬಂಧನದಲ್ಲಿರಿಸಲಾಗಿದೆ.